ಕಾಂಗ್ರೆಸ್ ಹಾಗೂ ಬಿಜೆಪಿ ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ 10 ಪ್ರಶ್ನೆಗಳನ್ನು ಕೇಳಿದ್ದಾರೆ. ಅದ್ಯಾವ ಪ್ರಶ್ನೆ ಇಲ್ಲಿದೆ..

 ಬೆಂಗಳೂರು (ಆ.22):  ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ಮತ್ತು ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್‌ಗೆ ಬಹಿರಂಗ ಪತ್ರ ಬರೆದಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಎರಡು ಪಕ್ಷಗಳಿಗೂ ತಲಾ ಐದು ಪ್ರಶ್ನೆಗಳನ್ನು ಕೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಘಟನೆಯನ್ನೇ ನೆಪ ಮಾಡಿಕೊಂಡು ರಾಷ್ಟ್ರೀಯ ಪಕ್ಷಗಳೆರಡು ಕೆಸರೆರಚಾಟದಲ್ಲಿ ತೊಡಗಿವೆ. ಈ ಮೂಲಕ ಜನರ ಮನಸ್ಸಿನಲ್ಲಿರಬಹುದಾದ ತಮ್ಮ ವಿಶ್ವಾಸಾರ್ಹತೆ, ಉತ್ತರದಾಯಿತ್ವವನ್ನು ಬಿಜೆಪಿ-ಕಾಂಗ್ರೆಸ್‌ ಪಕ್ಷಗಳೆರಡೂ ಕಳೆದುಕೊಂಡು ನಿರ್ವಾಣಗೊಂಡಿವೆ. ಪ್ರತಿ ಘಟನೆಯಲ್ಲೂ ರಾಜಕೀಯ ಧ್ರುವೀಕರಣಕ್ಕೆ ಬೇಕಾಗುವ ಅಂಶಗಳನ್ನು ಹುಡುಕಬೇಕಿದೆ ಎಂದು ಟ್ವೀಟ್‌ ಮೂಲಕ ಕಿಡಿಕಾರಿದ್ದಾರೆ.

ಕಾಂಗ್ರೆಸ್‌ಗೆ ಪ್ರಶ್ನೆಗಳು

* ಅನ್ಯಕೋಮಿನ ಜನರ ಅಪರಾಧ ಪ್ರಕರಣಗಳ ಸಂದರ್ಭದಲ್ಲಿ ಎದ್ದು ನಿಲ್ಲುವ ಕಾಂಗ್ರೆಸ್‌, ಪೌರತ್ವ ತಿದ್ದುಪಡಿ ಕಾಯ್ದೆಯಂತಹ ದುರಿತ ಕಾಲದಲ್ಲಿ ಅಲ್ಪಸಂಖ್ಯಾತರ ರಕ್ಷಣೆಗೆ ಏಕೆ ನಿಲ್ಲಲಿಲ್ಲ? ಮಂಗಳೂರಿನ ಗೋಲಿಬಾರ್‌ ಆಗಿ ಅಲ್ಪಸಂಖ್ಯಾತ ಯುವಕರು ಮೃತಪಟ್ಟಾಗ ಎಲ್ಲಿ ಹೋಗಿತ್ತು ಈ ಕಾಳಜಿ?

* ಗಲಭೆಯಲ್ಲಿ ನಷ್ಟವನ್ನು ಗಲಭೆಕೋರರಿಂದ ಸಂಗ್ರಹಿಸಲು ಹೊರಟ ಸರ್ಕಾರಕ್ಕೆ ಕಾಂಗ್ರೆಸ್‌ ಸಲಹೆಯೊಂದನ್ನು ನೀಡಿದೆ. ಇನ್ನೊಂದು ಕಡೆಯವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಹೇಳಿದೆ. ಹಾಗಾದರೆ ಆ ಇನ್ನೊಂದು ಕಡೆಯವರು ಯಾರು ಎಂದು ಕಾಂಗ್ರೆಸ್‌ ಧೈರ್ಯದಿಂದ ಹೇಳಬಹುದೇ?

* ಎಸ್‌ಡಿಪಿಐ ನಿಷೇಧಿಸುವ ವಿಚಾರ ಬಂದಾಗ ಕಾಂಗ್ರೆಸ್‌ ಸಿಡಿದೆದ್ದು ನಿಲ್ಲುತ್ತದೆ. ತಾಕತ್ತಿದ್ದರೆ ಅದನ್ನು ನಿಷೇಧಿಸಿ ಎಂದು ಆಡಳಿತದಲ್ಲಿರುವವರಿಗೆ ಸವಾಲೆಸೆಯುತ್ತದೆ. ಅದರ ನಿಷೇಧವಾಗುವುದು, ಆಗದೇ ಇರುವುದರಲ್ಲಿ ಕಾಂಗ್ರೆಸ್‌ಗೆ ಏನು ಲಾಭವಿದೆ?

