ಟಿಕೆಟ್​​ಗಾಗಿ ನಮಗೆ ಹೆದರಿಸೋದು, ಬೆದರಿಸೋದು ಗೊತ್ತಿಲ್ಲ. ಸುಮ್ಮನಿದ್ದೇವೆ ಎಂದರೆ ಅದು ನಮ್ಮ ದೌರ್ಬಲ್ಯ ಅಂತ ಭಾವಿಸಬಾರದು. ಈಗಾಗಲೇ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾರೆ, ನಾನು ಹಾವೇರಿ, ಗದಗ ಜಿಲ್ಲೆಗಳ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ನನಗೆ ಹಾವೇರಿ ಲೋಕಸಭಾ ಟಿಕೆಟ್ ಕೊಡಬೇಕು: ಮಾಜಿ ಸಚಿವ ಬಿ.ಸಿ.ಪಾಟೀಲ್‌ 

ಹಿರೇಕೆರೂರು(ಹಾವೇರಿ)(ಮಾ.10): ನಾನು ಶಾಸಕ ಸ್ಥಾನ ತ್ಯಾಗ ಮಾಡಿ ಬಿಜೆಪಿಗೆ ಬಂದವನು, ನಮ್ಮಿಂದಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ ನಾಲ್ಕು ವರ್ಷ ಆಡಳಿತ ನಡೆಸಿದೆ. ಇದೀಗ ನಾವು ಮನೆಯಲ್ಲಿ ಕೂತಿದ್ದೇವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ನಮಗೆ ಟಿಕೆಟ್ ನೀಡಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್‌ ಆಗ್ರಹಿಸಿದ್ದಾರೆ.

Add Asianetnews Kannada as a Preferred SourcegooglePreferred

ಪಟ್ಟಣದ ನಿವಾಸದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ಟಿಕೆಟ್​​ಗಾಗಿ ನಮಗೆ ಹೆದರಿಸೋದು, ಬೆದರಿಸೋದು ಗೊತ್ತಿಲ್ಲ. ಸುಮ್ಮನಿದ್ದೇವೆ ಎಂದರೆ ಅದು ನಮ್ಮ ದೌರ್ಬಲ್ಯ ಅಂತ ಭಾವಿಸಬಾರದು. ಈಗಾಗಲೇ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾರೆ, ನಾನು ಹಾವೇರಿ, ಗದಗ ಜಿಲ್ಲೆಗಳ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ನನಗೆ ಹಾವೇರಿ ಲೋಕಸಭಾ ಟಿಕೆಟ್ ಕೊಡಬೇಕು. ಈ ಬಗ್ಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿದ್ದೇನೆ. ಆದರೆ, ನಾನು ಟಿಕೆಟ್ ಬೆನ್ನತ್ತಿಕೊಂಡು ಹೋಗುವನಲ್ಲ. ಕೇಂದ್ರ ನಾಯಕರನ್ನು ಭೇಟಿ ಮಾಡಿಲ್ಲ. ನನಗೆ ಕೊಡಬೇಕು ಅಂತ ವಾದ ಮಾಡುತ್ತಿದ್ದೇನೆ ಅಷ್ಟೆ ಎಂದು ತಿಳಿಸಿದರು.

ನಾನಲ್ಲ ನಾನಲ್ಲ ಅಂತಾನೇ ಚುನಾವಣೆಗೆ ರೆಡಿ ಆದ್ರಾ ಮಾಜಿ ಸಿಎಂ: ಹಾವೇರಿ ಅಖಾಡ ರೆಡಿ ಮಾಡಿಕೊಳ್ತಿದ್ದಾರಾ ಬೊಮ್ಮಾಯಿ..?

ಟಿಕೆಟ್ ಸಿಗಲಿಲ್ಲವೆಂದರೆ ಮುಂದಿನ ನಡೆ ಬಗ್ಗೆ ಕಾರ್ಯಕರ್ತರ ಜೊತೆ ಮಾತನಾಡುತ್ತೇನೆ. ನನಗೆ ನನ್ನದೇ ಆದ ಹಾದಿ ಇದೆ. ನಾನು ನಡೆದಿದ್ದೇ ದಾರಿ. ನನಗೆ ಹೆಬ್ಬಾರ್​, ಸೋಮಶೇಖರ್ ಹಾದಿ ಬೇಕಿಲ್ಲ. ಕೃಷಿ ಸಚಿವನಾಗಿ ರೈತರ ಹಿತ ಕಾದಿದ್ದೇವೆ. ಕಾಂತೇಶ್ ಅವರ ಬಗ್ಗೆ ಮಾತನಾಡಲು ಹೋಗಲ್ಲ. ಕಾಂತೇಶ್​​ಗೂ ನನಗೂ ಸಂಬಂಧ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಯಡಿಯೂರಪ್ಪನವರೇ ಕಾಂತೇಶ್ ಜೊತೆ ನಿಂತು ಗೆಲ್ಲಿಸಿಕೊಂಡು ಬರುವುದಾಗಿ ಮಾತುಕೊಟ್ಟಿದ್ದಾರೆ ಎಂಬ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಆ ಮಾತು ಈಶ್ವರಪ್ಪ ಅಲ್ಲ, ಯಡಿಯೂರಪ್ಪನವರೇ ಹೇಳಬೇಕು. ಅವರು ಹೇಳಿದರೆ ಆ ಪ್ರಕಾರ ನಡೆದುಕೊಳ್ಳಬೇಕಾಗುತ್ತದೆ. ನಮಗೆ ಈ ಬಗ್ಗೆ ಯಡಿಯೂರಪ್ಪ ಏನೂ ಹೇಳಿಲ್ಲ. ನಾನು ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದೇನೆ, ಈ ಚುನಾವಣೆಯಲ್ಲಿ ಅವಕಾಶ ಕೊಟ್ಟರೆ ಗೆಲ್ಲುತ್ತೇನೆ ಎಂದು ಕೇಳಿದ್ದೇನೆ ಎಂದರು.

ಕಾಂತೇಶ್​​ ಇಲ್ಲವೇ ಬೊಮ್ಮಾಯಿ ಅವರಿಗೆ ಟಿಕೆಟ್ ಕೊಟ್ಟರೆ ಕಾರ್ಯಕರ್ತರೊಂದಿಗೆ ಮಾತನಾಡಿ, ಮುಂದೆ ವಿಚಾರ ಮಾಡುತ್ತೇನೆ ಎಂದು ಇದೇ ವೇಳೆ ತಿಳಿಸಿದರು.