ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಹಿರಿಯ ನಾಯಕ ಪ್ರಬಲ ಆಕಾಂಕ್ಷಿಯಾಗಿದ್ದು, ಈ ಬಗ್ಗೆ ಅವರು ಪ್ರತಿಕ್ರಿಯೆ ಕೊಟ್ಟಿದ್ದು ಹೀಗೆ.

ಹುಬ್ಬಳ್ಳಿ, (ಜ.07): ವಿಧಾನಪರಿಷತ್‌ ಸಭಾಪತಿ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡಲು ಮೂರೂ ಪಕ್ಷಗಳ ನಾಯಕರು ಒಲವು ಹೊಂದಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಅಚ್ಚರಿ ಹೇಳಿಕೆ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಗುರುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಭಾಪತಿ ಸ್ಥಾನಕ್ಕೆ ಹಿಂದೆ ನನ್ನ ಹೆಸರು ಪ್ರಸ್ತಾಪವಾದಾಗ ಎಲ್ಲ ಪಕ್ಷಗಳ ನಾಯಕರು ಸಹಮತ ವ್ಯಕ್ತಪಡಿಸಿದ್ದರು. ಎಚ್‌.ಡಿ. ದೇವೇಗೌಡ ಅವರೂ ನನ್ನ ಬಗ್ಗೆ ಒಲವು ಹೊಂದಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಜೆಡಿಎಸ್‌ಗೆ ಸಭಾಪತಿ ಸ್ಥಾನ ಕೊಡಬೇಕು ಎಂದು ನಿಯಮವೇನೂ ಇಲ್ಲ. ಆದರೆ, ನಮ್ಮನ್ನು ಬಿಟ್ಟು ಸಭಾಪತಿಯನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ ಎಂದರು.

ಜೆಡಿಎಸ್‌ ಸೇರಲು ಕಾಂಗ್ರೆಸ್ ಹಿರಿಯ ನಾಯಕ ಉತ್ಸುಕ: ದೇವೇಗೌಡ್ರನ್ನ ಭೇಟಿಯಾಗಿ ಮಾತುಕತೆ

ಪರಿಷತ್‌ನಲ್ಲಿ ಈಚೆಗೆ ನಡೆದ ಗಲಾಟೆ ಸಾರ್ವಜನಿಕ ವಲಯದಲ್ಲಿ ಬಹಳಷ್ಟು ಚರ್ಚೆಗೆ ಕಾರಣವಾಗಿದೆ. ಆ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಲು ಅವಿರೋಧ ಆಯ್ಕೆ ಮಾಡಬೇಕು ಎನ್ನುವ ಚರ್ಚೆಯೂ ನಡೆದಿದೆ ಎಂದು ಹೇಳಿದರು.

ಕೊನೆಯ ಅವಕಾಶವೆಂಬಂತೆ ನಿಮ್ಮನ್ನು ಸಭಾಪತಿ ಮಾಡಲು ಚಿಂತನೆ ನಡೆದಿದೆಯೇ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಕೊನೆಯ ಅವಕಾಶವೇನಲ್ಲ, ಮುಂದಿನ ಚುನಾವಣೆಯಲ್ಲಿಯೂ ಸ್ಪರ್ಧಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.