ಮಧುಬಂಗಾರಪ್ಪ ಬೆನ್ನಲ್ಲೇ ಇದೀಗ ಮತ್ತೋರ್ವ ಹಾಲಿ ಶಾಸಕರೊಬ್ಬರು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದು, ದಿನಾಂಕ ಸಹ ಫಿಕ್ಸ್ ಆಗಿದೆ.

ಬೆಂಗಳೂರು, (ಫೆ.17): ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ, ಹೊಸಕೋಟೆ ಪಕ್ಷೇತರ ಶಾಸಕ ಶರತ್​ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.

ಶರತ್​ ಬಚ್ಚೇಗೌಡ ಅವರು ಈಗಾಗಲೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರುಗಳನ್ನು ಭೇಟಿ ಚರ್ಚಿಸಿದ್ದು, ಮಾರ್ಚ್ ಮೊದಲ ವಾರದಲ್ಲಿ ಅಧಿಕೃತವಾಗಿ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.

Add Asianetnews Kannada as a Preferred SourcegooglePreferred

ಡಿಕೆಶಿ ಮಾಸ್ಟರ್ ಸ್ಟ್ರೋಕ್: ಬಿಜೆಪಿ MP ಸುಪುತ್ರ, ಹಾಲಿ ಶಾಸಕ ಕಾಂಗ್ರೆಸ್ ಸೇರ್ಪಡೆ ಫಿಕ್ಸ್

ಇದೇ ಫೆಬ್ರವರಿ ಕೊನೆಯಲ್ಲಿ ಶರತ್​ ಬಚ್ಚೇಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್​ ಸದಸ್ಯತ್ವ ಸ್ವೀಕಾರಿಸಲಿದ್ದಾರೆ. 

ಈ ಬಳಿಕ ಮಾರ್ಚ್​ ಮೊದಲ ವಾರದಲ್ಲಿ ಹೊಸಕೋಟೆಯಲ್ಲಿ ಬೃಹತ್ ಸಮಾವೇಶ ನಡೆಸಿ ಅಧಿಕೃತವಾಗಿ ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಂಟಿಬಿ ನಾಗರಾಜ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರಿಂದ ಮುಂದಿನ ರಾಜಕೀಯದ ಭವಿಷ್ಯಕ್ಕಾಗಿ ಶರತ್ ಬಚ್ಚೇಗೌಡ ಅವರು ಕಾಂಗ್ರೆಸ್‌ನತ್ತ ಮುಖಮಾಡಿದ್ದಾರೆ. ಅಲ್ಲದೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೊಸಕೋಟೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಶರತ್ ಬಚ್ಚೇಗೌಡ ಕಣಕ್ಕಿಳಿಯಲಿದ್ದಾರೆ.

ಇನ್ನು ಜೆಡಿಎಸ್ ಮಾಜಿ ಶಾಸಕ ಮಧುಬಂಗಾರಪ್ಪ ಅವರು ಸಹ ಕಾಂಗ್ರೆಸ್‌ನತ್ತ ಮುಖ ಮಾಡಿದ್ದು, ಈಗಾಗಲೇ ಕಾಂಗ್ರೆಸ್ ಸೇರ್ಪಡೆಗೆ ಮಾತುಕತೆಗಳು ಮುಗಿದಿವೆ. ಶೀಘ್ರದಲ್ಲೇ ಅವರೂ ಸಹ ಕೈ ಹಿಡಿಯಲಿದ್ದಾರೆ.