Asianet Suvarna News Asianet Suvarna News

'ಸಿಡಿ ಹಗರಣ 'ಹನಿಟ್ರ್ಯಾಪ್'ನಂತೆ ಕಾಣುತ್ತಿದೆ, ನಾಚಿಕೆ ಪಡುವಂತಾ ಸ್ಥಿತಿಯಲ್ಲಿ ರಾಜ್ಯ ನಿಂತಿದೆ'

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಇದೀಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ಬಗ್ಗೆ ಜೆಡಿಎಸ್ ಪ್ರತಿಕ್ರಿಯೆ ಕೊಟ್ಟಿದೆ.

HD Kumaraswamy Talks about Ramesh jarkiholi sex Scandal Case rbj
Author
Bengaluru, First Published Mar 27, 2021, 4:25 PM IST

ಬೆಂಗಳೂರು, (ಮಾ.27): ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಇದೀಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಅದರಲ್ಲೂ ಆ ಸಿ.ಡಿ. ಲೇಡಿ ಎಲ್ಲಿದ್ದಾಳೆ ಎನ್ನುವುದು ಮಾತ್ರ ಯಾರಿಗೂ ಗೊತ್ತಿಲ್ಲ.

ಅದರಲ್ಲೂ ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇನ್ನು ಈ ಬಗ್ಗೆ ಜೆಡಿಎಸ್ ಟ್ವಿಟ್ಟರ್‌ ಮೂಲಕ ಪ್ರತಿಕ್ರಿಯಿಸಿದ್ದು ಹೀಗೆ...

ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ. ಪ್ರಕರಣದಲ್ಲಿ @DKShivakumar ಮತ್ತು @siddaramaiah ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ 'ಹನಿಟ್ರ್ಯಾಪ್‌' ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ ನಡುವೆ ರಾಷ್ಟ್ರದ ಎದುರು ನಾಚಿಕೆ ಪಡುವ ಸ್ಥಿತಿಯಲ್ಲಿ ರಾಜ್ಯ ನಿಂತಿದೆ.

ವಕೀಲರ ಮಹತ್ವದ ಮಾಹಿತಿ: ಎಸ್‌ಐಟಿ ಮುಂದೆ ಹಾಜರಾಗ್ತಾರಾ ಸಿ.ಡಿ. ಲೇಡಿ?

ರಾತ್ರಿ ಒಂದು ಆಡಿಯೊ ಬಿಡುಗಡೆಯಾಗುವುದು, ಬೆಳಗ್ಗೆ ಅದಕ್ಕೊಂದು ಸ್ಪಷ್ಟನೆಯ ವಿಡಿಯೊ ಬಿಡುಗಡೆಯಾಗುವುದು... ಇವೆಲ್ಲವನ್ನೂ ಗಮನಿಸುತ್ತಿದ್ದರೆ ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ. 

ಪ್ರಕರಣವನ್ನು ಅದರಪಾಡಿಗೆ ಬಿಟ್ಟು, ಆಗುವ ಬೆಳವಣಿಗೆಯನ್ನು ರಾಷ್ಟ್ರ ನೋಡಿ ಮನರಂಜನೆ ಪಡೆಯುವಂತೆ ಮಾಡುವುದು ರಾಜ್ಯಕ್ಕೆ, ನಮ್ಮ ಪೊಲೀಸರಿಗೆ ಮಾಡುವ ಅತಿ ದೊಡ್ಡ ಅಪಮಾನವಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ. ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು. 

ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ. 

ಲೈಂಗಿಕ ಪ್ರಕರಣವೊಂದರ ವರದಿಗಳು ನಿತ್ಯ ಪ್ರಕಟವಾಗುತ್ತಿದ್ದರೆ, ಅದರಿಂದ ಕುಟುಂಬಗಳು ಮತ್ತು ಮಕ್ಕಳ ಮೇಲೆ ಆಗುವ ಪರಿಣಾಮಗಳನ್ನು ನಾವು ಚಿಂತಿಸಬೇಕಿದೆ. ಇದಕ್ಕೆ ಅಂತ್ಯ ಹಾಡಬೇಕಿದ್ದರೆ ಸೂಕ್ತ ತನಿಖೆಯೊಂದೇ ದಾರಿ. ಇಲ್ಲವಾದರೆ, ಈ ಪ್ರಕರಣದ ಬೆಳವಣಿಗೆಗಳು ಮತ್ತಷ್ಟು ವಿಸ್ತಾರವಾಗುತ್ತ ನಾಗರಿಕ ಸಮಾಜ ನಾಚಿಕೆಯಲ್ಲಿ ದಿನ ಕಳೆಯಬೇಕಾಗುತ್ತದೆ.

"

Follow Us:
Download App:
  • android
  • ios