ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ವಿಚಾರವಾಗಿ ಮಾತನಾಡಿ ಮುಖ್ಯಮಂತ್ರಿ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು ಎಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ದಾಬಸ್‍ಪೇಟೆ (ಡಿ.27): ಕಳೆದ ಮೂರುವರೆ ದಶಕದಿಂದ ಒಳ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದ್ದ ಸಂಘರ್ಷದ ಹೋರಾಟಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರ ಅಂತಿಮ ತೆರೆ ಎಳೆದು ಒಳ ಮೀಸಲಾತಿಯನ್ನು ಜಾರಿಗೆ ತಂದಿದೆ ಎಂದು ಆಹಾರ ನಾಗರೀಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

Add Asianetnews Kannada as a Preferred SourcegooglePreferred

ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಳಮೀಸಲಾತಿ ವಿಚಾರವಾಗಿ ನಮ್ಮ ಸರ್ಕಾರದ ಸಚಿವರಾದ ಮಹದೇವಪ್ಪ, ಶಿವರಾಜ್ ತಂಗಡಗಿ, ಪರಮೇಶ್ವರ್, ಆರ್.ಬಿ.ತಿಮ್ಮಾಪುರ್, ಪ್ರಿಯಾಂಕ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಮಂತ್ರಿಮಂಡಲದ ಸರ್ವರೂ ಸಹ ಸಹಕಾರ ನೀಡಿದ್ದರಿಂದ ನ್ಯಾಯಸಮ್ಮತವಾಗಿ ಬಗೆಹರಿಸಿದ್ದೇವೆ ಮೀಸಲಾತಿಯ ಪಾಲುದಾರರೆಲ್ಲರೂ ಅಣ್ಣ ತಮ್ಮಂದಿರಂತೆ ಇದ್ದೇವೆ ಯಾವುದೇ ಸಮಸ್ಯೆ ಇಲ್ಲ ಎಂದರು.

ಮೀಸಲಾತಿಯಲ್ಲಿ ಬರುವ ಕೊರಮ ಕೊರ್ಚ ಲಂಬಾಣಿ, ಭೋವಿ ಅಲೆಮಾರಿ ಸಮುದಾಯ ಎಲ್ಲರೂ ಸಹ ಒಳ ಮೀಸಲಾತಿಯನ್ನು ಒಪ್ಪಿಕೊಂಡಿರುವುದರಿಂದ ಹಲವು ವರ್ಷಗಳ ಸಂಘರ್ಷ ಕೊನೆಗೊಂಡಿದೆ ಇದರ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದರು.

ಹೈಕಮಾಂಡ್ ತೀರ್ಮಾನವೇ ಅಂತಿಮ

ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ವಿಚಾರವಾಗಿ ಮಾತನಾಡಿ ಮುಖ್ಯಮಂತ್ರಿ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು ಎಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ದರಾಗಿದ್ದೇವೆ. ಪಕ್ಷದಲ್ಲಿ ಮುಖ್ಯಮಂತ್ರಿ ವಿಷಯದಲ್ಲಿ ನಾನು ಏನನ್ನು ಹೇಳಲಾರೆ. ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ರವರಿಬ್ಬರ ಭೇಟಿಯಾಗಿದ್ದು ಸಂತೋಷದ ವಿಷಯ ಎಂದರು.