ಸರ್ಕಾರದ ಮನೆಹಾಳು ನಿರ್ಧಾರ ಎಂದ ಕುಮಾರಸ್ವಾಮಿಯಿಂದ ಎಚ್ಚರಿಕೆ ಸಂದೇಶ
ಮನೆಬಾಗಿಲಿಗೆ ಮದ್ಯ ಮಾರಾಟಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಅಲ್ಲದೇ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಬೆಂಗಳೂರು, (ಆ.08): ಸಂಪನ್ಮೂಲ ಸಂಗ್ರಹಣೆಯಲ್ಲಿ ಮುಗ್ಗರಿಸಿ ಬಿದ್ದಿರುವ ಅಬಕಾರಿ ಇಲಾಖೆ ಆನ್ಲೈನ್ ಮೂಲಕ 'ಮನೆ ಬಾಗಿಲಿಗೆ ಮದ್ಯ' ಪೂರೈಸುವ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯುವ ಪ್ರಸ್ತಾವನೆ ಅಥವಾ ಚಿಂತನೆಯನ್ನು ಕೈಬಿಡುವಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಖಾಸಗಿ ಕಂಪನಿ ಜೊತೆ ಮಾತುಕತೆ ಹಾಗೂ ಅಬಕಾರಿ ಆಯುಕ್ತರು ಈ ಬಗ್ಗೆ ಒಲವು ಹೊಂದಿರುವುದು ನನ್ನ ಗಮನಕ್ಕೆ ಬಂದಿದೆ. ಸರ್ಕಾರ ಇಂತಹ ಅವಿವೇಕದ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ.
ಕೊರೊನಾ ಬಿಸಿ: ಮದ್ಯ ಮಾರಾಟದಲ್ಲಿ ಶೇ.30 ಕುಸಿತ..!
ಕೊರೋನಾ ವೈರಸ್ ನಂತರ ಎದುರಾದ ಲಾಕ್ ಡೌನ್ ಪರಿಸ್ಥಿತಿಯಿಂದ ಜನತೆ ಆದಾಯ ಇಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೈನಂದಿನ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮನೆಬಾಗಿಲಿಗೆ ಮದ್ಯ ಪೂರೈಸುವ ಮನೆಹಾಳು ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಬೆಕ್ಕಿಗೆ ಚೆಲ್ಲಾಟವಾದರೆ ಇಲಿಗೆ ಪ್ರಾಣ ಸಂಕಟ ಎಂಬಂತೆ ಆನ್ಲೈನ್ ಮೂಲಕ ಮದ್ಯ ಪೂರೈಸುವ ಚಿಂತನೆ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡಲಿದೆ. ತನ್ನ ಖಜಾನೆ ತುಂಬಿಸಿಕೊಳ್ಳಲು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವುದು ಸಲ್ಲ ಎಂದು ಸರ್ಕಾರದ ನಡೆಗೆ ಅಸಮಾಧಾನ ಹೊರಹಾಕಿದ್ದಾರೆ.