ಕರ್ನಾಟಕ೦ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಶುರುವಾಗಿದ್ದು, ಮಹಾ ಸಿಎಂ ಒಂದೊಂದೇ ಕ್ಯಾತೆ ತೆಗೆಯುತ್ತಿದ್ದಾರೆ. ಇನ್ನು ಈ ಬಗ್ಗೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ನವದೆಹಲಿ, (ಜ.31): ಮಹಾರಾಷ್ಟ್ರ ಸಿಎಂ ಕೆಟ್ಟ ನಿರ್ಧಾರವನ್ನು ತೆಗೆದುಕೊಂಡಿದ್ದು, ಉದ್ಧವ್ ಠಾಕ್ರೆ ತಾಳ್ಮೆ ಕಳೆದುಕೊಂಡಿದ್ದಾರೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ದೇವೇಗೌಡ್ರು, ಮಹಾರಾಷ್ಟ್ರದ ಹೊಸ ನಕ್ಷೆಯನ್ನು ತಯಾರು ಮಾಡಿದ್ದಾರೆ. ಕರ್ನಾಟಕ ಪ್ರದೇಶ ಒಳಗೊಂಡು ನಕ್ಷೆಯನ್ನು ತಯಾರಿಸಿದ್ದಾರೆ. ಉದ್ಧವ್ ಠಾಕ್ರೆ ತಾಳ್ಮೆ ಕಳೆದುಕೊಂಡಿದ್ದಾರೆ ಎಂದು ಅನಿಸುತ್ತೆ ಎಂದರು.

ಗಡಿ ವಿವಾದ ಮುಗಿದ ಅಧ್ಯಾಯ ಎಂದು ಹೇಳಿದ್ದರು. ಹಾಗೆಂದು ಮೊರಾರ್ಜಿ ದೇಸಾಯಿ ಹೇಳಿದ್ದ ಸಂದರ್ಭದಲ್ಲಿ ನಾನೂ ಇದ್ದೆ. ಈ ವಿಚಾರ ಈಗಾಗಲೇ ಮುಕ್ತಾಯವಾಗಿದೆ. ಈಗ ಚುನಾವಣೆಗಾಗಿ ‌ಮಾತ್ರ ಮತ್ತೆ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟರು.

ಉದ್ಧವ್ ಉದ್ಧಟತನಕ್ಕೆ ಮರಾಠಿಗರಿಂದಲೇ ವಿರೋಧ: ಮೊದ್ಲು ಮಹಾರಾಷ್ಟ್ರದ ಸಮಸ್ಯೆ ಪರಿಹರಿಸಿ ಎಂದ ಜನ 

ಇನ್ನು ಮಹದಾಯಿ ವಿಚಾರವಾಗಿ ಗೋವಾ ಸಿಎಂ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ದೇವೇಗೌಡ, ಪ್ರಮೋದ್ ಸಾವಂತ್ ಭಾವನಾತ್ಮಕ ಹೇಳಿಕೆ ನೀಡಿದ್ದಾರೆ. ಈ ವಿಚಾರದಲ್ಲಿ ಸುಮ್ಮನೆ ಗೊಂದಲ ಸೃಷ್ಟಿ ಮಾಡಬಾರದು. ಜಲವಿವಾದ ಈಗಾಗಲೇ ಸುಪ್ರೀಂಕೋರ್ಟ್‌ನಲ್ಲಿದೆ ಎಂದು ಸಲಹೆ ನೀಡಿದರು.

ರಾಷ್ಟ್ರ ರಾಜಧಾನಿಯಲ್ಲಿ ಗಣರಾಜ್ಯೋತ್ಸವ ದಿನ ನಡೆದ ರೈತರ ಗಲಭೆಯ ಹಿಂದೆ ಯಾರಿದ್ದಾರೆಂದು ನೋಡಬೇಕು. ಗೃಹ ಸಚಿವರು ಹಲವು ವರದಿಗಳನ್ನು ಪಡೆದುಕೊಂಡಿದ್ದಾರೆ. ಕೇಂದ್ರ ಗೃಹ ಇಲಾಖೆ ಏನು ಹೇಳುತ್ತದೆಂದು ನೋಡಬೇಕಿದೆ. ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಅವರ ಕರೆಗೆ ಓಗೊಟ್ಟು ದೊಡ್ಡ ಪ್ರಮಾಣದಲ್ಲಿ ರೈತರು ಆಗಮಿಸುತ್ತಿದ್ದಾರೆ. ಸಂಸತ್‌ನಲ್ಲಿ ಕೂಡ ಈ ಬಗ್ಗೆ ಪ್ರಸ್ತಾಪವಾಗಲಿದೆ ಎಂದು ತಿಳಿಸಿದರು.