ಚನ್ನಪಟ್ಟಣ ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಸಿಎಂ ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಮಂಡ್ಯದಿಂದ ಸ್ಪರ್ಧಿಸಬಾರದು ಎಂದು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಆಗ್ರಹಿಸಿದರು.

ಚನ್ನಪಟ್ಟಣ (ಮಾ.23): ಚನ್ನಪಟ್ಟಣ ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಸಿಎಂ ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಮಂಡ್ಯದಿಂದ ಸ್ಪರ್ಧಿಸಬಾರದು ಎಂದು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಆಗ್ರಹಿಸಿದರು. ಕಾರ್ಯಕರ್ತರ ಸಭೆಯಲ್ಲಿ ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಕುರಿತು ವಿರೋಧ ವ್ಯಕ್ತಪಡಿಸಿದ ಕಾರ್ಯಕರ್ತರು, ನಾವು ಯಾವುದೇ ಕಾರಣಕ್ಕೂ ಕುಮಾರಸ್ವಾಮಿ ಅವರನ್ನು ಕ್ಷೇತ್ರದಿಂದ ಬಿಟ್ಟುಕೊಡುವುದಿಲ್ಲ. ಬೇಕಿದ್ದರೆ ನೀವೇ ಸ್ಪರ್ಧಿಸಿ ನಿಮ್ಮ ಪರ ನಾವೇ ನಿಂತು ಪ್ರಚಾರ ನಡೆಸುತ್ತೇವೆ ಎಂದು ಆಗ್ರಹಿಸಿದರು. ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ನಿಖಿಲ್‌, ಮಂಡ್ಯದಿಂದ ಕುಮಾರಸ್ವಾಮಿ ಅವರು ಸ್ಪರ್ಧಿಸುವ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ ಎಂದರು.

Add Asianetnews Kannada as a Preferred SourcegooglePreferred

ಕುಮಾರಸ್ವಾಮಿ ಚನ್ನಪಟ್ಟಣದಲ್ಲೇ ಇರಬೇಕೆಂದು ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟುಹಿಡಿದು, ಕುಮಾರಸ್ವಾಮಿ ಮಂಡ್ಯಕ್ಕೆ ಹೋಗದ ಕುರಿತು ಸ್ಪಷ್ಟಪಡಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿಗೆ ಮುತ್ತಿಗೆ ಹಾಕಿದರು. ಈ ವೇಳೆ ಕಾರ್ಯಕರ್ತರನ್ನು ಸಮಾಧಾನಪಡಿಸಿದ ನಿಖಿಲ್, ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧಿಸುವ ಕುರಿತು ಇನ್ನು ಯಾವುದೇ ತೀರ್ಮಾನವಾಗಿಲ್ಲ. ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಕುಮಾರಸ್ವಾಮಿ ಆಸ್ಪತ್ರೆಯಿಂದ ಹೊರಬಂದ ನಂತರ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಎಲ್ಲ ಅಭಿಪ್ರಾಯ ಪಡೆದ ನಂತರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಬೆಂ.ಗ್ರಾ.ದಲ್ಲಿ ಡಿ.ಕೆ.ಬ್ರದರ್ಸ್‌ರಿಂದ ಕುಕ್ಕರ್ ಹಂಚಿಕೆ: ಕುಮಾರಸ್ವಾಮಿ ಗಂಭೀರ ಆರೋಪ

ಕುಮಾರಸ್ವಾಮಿಗೆ ಯಶಸ್ವಿ ಹೃದಯ ಸರ್ಜರಿ: ಹೃದಯ ಸಂಬಂಧಿ ಸಮಸ್ಯೆಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ವೈದ್ಯರು ಕುಮಾರಸ್ವಾಮಿ ಆರೋಗ್ಯದ ಮೇಲೆ ನಿಗಾವಹಿಸಿದ್ದಾರೆ. ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆದು ಇದೇ 25ರಂದು ನಗರಕ್ಕೆ ಆಗಮಿಸಲಿದ್ದಾರೆ. ಬಳಿಕ ಲೋಕಸಭಾ ಚುನಾವಣೆಯತ್ತ ಗಮನಹರಿಸಲಿದ್ದಾರೆ.

ಸಿಎಂ ಆಗಲು ಎಚ್ಡಿಕೆಯೇ ನನ್ನ ಬಳಿ ಕೈ ಕಟ್ಟಿ ನಿಂತಿದ್ದರು: ಸಚಿವ ಚಲುವರಾಯಸ್ವಾಮಿ

ಕುಮಾರಸ್ವಾಮಿ ಶಸ್ತ್ರಚಿಕಿತ್ಸೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಅಭಿಮಾನಿಗಳು, ಹಿತೈಷಿಗಳು, ಜೆಡಿಎಸ್‌ನ ಎಲ್ಲ ಕಾರ್ಯಕರ್ತರು ಹಾಗೂ ರಾಜ್ಯದ ಸಮಸ್ತ ಜನತೆಯ ಹಾರೈಕೆ ಹಾಗೂ ಆ ಭಗವಂತನ ದಯೆಯಿಂದ ತಂದೆಯವರು ಆರೋಗ್ಯವಾಗಿದ್ದಾರೆ. ತಂದೆಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ, ಹರಸಿದ ಪ್ರತಿಯೊಬ್ಬರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇವೆ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ. ಸಂಸದ ಪ್ರಜ್ವಲ್‌ ರೇವಣ್ಣ ಸಹ ತಮ್ಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಜನತೆಯ ಹರಕೆ, ಆಶೀರ್ವಾದದಿಂದ ಎಚ್‌.ಡಿ.ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದು, ಸದ್ಯದಲ್ಲಿಯೇ ಮರಳಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.