* ಕೊರೋನಾ ಲಾಕ್‌ಡೌನ್‌ನಿಂದಾಗಿ ರೈತರಿಗೆ ಸಂಕಷ್ಟ* ಬೆಳೆದ ಮಾಲಿಗೆ ಸೂಕ್ತ ಬೆಲೆ ಇಲ್ಲದೇ ರೈತರು ಕಂಗಾಲು* ರೈತರ ಕಷ್ಟಗಳನ್ನ ಮೋದಿ ಗಮನಕ್ಕೆ ತಂದ ಎಚ್‌ಡಿ ದೇವೇಗೌಡ

ಬೆಂಗಳೂರು, (ಮೇ. 25): ಕೊರೋನಾದಿಂದ ಮಾರುಕಟ್ಟೆಯಲ್ಲಿ ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಗಮನಕ್ಕೆ ತಂದಿದ್ದಾರೆ.

Add Asianetnews Kannada as a Preferred SourcegooglePreferred

ತೋಟಗಾರಿಕೆ ಬೆಳೆಗಳು ತೀವ್ರ ಕುಸಿತವಾಗಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಒತ್ತಾಯಿಸಿದ್ದಾರೆ. ಈ ಸಂಬಂಧ ಪ್ರಧಾನಿ ಅವರಿಗೆ ಪತ್ರ ಬರೆದಿರುವ ಗೌಡರು, ಸಣ್ಣ ಮತ್ತು ಮಧ್ಯಮ ಪ್ರಮಾಣದ ತೋಟಗಾರಿಕಾ ಬೆಳೆಗಾರರಿಗೆ ನೆರವು ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಧಾನಿ ನನ್ನ 6 ಸಲಹೆ ಸ್ವೀಕರಿಸಿದ್ದಾರೆ : ಮೋದಿ ಬಗ್ಗೆ ಎಚ್‌ಡಿಡಿ ಅಸಮಾಧಾನ

ಟೊಮೆಟೊ, ಹೂವು, ತರಕಾರಿ ಹಾಗೂ ಹಣ್ಣು ಸೇರಿದಂತೆ ವಿವಿಧ ತೋಟಗಾರಿಕೆ ಉತ್ಪನಗಳ ಬೆಲೆ ಕುಸಿತವಾಗಿದೆ. ಯೋಗ್ಯ ಬೆಲೆ ಸಿಗದೆ ಕಂಗೆಟ್ಟ ರೈತರು ಹಣ್ಣು ತರಕಾರಿ ಸುರಿದು ನಾಶಪಡಿಸಿರುವ ವರದಿಗಳು ಪ್ರಕಟವಾಗಿವೆ ಎಂದಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಗೆ ಐದಾರು ಜಿಲ್ಲೆಗಳಿಂದ ಹಣ್ಣು, ತರಕಾರಿ ಬರುತ್ತದೆ. ಇತ್ತೀಚೆಗೆ ಬೆಲೆ ಕುಸಿತದಿಂದ ರೈತರು ಟಮೊಟೊ ಸುರಿದು ನಾಶಪಡಿಸಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಹತ್ತು ಸಾವಿರ ಎಕರೆ ಪ್ರದೇಶದಲ್ಲಿ ಹೂವು, ಹಣ್ಣು, ತರಕಾರಿ ಬೆಳೆಯಲಾಗಿತ್ತಿದೆ. ಕೋವಿಡ್ ನಿಂದಾಗಿ ಮಾರುಕಟ್ಟೆ ಜಾಲವೇ ಅಸ್ತವ್ಯಸ್ತಗೊಂಡಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. 

ಕೋವಿಡ್ ಎರಡನೇ ಅಲೆ ಗ್ರಾಮೀಣ ಭಾಗದಲ್ಲೂ ವ್ಯಾಪಕವಾಗಿ ಹರಡಿರುವುದರಿಂದ ಜನರು ತೀವ್ರ ಸಂಕಷ್ಡ ಎದುರಿಸುವಂತಾಗಿದೆ. ಲಾಕ್ ಡೌನ್ ನಿಂದಾಗಿ ನಗರ ಪ್ರದೇಶಗಳಿಂದ ಜನರು ಗ್ರಾಮೀಣ ಭಾಗಕ್ಕೆ ಮರು ವಲಸೆ ಬಂದಿದ್ದಾರೆ. ಇದರಿಂದ ಗ್ರಾಮೀಣ ಭಾಗದ ಮೇಲೆ ಒತ್ತಡ ಹೆಚ್ಚಾಗಿದೆ. ಅಲ್ಲದೆ, ನಿರುದ್ಯೋಗದ ಪ್ರಮಾಣವೂ ಗಣನೀಯವಾಗಿ ಹೆಚ್ಚಳವಾಗಿದೆ.

ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯೂ ರೈತರ ನೆರವಿಗೆ ಬರುತ್ತಿಲ್ಲ. ಶೀಘ್ರವಾಗಿ ಹಾಳಾಗುವ ಹಣ್ಣು, ತರಕಾರಿ ದಾಸ್ತಾನು ಮಾಡಲು ಸೂಕ್ತ ಶೀಥಲ ಗೃಹಗಳ ವ್ಯವಸ್ಥೆಯೂ ಇಲ್ಲ. ಇಂತಹ ಸಂದರ್ಭದಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಮೂಲಕ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.