ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ಕುಟುಂಬದ ಒಬ್ಬ ಸದಸ್ಯರಿಗೆ ತಿಂಗಳಿಗೆ 10 ಕೆ.ಜಿ.ಅಕ್ಕಿ, ಮನೆಯ ಯಜಮಾನಿಗೆ 2000 ಧನಸಹಾಯ, 200 ವ್ಯಾಟ್‌ ವಿದ್ಯುತ್‌ ಉಚಿತ, ಸರ್ಕಾರಿ ಬಸ್‌ಗಳಲ್ಲಿ ಹೆಣ್ಣುಮಕ್ಕಳಿಗೆ ಉಚಿತ ಪ್ರಯಾಣ ಸೇರಿದಂತೆ ಕಾಂಗ್ರೆಸ್‌ ಅವಧಿಯಲ್ಲಿ ಜಾರಿಗೆ ತಂದಿದ್ದ 160 ಯೋಜನೆಗಳನ್ನು ಮರು ಜಾರಿ ಮಾಡುತ್ತೇವೆ.

ಶಿರಾ (ಮೇ.01): ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ಕುಟುಂಬದ ಒಬ್ಬ ಸದಸ್ಯರಿಗೆ ತಿಂಗಳಿಗೆ 10 ಕೆ.ಜಿ.ಅಕ್ಕಿ, ಮನೆಯ ಯಜಮಾನಿಗೆ 2000 ಧನಸಹಾಯ, 200 ವ್ಯಾಟ್‌ ವಿದ್ಯುತ್‌ ಉಚಿತ, ಸರ್ಕಾರಿ ಬಸ್‌ಗಳಲ್ಲಿ ಹೆಣ್ಣುಮಕ್ಕಳಿಗೆ ಉಚಿತ ಪ್ರಯಾಣ ಸೇರಿದಂತೆ ಕಾಂಗ್ರೆಸ್‌ ಅವಧಿಯಲ್ಲಿ ಜಾರಿಗೆ ತಂದಿದ್ದ 160 ಯೋಜನೆಗಳನ್ನು ಮರು ಜಾರಿ ಮಾಡುತ್ತೇವೆ. ಆದ್ದರಿಂದ ಮತದಾರರು ಈ ಬಾರಿ ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತನ್ನಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಪ್ರೆಸಿಡೆನ್ಸಿ ಶಾಲೆಯ ಪಕ್ಕದ ಆವರಣದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್‌ ಪಕ್ಷದ ಬೃಹತ್‌ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.

ಶಿರಾ ಕ್ಷೇತ್ರದಲ್ಲಿ ನೀರಾವರಿ ಕೆಲಸಗಳಾಗಿದ್ದರೆ, ಚೆಕ್‌ಡ್ಯಾಂ, ಬ್ಯಾರೇಜ್‌ಗಳಾಗಿದ್ದರೆ, ಕೆರೆ ತುಂಬಿಸುವ ಕೆಲಸಗಳಾಗಿದ್ದರೆ, ಹೇಮಾವತಿ ನೀರು ಹರಿದಿದ್ದರೆ, ಭದ್ರಾ ಮೇಲ್ದಂಡೆಯಿಂದ ಶಿರಾಕ್ಕೆ ನೀರು ಸಿಗುತ್ತಿದ್ದರೆ, ಎತ್ತಿನಹೊಳೆ ಆಗಿದ್ದರೆ, ರಸ್ತೆಗಳಾಗಿದ್ದರೆ ಎಲ್ಲದಕ್ಕೂ ಟಿ.ಬಿ. ಜಯಚಂದ್ರ ಕಾರಣ. ಟಿ.ಬಿ.ಜಯಚಂದ್ರ ಅವರು ಕಾನೂನು ಸಚಿವರಾಗಿದ್ದಾಗ 24 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದರು. ಶಿರಾ ಕ್ಷೇತ್ರಕ್ಕೆ ಕಳೆದ 10 ವರ್ಷಗಳಲ್ಲಿ 3200 ಕೋಟಿಗೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿ ಮಾಡಿದ್ದಾರೆ. ಅಂತಹವರು ಯಾವುದೇ ಕಾರಣಕ್ಕೂ ಸೋಲಬಾರದು ಎಂದರು.

ಬ್ರಿಟಿಷರಂತೆ ಕಾಂಗ್ರೆಸ್‌ನಿಂದ ಒಡೆದು ಆಳುವ ನೀತಿ: ಸಚಿವ ಸುಧಾಕರ್‌

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ನಾನು ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ. ಕಪ್ಪು ಹಣ ತಂದು ಪ್ರತಿ ಕುಟುಂಬಕ್ಕೆ 15 ಲಕ್ಷ ರು. ನೀಡುತ್ತೇನೆ. ಅಚ್ಚೇದಿನ್‌ ಮಾಡುತ್ತೇನೆ ಎಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದರು. ಆದರೆ ಇದುವರೆಗೂ ಕರ್ನಾಟಕ ಸರ್ಕಾರದ 40 ಪರ್ಸೆಂಟ್‌ ಕಮಿಷನ್‌ಗೆ ಯಾವುದೇ ಕ್ರಮಕೈಗೊಂಡಿಲ್ಲ. ಇಂತಹ ಸುಳ್ಳು ಹೇಳುವ ಪ್ರಧಾನಿಯನ್ನು ಇದುವರೆಗೂ ಭಾರತದಲ್ಲಿ ನಾನು ಕಂಡಿಲ್ಲ. ರಾಜ್ಯದಲ್ಲಿ ಆಪರೇಷನ್‌ ಕಮಲದ ಮೂಲಕ ಶಾಸಕರನ್ನು ಖರೀದಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯವನ್ನು ಲೂಟಿ ಮಾಡಿ 40 ರಿಂದ 50 ಪರ್ಸೆಂಟ್‌ ಕಮಿಷನ್‌ ಮೂಲಕ ಆಡಳಿತ ನಡೆಸುತ್ತಿದ್ದಾರೆ. ಇಂತಹ ಭ್ರಷ್ಟಬಿಜೆಪಿ ಸರ್ಕಾರವನ್ನು ಮತದಾರರು ತೊಲಗಿಸಿ ಎಂದರು.

