Congress ಅಧ್ಯಕ್ಷ ಪಟ್ಟ: ಶಶಿ ತರೂರ್ vs ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಈಗ ಅಧಿಕೃತ
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಅಕ್ಟೋಬರ್ 17 ರಂದು ನಡೆಯಲಿದ್ದು, ಅಕ್ಟೋಬರ್ 19ರಂದು ಫಲಿತಾಂಶ ಘೋಷಣೆಯಾಗಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಧುಸೂಧನ ಮಿಸ್ತ್ರಿ ಹೇಳಿದ್ದಾರೆ.
ನವದೆಹಲಿ: ದೇಶದ ಅತಿ ಹಳೆಯ ಪಕ್ಷವಾದ ಕಾಂಗ್ರೆಸ್ ಅಧ್ಯಕ್ಷ ಗಾದಿಗೇರಲು ಅಂತಿಮ ವೇದಿಕೆ ಸಿದ್ಧಗೊಂಡಿದೆ. ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಅಂತಿಮ ಕಣದಲ್ಲಿ ಉಳಿದುಕೊಂಡಿದ್ದಾರೆ. ಶನಿವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಯಾವುದೇ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯದ ಕಾರಣ ಇಬ್ಬರು ನಾಯಕರ ನಡುವೆ ಚುನಾವಣೆ ನಡೆಯಲಿದೆ. ಚುನಾವಣೆ ಅಕ್ಟೋಬರ್ 17ರಂದು ನಡೆಯಲಿದ್ದು, ಅಕ್ಟೋಬರ್ 19ರಂದು ಫಲಿತಾಂಶವನ್ನು ಘೋಷಿಸಲಾಗುತ್ತದೆ. ಅಕ್ಟೋಬರ್ 17 ರಂದು ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ನಡುವೆ ಚುನಾವಣಾ ಸ್ಪರ್ಧೆ ನಡೆಯಲಿದೆ ಎಂದು ಕಾಂಗ್ರೆಸ್ ಶನಿವಾರ ಘೋಷಿಸಿದ್ದು, ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಸಮಿತಿಯ ಮುಖ್ಯಸ್ಥ ಮಧುಸೂಧನ ಮಿಸ್ತ್ರಿ ಹೇಳಿದ್ದಾರೆ.
2000 ರಲ್ಲಿ ಜಿತೇಂದ್ರ ಪ್ರಸಾದ ಸೋನಿಯಾ ಗಾಂಧಿಯವರ ಕೈಯಲ್ಲಿ ಹೀನಾಯ ಸೋಲು ಅನುಭವಿಸಿದಾಗ ಪಕ್ಷದ ಉನ್ನತ ಹುದ್ದೆಗೆ ಕೊನೆಯ ಚುನಾವಣಾ ಸ್ಪರ್ಧೆ ನಡೆಯಿತು.
ಅಲ್ಲದೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದಿರಲು ನಿರ್ಧರಿಸಿದ ನಂತರ, 24 ವರ್ಷಗಳ ನಂತರ ಗಾಂಧಿಯೇತರರು ಕೈ ಅಧ್ಯಕ್ಷ ಚುಕ್ಕಾಣಿ ಹಿಡಿಯಲಿದ್ದಾರೆ. ಸದ್ಯ, ಇಬ್ಬರು ಅಭ್ಯರ್ಥಿಗಳು ಉಳಿದಿದ್ದಾರೆ ಎಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಇದನ್ನು ಓದಿ: Congress President Election: ನಾಮಪತ್ರ ಹಿಂಪಡೆಯಲು ಇಂದು ಕೊನೆ ದಿನ, ಗುಜರಾತ್ನಿಂದ ಖರ್ಗೆ ಪ್ರಚಾರ
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸೆಪ್ಟೆಂಬರ್ 22ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಗಾಂಧಿ ಕುಟುಂಬದವರನ್ನು ಹೊರತುಪಡಿಸಿ ಉಳಿದವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ಬೇಡಿಕೆಯಂತೆ ಈ ಚುನಾವಣೆ ನಡೆದಿದೆ. ಅಲ್ಲದೆ, 22 ವರ್ಷ ನಂತರ ಅಧ್ಯಕ್ಷ ಗಾದಿಗೆ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಅಧಿಕೃತ ಪ್ರಚಾರ ಪ್ರಕ್ರಿಯೆಗಳು ಇಂದಿನಿಂದ ಪ್ರಾರಂಭವಾಗುತ್ತವೆ. ಆದರೆ ಅಭ್ಯರ್ಥಿಗಳು ಈಗಾಗಲೇ ಪ್ರಚಾರವನ್ನು ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದರು. ಅಕ್ಟೋಬರ್ 17 ರಂದು ಎಲ್ಲ ರಾಜ್ಯಗಳ ರಾಜಧಾನಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಚುನಾವಣೆಗಳು ನಡೆಯಲಿದ್ದು, ರಹಸ್ಯ ಮತದಾನದ ಮೂಲಕ ಮತದಾನ ನಡೆಯಲಿದೆ ಎಂದು ಮಧುಸೂಧನ್ ಮಿಸ್ತ್ರಿ ಹೇಳಿದರು.
