ಜೆಡಿಎಸ್ ಮುಖಂಡೆಯೋರ್ವರು ಇದೀಗ ಪಕ್ಷ ತೊರೆಯಲು ಸಜ್ಜಾಗಿದ್ದು ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ.  ಬಿಜೆಪಿ ಹಿರಿಯ ನಾಯಕರ ನೇತೃತ್ವದಲ್ಲಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ. 

ಬೆಂಗಳೂರು (ಜ.16): ಜೆಡಿಎಸ್‌ ಪರ ಪ್ರಬಲವಾಗಿ ಪ್ರಚಾರ ಕೈಗೊಂಡು ಕಳೆದ ಎರಡು ಬಾರಿ ಟಿಕೆಟ್‌ ಸಿಗದೆ ನಿರಾಸೆಗೊಳಗಾಗಿದ್ದ ಮಾಜಿ ಐಆರ್‌ಎಸ್‌ ಅಧಿಕಾರಿ ಡಾ.ಲಕ್ಷ್ಮೀ ಅಶ್ವಿನ್‌ ಗೌಡ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

Add Asianetnews Kannada as a Preferred SourcegooglePreferred

ಶನಿವಾರ ಮಧ್ಯಾಹ್ನ 2.30ಕ್ಕೆ ಪಕ್ಷದ ಕಚೇರಿಯಲ್ಲಿ ನಡೆಯುವ ಸರಳ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸಮ್ಮುಖದಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರಲಿದ್ದಾರೆ.

ಬಹಿರಂಗ ಹೇಳಿಕೆ ನೀಡುತ್ತಿರೋ ಅಸಮಾಧಾನಿತ ಶಾಸಕರಿಗೆ ಬಿಜೆಪಿ ಸಾರಥಿ ಪರೋಕ್ಷ ಎಚ್ಚರಿಕೆ ...

ಕಳೆದ ಲೋಕಸಭೆ ಚುನಾವಣೆ ವೇಳೆ ಮಂಡ್ಯ ಕ್ಷೇತ್ರದಿಂದ ಮತ್ತು ವಿಧಾನಸಭೆ ಚುನಾವಣೆ ವೇಳೆ ನಾಗಮಂಗಲ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಆಸಕ್ತಿ ಹೊಂದಿದ್ದರು. ಆದರೆ, ಜೆಡಿಎಸ್‌ ವರಿಷ್ಠರು ಎರಡು ಬಾರಿಯೂ ಟಿಕೆಟ್‌ ನೀಡದ ಕಾರಣ ಬೇಸರಗೊಂಡಿದ್ದರು. ಪಕ್ಷದ ವರಿಷ್ಠರ ನಡೆಯಿಂದ ಬೇಸತ್ತು ಜೆಡಿಎಸ್‌ ತೊರೆದು ಬಿಜೆಪಿಗೆ ಸೇರಲು ತೀರ್ಮಾನಿಸಿದ್ದಾರೆ. ಈ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಗೆ ಮುಂದಾಗಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನಿಟ್ಟೂರಿನ ಕೋಡಹಳ್ಳಿ ಗ್ರಾಮದ ಲಕ್ಷೀ ಅಶ್ವಿನ್‌ಗೌಡ ಎಂಬಿಬಿಎಸ್‌ ಪದವೀಧರೆ. ಸಮಾಜ ಸೇವೆ ಮಾಡಬೇಕು ಎಂಬ ಉದ್ದೇಶದಿಂದ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಐಆರ್‌ಎಸ್‌ ಅಧಿಕಾರಿಯಾಗಿದ್ದರು. ಜೆಡಿಎಸ್‌ ಬಗ್ಗೆ ಹೆಚ್ಚು ಒಲವು ಹೊಂದಿದ್ದ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಪಕ್ಷದ ಪರವಾಗಿ ಪ್ರಚಾರ ನಡೆಸಿದ್ದರು. ಅಲ್ಲದೆ, ಚುನಾವಣೆಗೆ ಸ್ಪರ್ಧಿಸಲು ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ, ಜೆಡಿಎಸ್‌ನಿಂದ ಟಿಕೆಟ್‌ ಸಿಗದ ಕಾರಣ ಬೇಸರಗೊಂಡು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಇದೇ ವೇಳೆ ಅಕ್ಷಯ ಗೋಲ್ಡ್‌ ಸಂಸ್ಥೆಯ ಮಾಲೀಕ ಸತೀಶ್‌ ಸಹ ಬಿಜೆಪಿಗೆ ಸೇರಲಿದ್ದಾರೆ.