ಡಾ.ಪರಮೇಶ್ವರ್ ಅವರನ್ನು ಸಿಎಂ ಮಾಡಬೇಕು ಎಂಬ ರಾಜಣ್ಣ ಹೇಳಿಕೆಯ ಅರ್ಥ ಸಿದ್ದರಾಮಯ್ಯ ಅಧಿಕಾರದಿಂದ ಇಳಿಯಬೇಕೆಂದೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ತಾನು ಎಲ್ಲೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡಿಲ್ಲ, ಆದರೆ ರಾಜಣ್ಣ ಅವರೇ ಬದಲಾವಣೆಗೆ ಮುಂದಾಗಿದ್ದಾರೆ ಎಂದು ಸ್ಪಷ್ಟನೆ.
ಬೆಂಗಳೂರು (ಮೇ.21): ಮುಖ್ಯಮಂತ್ರಿ ಬದಲಾಗಬೇಕು ಎಂದು ನಾನು ಎಲ್ಲೂ ಹೇಳಿಲ್ಲ. ಇನ್ನು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಮಾಜಿ ಸಚಿವ ರಾಜಣ್ಣ ಹೇಳುವುದರಲ್ಲಿ ತಪ್ಪೇನಿಲ್ಲ. ಆದರೆ, ಡಾ। ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎನ್ನುವ ಮೂಲಕ ಸಿದ್ದರಾಮಯ್ಯ ಅವರು ಅಧಿಕಾರದಿಂದ ಇಳಿಯಬೇಕು ಎಂಬುದು ಅವರ ಮಾತಿನ ಅರ್ಥವೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ಕುಮಾರಪಾರ್ಕ್ನ ಸರ್ಕಾರಿ ನಿವಾಸದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಜಣ್ಣ ಅವರು ಮುಖ್ಯಮಂತ್ರಿ ಅವರನ್ನು ಬದಲಾವಣೆ ಮಾಡಲು ಏತಕ್ಕೆ ಮುಂದಾಗಿದ್ದಾರೆ? ಮುಖ್ಯಮಂತ್ರಿ ಮುಂದುವರಿಯಲಿ ಎಂದು ಹೇಳುವುದರಲ್ಲಿ ತಪ್ಪಿಲ್ಲ. ಆದರೆ, ಡಾ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಹೇಳುತ್ತಿದ್ದಾರೆ. ಹಾಗಾದರೆ, ಮುಖ್ಯಮಂತ್ರಿ ಅವರು ಅಧಿಕಾರದಿಂದ ಇಳಿಯಬೇಕು ಎಂಬುದು ಅವರ ಮಾತಿನ ಅರ್ಥವೇ? ಮುಖ್ಯಮಂತ್ರಿ ಬದಲಾಗಬೇಕು ಎಂದು ನಾನು ಎಂದಾದರೂ ಹೇಳಿದ್ದೀನಾ? ನಾನು ಎಲ್ಲೂ ಹೇಳಿಲ್ಲ. ರಾಜಣ್ಣ ಅವರೇ ಬದಲಾವಣೆ ಮಾಡಲು ಮುಂದಾಗಿದ್ದಾರೆ. ಅವರನ್ನೇ ಕೇಳಬೇಕು ಎಂದರು.
ಶಾಸಕರ ಸಚಿವ ಸ್ಥಾನದ ಬೇಡಿಕೆ ಕುರಿತು ಪ್ರತಿಕ್ರಿಯಿಸಿ, ಅದನ್ನು ಮುಖ್ಯಮಂತ್ರಿ ಅವರನ್ನೇ ಕೇಳಬೇಕು. ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಹೀಗಾಗಿ ಅವರನ್ನೇ ಕೇಳಿ ಎಂದು ಹೇಳಿದರು.


