ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ತಮ್ಮ ಪಕ್ಷದಲ್ಲಿಯೇ ತಮಗೆ ಬೀಳುತ್ತಿರುವ ಒಳ ಏಟು  ಹೊಡೆತ ತಾಳಲಾಗದೇ, ಅದೆಲ್ಲವನ್ನೂ ಮುಚ್ಚಿಟ್ಟುಕೊಳ್ಳಲು ಬೊಬ್ಬೆ ಹೊಡೆಯುವುದು ಹತಾಶೆ ಮತ್ತು ರಾಜಕೀಯ ಅವಕಾಶವಾದಿತನ

ಬೆಂಗಳೂರು (ಸೆ.26): ಜಾತಿ ಗಣತಿ ವರದಿ ಬಗ್ಗೆ ಪ್ರೀತಿ, ಕಾಳಜಿ ತೋರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಧಾನ ಮಂಡಲದ ಕಲಾಪದಲ್ಲಿ ಏಕೆ ಪ್ರಸ್ತಾಪ ಮಾಡಲಿಲ್ಲ ಎಂದು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ತಮ್ಮ ಪಕ್ಷದಲ್ಲಿಯೇ ತಮಗೆ ಬೀಳುತ್ತಿರುವ ಒಳ ಏಟು ಹೊಡೆತ ತಾಳಲಾಗದೇ, ಅದೆಲ್ಲವನ್ನೂ ಮುಚ್ಚಿಟ್ಟುಕೊಳ್ಳಲು ಬೊಬ್ಬೆ ಹೊಡೆಯುವುದು ಹತಾಶೆ ಮತ್ತು ರಾಜಕೀಯ ಅವಕಾಶವಾದಿತನವಷ್ಟೇ ಎಂದು ಪ್ರತಿಕ್ರಿಯಿಸಿದ್ದಾರೆ.

Add Asianetnews Kannada as a Preferred SourcegooglePreferred

ಹಿಂದೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಸಚಿವರಾಗಿದ್ದ ಪುಟ್ಟರಂಗಶೆಟ್ಟಿಅವರನ್ನು ಹೆದರಿಸಿ, ಕುಮಾರಸ್ವಾಮಿ ವರದಿ ಬಿಡುಗಡೆ ಮಾಡಿಸಲಿಲ್ಲ ಎಂದು ಸಿದ್ದರಾಮಯ್ಯ ಅವರ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ಟ್ವೀಟರ್‌ನಲ್ಲಿ ತಿರುಗೇಟು ನೀಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡಿದ ಸಿದ್ದರಾಮಯ್ಯ

‘ಸುಳ್ಳನ್ನು ಪದೇ ಪದೇ ಹೇಳುತ್ತಾ ಜನರನ್ನು ದಾರಿತಪ್ಪಿಸುವ ‘ಸಿದ್ದಕಲೆ’ ಅವರಿಗೆ ಚೆನ್ನಾಗಿ ಸಿದ್ಧಿಸಿದೆ ಎಂಬುದನ್ನು ನಾನು ಬಲ್ಲೆ. ನಿತ್ಯವೂ ಸುಳ್ಳಿನ ಜಪ ಮಾಡುವುದೇ ಅವರಿಗೆ ನಿತ್ಯ ಕಾಯಕ. ಇದು ಸತ್ಯಕ್ಕೆ ಮತ್ತು ರಾಜ್ಯಕ್ಕೆ ಎಸಗುವ ಅಪಚಾರ ಮತ್ತು ಶಾಂತ ಸಮಾಜವನ್ನು ಒಡೆಯುವ ಹುನ್ನಾರವಾಗಿದೆ. ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ ಸಿದ್ದರಾಮಯ್ಯ ಅವರು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದರು. ಆತ ಕಾಂತರಾಜು ಅವರ ವರದಿಯ ಬಗ್ಗೆ ಅವರು ಪ್ರಸ್ತಾಪವನ್ನೇ ಮಾಡಲಿಲ್ಲ ಮತ್ತು ಚರ್ಚೆ ಮಾಡುವ ಧೈರ್ಯವನ್ನೇಕೆ ತೋರಲಿಲ್ಲ? ಹೀಗಾಗಿ ಕೋಪದ ಪ್ರಶ್ನೆ ಎಲ್ಲಿಂದ ಬರುತ್ತದೆ. ಆ ವರದಿಯಲ್ಲಿ ಸಹಿಯೇ ಇಲ್ಲ ಎಂದು ಸ್ವತಃ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರೇ ಹೇಳಿಬಿಟ್ಟಿದ್ದಾರೆ. ಮುಖ್ಯಮಂತ್ರಿಯಾಗಿದ್ದವರು, ಈಗ ಪ್ರತಿಪಕ್ಷ ನಾಯಕರೂ ಆಗಿರುವ ‘ರಾಜಕೀಯ ಪಂಡಿತ’ರಿಗೆ ಹೇಳಿಕೆ ನೀಡುವ ಮುನ್ನ ಆ ಬಗ್ಗೆ ಕನಿಷ್ಠ ಸಾಮಾನ್ಯ ಪ್ರಜ್ಞೆ ಇರಬೇಕಾಗಿತ್ತು ಎಂದು ಕಿಡಿಕಾರಿದ್ದಾರೆ.

ಇಂತಹ ಪ್ರಮುಖ ವರದಿಯನ್ನು ಸಲ್ಲಿಸಬೇಕಾಗಿದ್ದು ಮುಖ್ಯಮಂತ್ರಿಗಳಿಗೆ ವಿನಃ ಸಚಿವರಿಗಲ್ಲ. ಸುದೀರ್ಘ ರಾಜಕೀಯ ಅನುಭವ, ಸಂಸದೀಯ ಚರಿತ್ರೆ ಇದ್ದರಷ್ಟೇ ಸಾಲದು. ಕೊಂಚ ಸಾಮಾನ್ಯ ಜ್ಞಾನವೂ ಇರಲಿ. ಪದೇ ಪದೇ ‘ಸಿದ್ದಹಸ್ತಿಕೆ’ ತೋರುವ ಪ್ರಯತ್ನ ಬೇಡ ಎಂದು ಹೇಳಿದ್ದಾರೆ.

ಯಾರೋ ಕಟ್ಟಿದ ಹುತ್ತಕ್ಕೆ ಹೊಕ್ಕು ರಾಜಕೀಯ ಮರು ಹುಟ್ಟು ಪಡೆದು ಉಂಡ ಮನೆಗೆ ಕನ್ನ ಕೊರೆಯುವ ಮುನ್ನ ತಮ್ಮ ಹೇಳಿಕೆಗಳ ಬಗ್ಗೆ ಎಚ್ಚರಿಕೆ ವಹಿಸಲಿ. ಸಮಾಜದ ಶಾಂತಿಗೆ ಕೊಳ್ಳಿ ಇಡುವ ದುಸ್ಸಾಹಸಕ್ಕೆ ಕೈ ಹಾಕಿದರೆ ಜನರೇ ಉತ್ತರ ಕೊಡುತ್ತಾರೆ. ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿ ವಿಕೃತ ಆನಂದ ಅನುಭವಿಸುವುದು ಹೇಯ. ಮುಗ್ಧ ಜನರಲ್ಲಿ ಜಾತಿಯ ವಿಷಬೀಜ ಬಿತ್ತುವುದು ರಾಜಕೀಯ ನಿಕೃಷ್ಟತೆಯ ಪರಮಾವಧಿ ಎಂದು ಎಚ್‌.ಡಿ. ಕುಮಾರಸ್ವಾಮಿ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ.