ಎಸ್ಎಸ್ಎಲ್ಸಿ ಪರೀಕ್ಷೆ: ರಾಜ್ಯ ಸರ್ಕಾರಕ್ಕೆ ಮಹತ್ವದ ಸಲಹೆ ಕೊಟ್ಟ ಕುಮಾರಸ್ವಾಮಿ
ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಠ 20 ದಿನ ಸಂಪೂರ್ಣ ಲಾಕ್ಡೌನ್ ಮಾಡಿ ಎಂದು ಹೇಳಿರುವ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ, ಎಸ್ಎಸ್ಎಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮಹತ್ವದ ಸಲಹೆ ಕೊಟ್ಟಿದ್ದಾರೆ.
ಬೆಂಗಳೂರು, (ಜೂನ್.23): ಕೊರೋನಾ ಭೀತಿ ನಡುವೆಯೂ ರಾಜ್ಯ ಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದು, ಈಗಾಗಲೇ ವೇಳಾಪಟ್ಟಿಯನ್ನು ಸಹ ಪ್ರಕಟಿಸಿದೆ.
ಇನ್ನು ಪರೀಕ್ಷೆ ಬಗ್ಗೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ಕೊರೋನಾ ಸಾಮುದಾಯಿಕವಾಗಿ ವ್ಯಾಪಕವಾಗಿ ಹರಡುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದೇ ಜುಲೈ 25 ಗುರುವಾರದಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.
SSLC ಪರೀಕ್ಷೆ ಬೇಡ, ಅನ್ಯರಾಜ್ಯಗಳ ರೀತಿ ರದ್ದು ಮಾಡಿ: ಪೋಷಕರ ಆಗ್ರಹ
ಕೊರೋನಾ ಸೋಂಕು ಏರುಗತಿಯಲ್ಲಿ ಸಾವಿನ ನಗಾರಿ ಬಾರಿಸುತ್ತಿರುವ ಇಂತಹ ಆತಂಕದ ಸಂದರ್ಭದಲ್ಲಿ ಸುಮಾರು 8 ಲಕ್ಷ ವಿದ್ಯಾರ್ಥಿಗಳು, ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ ಸೇರಿದಂತೆ 24 ಲಕ್ಷ ಮಂದಿಯ ಜೀವ ಮತ್ತು ಭವಿಷ್ಯದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಗೆ ಮಾರ್ಗಸೂಚಿ ಪ್ರಕಟಿಸಿದ ಶಿಕ್ಷಣ ಇಲಾಖೆ
ನೆರೆಯ ತೆಲಂಗಾಣ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ರದ್ದುಪಡಿಸಿ ಎಲ್ಲರನ್ನೂ ಉತ್ತೀರ್ಣಗೊಳಿಸಲಾಗಿದೆ. ಅದೇ ರೀತಿಯಲ್ಲಿ ರಾಜ್ಯ ಸರ್ಕಾರ ನಿರ್ಧಾರ ತಳೆಯಬಹುದು. ಒಂದು ವೇಳೆ ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಡೆಸಲಿ. ಸರ್ಕಾರ ಈ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಟ್ವೀಟ್ ಮೂಲಕ ಸಲಹೆ ನೀಡಿದ್ದಾರೆ.
ಏನಾದರೂ ಅವಘಡಗಳು ಸಂಭವಿಸಿದರೆ ಶಿಕ್ಷಣ ಸಚಿವರು ಮತ್ತು ರಾಜ್ಯ ಸರ್ಕಾರವೇ ಹೊಣೆ ಎಂದು ಸರ್ಕಾರಕ್ಕೆ ಕುಮಾರಸ್ವಾಮಿ ಎಚ್ಚರಿಕೆ ಸಹ ಕೊಟ್ಟಿದ್ದಾರೆ.
ಆದ್ರೆ, ರಾಜ್ಯ ಸರ್ಕಾರ ಹಲವು ವಿರೋಧದ ನಡುವೆಯೂ ಪರೀಕ್ಷೆ ನಡೆಸಲು ಮುಂದಾಗಿದ್ದು, ಇದೇ ಜೂನ್ 25ರಿಂದ ಜುಲೈ 3ರ ವರೆಗೆ ಸುಮರ್ 8.4 ಲಕ್ಷ ವಿದ್ಯಾರ್ಥಿಗಳಿಗೆ ಕೊರೋನಾ ಭೀತಿ ನಡುವೆಯೂ ಪರೀಕ್ಷೆ ಬರೆಯುವ ಪರಿಸ್ಥಿತಿ ಎದುರಾಗಿದೆ.