ಮಾಜಿ ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ, ಶಿರಾ ಕ್ಷೇತ್ರವನ್ನು ಜಿಲ್ಲಾ ಕೇಂದ್ರದ ಮಟ್ಟಕ್ಕೆ ಅಭಿವೃದ್ಧಿ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊಡುಗೆ ಅಪಾರ. ಕಾಂಗ್ರೆಸ್‌ ಸರ್ಕಾರದ ಅಧಿಕಾರವಧಿಯಲ್ಲಿ ನಾನು ಕೇಳಿದ ಯಾವುದಕ್ಕೂ ಇಲ್ಲಾ ಎನ್ನದೆ ಅನುದಾನ ನೀಡುತ್ತಿದ್ದರು. ಭದ್ರಾ ಮೇಲ್ದಂಡೆ ಯೋಜನೆಗೆ 6000 ಕೋಟಿ ರು. ನೀಡಿ ತುಮಕೂರು ಭಾಗಕ್ಕೆ ನೀರು ಹರಿಸಲು ಕಾರಣರಾಗಿದ್ದಾರೆ. ಭದ್ರಾ ಮೇಲ್ದಂಡೆ, ಎತ್ತಿನಹೊಳೆ ಕಾಮಗಾರಿಗಳು ಸ್ಥಗಿತಗೊಂಡಿವೆ. ನಾನು ಚುನಾವಣೆಗೆ ನಿಂತ ಉದ್ದೇಶವೇ ಎತ್ತಿನ ಹೊಳೆ, ಭದ್ರಾ ಮೇಲ್ದಂಡೆ ನೀರು ತಂದು ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಲಿದೆ. ತಾಲೂಕಿನ ಎಲ್ಲಾ ಕೆರೆಗಳನ್ನು ತುಂಬಿಸುವ ಕೆಲಸ ಮಾಡುತ್ತೇನೆ ಎಂದರು.

35 ಅಡಿ ಉದ್ದದ ಕಂಬಳಿ ಹಾರ: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿ ಅಂಬೇಡ್ಕರ್‌ ಸರ್ಕಲ್‌ನಿಂದ ಸಮಾವೇಶದವರೆಗೂ ಅದ್ಧೂರಿ ಮೆರವಣಿಗೆ ಮಾಡಿದರು. ನಂತರ 35 ಅಡಿ ಉದ್ದದ ಕಂಬಳಿ ಹಾರ ಹಾಕಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.

ಮೇ.2ರಂದು ಚಿತ್ರದುರ್ಗಕ್ಕೆ ಪ್ರಧಾನಿ ಮೋದಿ ಭೇಟಿ: ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಸಮಾವೇಶದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಪ್ಪ, ವಿ.ಪ. ಸದಸ್ಯ ನಾಗರಾಜ್‌ ಯಾದವ್‌, ಆಂಧ್ರಪ್ರದೇಶದ ಮಾಜಿ ಸಚಿವ ರಘುವೀರ ರೆಡ್ಡಿ, ಮಾಜಿ ಶಾಸಕ ಸಾ.ಲಿಂಗಯ್ಯ, ಶಿರಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಪಿ.ಆರ್‌.ಮಂಜುನಾಥ್‌, ನಟರಾಜ್‌ ಬರಗೂರು, ನಗರಸಭಾ ಮಾಜಿ ಅಧ್ಯಕ್ಷ ಅಮಾನುಲ್ಲಾ ಖಾನ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಶೇಖರ್‌ ಗೌಡ, ಕೆಂಚಮಾರಯ್ಯ, ಕೆಪಿಸಿಸಿ ಸದಸ್ಯ ಟಿ.ಲೋಕೇಶ್‌, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ಲಾ ಖಾನ್‌, ಜಿ.ಪಂ. ಮಾಜಿ ಸದಸ್ಯ ಸಿ.ಆರ್‌.ಉಮೇಶ್‌, ಕಾನೂನು ಘಟಕದ ಅಧ್ಯಕ್ಷ ಎಚ್‌.ಗುರುಮೂರ್ತಿ ಗೌಡ, ಶ್ರೀರಾಮೇಗೌಡ, ಪಿ.ಎಸ್‌. ತ್ಯಾಗರಾಜ್‌, ಗುಳೀಗೇನಹಳ್ಳಿ ನಾಗರಾಜ್‌, ಡಾ.ಮಂಜುನಾಥ್‌, ಎ.ಎಂ.ಎ. ಕೆ. ಪ್ಯಾರು, ನಗರಸಭೆ ಸದಸ್ಯರಾದ ಅಜಯ್‌ಕುಮಾರ್‌, ಲಕ್ಷ್ಮೇಕಾಂತ್‌, ಪೂಜಾ ಪೆದ್ದರಾಜು ಸೇರಿದಂತೆ ಹಲವರು ಹಾಜರಿದ್ದರು.