ಮತಪೆಟ್ಟಿಗೆಗಳನ್ನು ದೆಹಲಿಗೆ ತರಲಾಗುವುದು ಮತ್ತು ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ. ಅದೇ ದಿನ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಹಿರಿಯ ಕಾಂಗ್ರೆಸ್ ನಾಯಕ ತಿಳಿಸಿದ್ದಾರೆ. ಕರ್ನಾಟಕದಲ್ಲಿರುವ ಭಾರತ್ ಜೋಡೋ ಯಾತ್ರಾ ಕ್ಯಾಂಪ್ಸೈಟ್ಗೆ ಮತಪತ್ರಗಳನ್ನು ಕಳುಹಿಸಲಾಗುವುದು ಮತ್ತು ಯಾತ್ರಿಗಳಿಗಾಗಿ ಅಲ್ಲಿ ಬೂತ್ ಸ್ಥಾಪಿಸಲಾಗುವುದು ಎಂದೂ ಅವರು ಹೇಳಿದರು.
ದೆಹಲಿಯ ಎಐಸಿಸಿ ಪ್ರಧಾನ ಕಚೇರಿ ಸೇರಿದಂತೆ ರಾಜ್ಯಗಳಾದ್ಯಂತ 67 ಬೂತ್ಗಳನ್ನು ಸ್ಥಾಪಿಸಲಾಗುವುದು ಎಂದು ಮಿಸ್ತ್ರಿ ಹೇಳಿದರು ಮತ್ತು ಚುನಾವಣೆಗಳು "ಮುಕ್ತ ಪ್ರಕ್ರಿಯೆ" ಎಂದು ಪ್ರತಿಪಾದಿಸಿದರು. 9,000ಕ್ಕೂ ಹೆಚ್ಚು ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಪ್ರತಿನಿಧಿಗಳು ಮತದಾನದಲ್ಲಿ ಮತ ಚಲಾಯಿಸಲಿದ್ದಾರೆ.
ಇದನ್ನೂ ಓದಿ: ಖರ್ಗೆ ಅವರನ್ನೇ ಅಧಿಕೃತ ಅಭ್ಯರ್ಥಿ ಎಂದು ಬಿಂಬಿಸೋದೇಕೆ? ಹೈಕಮಾಂಡ್ಗೆ ಶಶಿ ತರೂರ್ ಪ್ರಶ್ನೆ
ಚುನಾವಣೆಯಲ್ಲಿ ಜಯಗಳಿಸಿ ಅಧ್ಯಕ್ಷರಾದರೆ ರಾಜಸ್ಥಾನದ ಉದಯಪುರದಲ್ಲಿ ನಡೆದ ಚಿಂತನಾ ಶಿಬಿರದಲ್ಲಿ ತೆಗೆದುಕೊಳ್ಳಲಾದ ಎಲ್ಲಾ ನಿರ್ಣಯಗಳನ್ನು ಜಾರಿಗೆ ತರುವುದಾಗಿ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದ್ದಾರೆ. ಇದೇ ವೇಳೆ ಸವಾಲಿನಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ. ಕೊನೆಯವರೆಗೂ ಹೋರಾಡುವೆ ಎಂದು ಶಶಿ ತರೂರ್ ಹೇಳಿದ್ದಾರೆ.