ಶಂಕೆ ವ್ಯಕ್ತಪಡಿಸಿದ ಎಚ್ಡಿಕೆ: ರಾಜಕೀಯ ತಿರುವು ಪಡೆದುಕೊಂಡ ಪಿಎಸ್ಐ ಆತ್ಮಹತ್ಯೆ!
ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪಿ.ಎಸ್.ಐ ಕಿರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ನಿಗೂಢವಾಗಿದೆ. ಅಲ್ಲದೇ ಈ ಪ್ರಕರಣ ರಾಜಕೀಯ ತಿರುವುಪಡೆದುಕೊಂಡಿದೆ.
ಬೆಂಗಳೂರು/ಹಾಸನ,(ಆ.01): ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪಿ.ಎಸ್.ಐ ಕಿರಣ್ ಕುಮಾರ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಬಿಜೆಪಿ ಸರ್ಕಾರ ಉನ್ನತಮಟ್ಟದ ತನಿಖೆಗೆ ತಕ್ಷಣ ಆದೇಶಿಸಬೇಕೆಂದು ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಈ ಹಿಂದೆ ಪೊಲೀಸ್ ಅಧಿಕಾರಿಗಳು ಆತ್ಮಹತ್ಯೆಗೆ ಶರಣಾದಾಗ ನ್ಯಾಯಸಮ್ಮತ ತನಿಖೆಗೆ ಒತ್ತಡ ಹೇರುತ್ತಿದ್ದ ಬಿಜೆಪಿ, ಈ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆಗೆ ತಕ್ಷಣ ಆದೇಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಹಿಂದಿನ ದಿನ ಕೊಲೆ ಪ್ರಕರಣ ಭೇದಿಸಿದ PSI ಮನೆಯಲ್ಲಿ ಆತ್ಮಹತ್ಯೆ
ಹಿಂದೆ ಗಣಪತಿ ಭಟ್, ಮಲ್ಲಿಕಾರ್ಜುನ ಬಂಡೆ, ಕಲ್ಲಪ್ಪ ಹಂಡಿಬಾಗ್ ಅವರ ಅಕಾಲಿಕ ಸಾವು ಮತ್ತು ಅನುಪಮಾ ಶೆಣೈ ಅವರ ರಾಜೀನಾಮೆ ವೇಳೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯದಾದ್ಯಂತ "ಜಾಗಟೆ" ಬಾರಿಸಿದ್ದ ಬಿಜೆಪಿ ಈಗ ಮೌನಕ್ಕೆ ಶರಣಾಗಿದೆ ಎಂದು ಬಿಎಸ್ವೈ ಸರ್ಕಾರಕ್ಕೆ ಟಾಂಗ್ ಕೊಟ್ಟರು.
ಹಿರಿಯ ಅಧಿಕಾರಿಗಳು ಕಿರುಕುಳ
ಪೊಲೀಸರು ಮತ್ತು ಹಿರಿಯ ಪೊಲೀಸ್ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಟ ಮಾಡುವ ಪರಿಸ್ಥಿತಿಯಲ್ಲಿ ಅವರ ಆತ್ಮಾಭಿಮಾನ, ಸ್ವಾಭಿಮಾನಕ್ಕೆ ಧಕ್ಕೆ ತರುವಂತೆ ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೇ ಪಿಎಸ್ಐ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಸೂಕ್ತ ತನಿಖೆಗೆ ಆದೇಶಿಸುವ ಮೂಲಕ ಕಿರಿಯ ಹಂತದ ಪೊಲೀಸ್ ಅಧಿಕಾರಿಗಳಲ್ಲಿ ನೈತಿಕ, ಸ್ಥೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದಿದ್ದಾರೆ
ಆತ್ಮಹತ್ಯೆ ಮಾಡಿಕೊಂಡ ಕಿರಣ್ ಕುಮಾರ್ ಅವರ ಮೊಬೈಲ್ ಫೋನನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಜಪ್ತಿ ಮಾಡಿದ್ದು ಹಲವು ಶಂಕೆಗಳಿಗೆ ಎಡೆಮಾಡಿಕೊಟ್ಟಿದೆ. ಇವರ ಸಾವಿಗೆ ಆಯಕಟ್ಟಿನ ಜಾಗದಲ್ಲಿ ಕುಳಿತ ಹಿರಿಯ ಪೊಲೀಸ್ ಅಧಿಕಾರಿಗಳ ದೌರ್ಜನ್ಯ ಹಾಗೂ ಬೆದರಿಕೆ ತಂತ್ರ ಕಾರಣ ಎಂಬ ಮಾಹಿತಿ ನನಗಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.
ಈಗೇಕೆ ಮೌನವಾಗಿದೆ ಬಿಜೆಪಿ? 'ಹಿಂದೆ ಗಣಪತಿ ಭಟ್, ಮಲ್ಲಿಕಾರ್ಜುನ ಬಂಡೆ, ಕಲ್ಲಪ್ಪ ಹಂಡಿಬಾಗ್ ಅವರ ಅಕಾಲಿಕ ಸಾವು ಮತ್ತು ಅನುಪಮಾ ಶೆಣೈ ಅವರ ರಾಜೀನಾಮೆ ವೇಳೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯದಾದ್ಯಂತ "ಜಾಗಟೆ" ಬಾರಿಸಿದ್ದ ಬಿಜೆಪಿ ಈಗ ಮೌನಕ್ಕೆ ಶರಣಾಗಿದೆ' ಎಂದು ಎಚ್ಡಿಕೆ ಪ್ರಶ್ನಿಸಿದ್ದಾರೆ.
ಸರ್ಕಾರ ದಿವ್ಯ ಮೌನಕ್ಕೆ ಶರಣಾಗಿರುವುದು ಸರಿಯಲ್ಲ
ಬೇರೆ ಪಕ್ಷಗಳ ಆಡಳಿತಾವಧಿಯಲ್ಲಿ ಅಧಿಕಾರಿಗಳ ನಿಗೂಢ ಸಾವಿಗೆ ಸರ್ಕಾರವೇ ಕಾರಣ ಎಂದು ಬೊಬ್ಬೆ ಹಾಕಿದ್ದ ಬಿಜೆಪಿ ವರ್ಷದಿಂದ ಆಡಳಿತ ಚುಕ್ಕಾಣಿ ಹಿಡಿದಿದೆ. ಈಗ ಪಿ.ಎಸ್.ಐ, ಇದಕ್ಕೂ ಮುನ್ನ ಐಎಎಸ್ ಅಧಿಕಾರಿ, ಕಳೆದ ವರ್ಷ ಐ.ಎಫ್.ಎಸ್. ಅಧಿಕಾರಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ಈ ಬಗ್ಗೆ ಸರ್ಕಾರ ದಿವ್ಯ ಮೌನಕ್ಕೆ ಶರಣಾಗಿರುವುದು ಸರಿಯಲ್ಲ ಎಂದು ಅಸಮಾಧನ ವ್ಯಕ್ತಪಡಿಸಿದರು.
"