* ಗಲಭೆಯಲ್ಲಿ ಏನೋ ರಾಜಕೀಯ ಷಡ್ಯಂತ್ರವಿದೆ ಎಂಬುದು ಕಾಂಗ್ರೆಸ್‌ ಆರೋಪ. ಆ ಷಡ್ಯಂತ್ರ ಕಾಂಗ್ರೆಸ್‌ ಒಳಗಿನದ್ದೋ, ಹೊರಗಿನದ್ದೋ? ಟಿಕೆಟ್‌ ಆಕಾಂಕ್ಷಿಗಳದ್ದೋ? ಗುಟ್ಟಾಗಿರುವ ಈ ವಿಷಯ ಬಹಿರಂಗಗೊಳಿಸಲು ಕಾಂಗ್ರೆಸ್‌ಗೆ ತಾಕತ್ತು ಇದೆಯೇ?

* ಆಂತರಿಕ ಸಮಸ್ಯೆಯನ್ನು ಗಲಭೆಯಾಗಿ ಪರಿವರ್ತಿಸಿ, ಎರಡು ಕೋಮುಗಳ ನಡುವೆ ಮನಸ್ತಾಪ ತಂದಿಟ್ಟು, ಸಾಮಾಜಿಕ ಸಾಮರಸ್ಯ ಹಾಳು ಮಾಡಿದ ಬಗ್ಗೆ ಕಾಂಗ್ರೆಸ್‌ಗೆ ಸ್ವಲ್ಪವಾದರೂ ಅಳುಕಿದೆಯೇ?

ಬಿಜೆಪಿಗೆ ಪ್ರಶ್ನೆಗಳು

* ಡಿ.ಜೆ.ಹಳ್ಳಿ ಪ್ರಕರಣ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಗೃಹ ಇಲಾಖೆ, ಗುಪ್ತಚರ ಇಲಾಖೆ ಮತ್ತು ಸರ್ಕಾರದ ಅತಿ ದೊಡ್ಡ ವೈಫಲ್ಯ. ಘಟನೆಗೆ ಸಂಬಂಧಿಸಿದಂತೆ ಗೃಹ ಇಲಾಖೆಯ ಯಾವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ?

* ಘಟನೆಯಲ್ಲಿ ಕಾಂಗ್ರೆಸ್ಸಿಗರೇ ದುಷ್ಕೃತ್ಯ ನಡೆಸಿದ್ದಾರೆ. ಕಾಂಗ್ರೆಸ್‌ನ ಕೈವಾಡವಿದೆ ಎಂದು ಬೀದಿಯಲ್ಲಿ ಹೇಳುತ್ತಿರುವ ಬಿಜೆಪಿ ಮುಖಂಡರು ತಮ್ಮ ಬಳಿಯಿರುವ ಕಾಂಗ್ರೆಸ್‌ ವಿರುದ್ಧದ ಸಾಕ್ಷಿಯನ್ನು ತನಿಖಾಧಿಕಾರಿಗಳಿಗೆ ಏಕೆ ಕೊಡಬಾರದು?

* ಗಲಭೆ ಸೃಷ್ಟಿಸಲೆಂದೇ ಅನ್ಯ ರಾಜ್ಯಗಳಿಂದ ಗೂಂಡಾಗಳನ್ನು ಕರೆತರಲಾಗಿತ್ತು ಎಂದು ಬಿಜೆಪಿ ಆರಂಭದಲ್ಲಿ ಹುಯಿಲೆಬ್ಬಿಸಿತು. ಹಾಗಾದರೆ, ಘಟನೆಗೆ ಸಂಬಂಧಿಸಿದಂತೆ ಈವರೆಗೆ ಬಂಧನಕ್ಕೊಳಗಾಗಿರುವ ಅನ್ಯ ರಾಜ್ಯದ ಗೂಂಡಾಗಳು ಎಷ್ಟುಜನ? ಬಂದಿದ್ದೇ ಆದರೆ, ವೈಫಲ್ಯ ಯಾರದ್ದು?

* ದೊಡ್ಡ ಅಂತರದ ಮತಗಳಿಂದ ಗೆದ್ದ ಶಾಸಕನೊಬ್ಬನ ಮನೆಗೆ ರಕ್ಷಣೆ ಮತ್ತು ಪೊಲೀಸ್‌ ಠಾಣೆಗೆ ರಕ್ಷಣೆ ನೀಡಲಾರದಷ್ಟುದುರ್ಬಲವಾಗಿರುವ, ಶಕ್ತಿಹೀನ ಸರ್ಕಾರ ಸಾಮಾನ್ಯರ ಹಿತ ಕಾಯಲು ಶಕ್ತವಾಗಿದೆಯೇ? ಇಲ್ಲವೇ, ಬಿಬಿಎಂಪಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಇಂತಹದ್ದೊಂದು ಗಲಭೆ ಬೇಕಾಗಿತ್ತೇ?

* ಕೋಮು ಸೂಕ್ಷ್ಮ ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನೂಕು ನುಗ್ಗಲಿನಲ್ಲೂ ಮುಂದೆ ಬರುವ ಬಿಜೆಪಿಗೆ ನೈತಿಕ ರಾಜಕಾರಣದ ಅರ್ಥವೇನಾದರೂ ಗೊತ್ತಿದೆಯೇ?