ವಿಧಾನಸಭೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಶಾಸಕ!
ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ ಎಂದು ಬಿಜೆಪಿ ಶಾಸಕರೊಬ್ಬರು ಸ್ಯಾನಿಟೈಸರ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಭುವನೇಶ್ವರ, (ಮಾ.13): ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ ಎಂದು ಆರೋಪಿಸಿ ಒಡಿಶಾದ ಬಿಜೆಪಿ ಶಾಸಕ ವಿಧಾನಸಭೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ದಿಯೊದರ್ ಕ್ಷೇತ್ರದ ಬಿಜೆಪಿ ಶಾಸಕ ಸುಭಾಸ್ ಪಾಣಿಗ್ರಾಹಿ ಅವರೇ ಶುಕ್ರವಾರ ಬಜೆಟ್ ಅಧಿವೇಶನ ನಡೆಯುವ ವೇಳೆ ಹ್ಯಾಂಡ್ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಮ್ಮ ಭಾಗದ ಭತ್ತದ ಬೆಳೆಗಾರರ ಸಮಸ್ಯೆಗಳ ಬಗ್ಗೆ ಸದನದ ಗಮನ ಸೆಳೆಯಲು ಸುಭಾಸ್ ಪಾಣಿಗ್ರಾಹಿ ಅವರು ಈ ರೀತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ವಿಧಾನ ಪರಿಷತ್ ಉಪಸಭಾಪತಿ ಎಸ್. ಎಲ್ ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ..!
ದಿಬಗಡ್ ಪ್ರದೇಶದಲ್ಲಿ ಸುಮಾರು ಎರಡು ಲಕ್ಷ ಕ್ವಿಂಟಾಲ್ ಭತ್ತದ ಬೆಳೆ ಸರ್ಕಾರ ಖರೀದಿ ಕೇಂದ್ರ ತೆರೆಯದ್ದಕ್ಕೆ ಹಾಗೇ ಉಳಿದಿದೆ. ಇದರಿಂದ ಸಾವಿರಾರು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಖರೀದಿ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸುವ ಭರದಲ್ಲಿ ಸುಭಾಸ್ ಸ್ಯಾನಿಟೈಸರ್ ಕುಡಿದಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಸದನದಲ್ಲಿ ಬಿಜೆಪಿ ಶಾಸಕನ ವರ್ತನೆಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ವಿರೋಧ ವ್ಯಕ್ತವಾಗುತ್ತಿವೆ.