Asianet Suvarna News Asianet Suvarna News

JDS Pancharatna Yatra: ಇಂದಿನಿಂದ ಜೆಡಿಎಸ್‌ ರಥಯಾತ್ರೆ: ಕೋಲಾರದ ಕುರುಡುಮಲೆಯಿಂದ ಆರಂಭ

ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್‌ ರಣಕಹಳೆ ಮೊಳಗಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ‘ಪಂಚರತ್ನ ರಥಯಾತ್ರೆ’ ಕರ್ನಾಟಕ ರಾಜ್ಯೋತ್ಸವ ದಿನವಾದ ಮಂಗಳವಾರ ಕೋಲಾರ ಜಿಲ್ಲೆ ಮುಳಬಾಗಿಲಿನ ಕುರುಡುಮಲೆಯಿಂದ ಆರಂಭವಾಗಲಿದೆ. 

JDS Pancharatna Yatra Will Start On Nov 1 From Kurudumale Of Mulbagal gvd
Author
First Published Nov 1, 2022, 2:30 AM IST

ಬೆಂಗಳೂರು (ನ.01): ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್‌ ರಣಕಹಳೆ ಮೊಳಗಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ‘ಪಂಚರತ್ನ ರಥಯಾತ್ರೆ’ ಕರ್ನಾಟಕ ರಾಜ್ಯೋತ್ಸವ ದಿನವಾದ ಮಂಗಳವಾರ ಕೋಲಾರ ಜಿಲ್ಲೆ ಮುಳಬಾಗಿಲಿನ ಕುರುಡುಮಲೆಯಿಂದ ಆರಂಭವಾಗಲಿದೆ. ಬೆಳಗ್ಗೆ 9 ಗಂಟೆಗೆ ಕುರುಡುಮಲೆಯ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರು ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ. 

ಮೊದಲ ಹಂತದಲ್ಲಿ ಈ ಯಾತ್ರೆಯು ಡಿ.6ರವರೆಗೆ ನಡೆಯಲಿದ್ದು, ಹಳೆ ಮೈಸೂರು ಭಾಗದ ಒಟ್ಟು ಎಂಟು ಜಿಲ್ಲೆಗಳ 36 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಮುಂದಿನ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲಲೇಬೇಕೆಂಬ ಗುರಿ ಹೊಂದಿರುವ ಪಕ್ಷವು, ಸ್ವಂತ ಶಕ್ತಿಯ ಮೇಲೆ ಸರ್ಕಾರ ರಚಿಸಬೇಕೆಂಬ ಉದ್ದೇಶ ಹೊಂದಿದೆ. ಇದಕ್ಕಾಗಿ ಪಂಚರತ್ನ ಯಾತ್ರೆ ಹೆಸರಿನಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುತ್ತಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಉತ್ತರ ಭಾರತದ ಅಧಿಕಾರಿಗಳ ದರ್ಪಕ್ಕೆ ನಂದೀಶ್‌ ಬಲಿ: ಎಚ್‌.ಡಿ.ಕುಮಾರಸ್ವಾಮಿ

ಏನಿದು ಪಂಚರತ್ನ?: ನವ ಕರ್ನಾಟಕ ನಿರ್ಮಾಣಕ್ಕಾಗಿ ಮಹಾಯಾತ್ರೆ ಹೆಸರಿನಲ್ಲಿ ಈ ರಥಯಾತ್ರೆ ಕೈಗೊಳ್ಳಲಾಗುತ್ತಿದೆ. ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಪಂಚರತ್ನ ಪರಿಪೂರ್ಣ ಪರಿಹಾರ ಎಂದು ಬಿಂಬಿಸಲಾಗುತ್ತಿದೆ. ಶಿಕ್ಷಣವೇ ಆಧುನಿಕ ಶಕ್ತಿ, ಆರೋಗ್ಯ ಸಂಪತ್ತು, ರೈತ ಚೈತನ್ಯ, ವಸತಿಯ ಆಸರೆ ಹಾಗೂ ಯುವ ನವಮಾರ್ಗ ಮತ್ತು ಮಹಿಳಾ ಸಬಲೀಕರಣ ಪಂಚರತ್ನ ಯೋಜನೆಗಳಾಗಿವೆ. ಚುನಾವಣೆ ಪ್ರಣಾಳಿಕೆಯಲ್ಲಿ ಕೂಡ ಈ ಐದು ಅಂಶಗಳೇ ಪ್ರಮುಖ ಯೋಜನೆಗಳಾಗಿರುತ್ತವೆ ಎಂದು ಸೋಮವಾರ ಸುದ್ದಿಗಾರರಿಗೆ ಅವರು ವಿವರ ನೀಡಿದರು.

ಬಳಿಕ ಮಧ್ಯಾಹ್ನ 2 ಗಂಟೆಗೆ ಮುಳಬಾಗಿಲು ಪಟ್ಟಣದ ತಿರುಪತಿ ಬೈಪಾಸ್‌ ರಸ್ತೆಯಲ್ಲಿರುವ ಬಾಲಾಜಿ ಭವನದ ಪಕ್ಕದ ಜಾಗದಲ್ಲಿ ಬೃಹತ್‌ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಸುಮಾರು ಎರಡು ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ. ಸಮಾವೇಶದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ಮಾಜಿ ಸಚಿವರು, ಎಲ್ಲ ವಿಧಾನಸಭಾ ಕ್ಷೇತ್ರಗಳ ಸಂಭವನೀಯ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಅಕ್ಟೋಬರ್‌ 27ರಂದು ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪಂಚರತ್ನ ರಥಯಾತ್ರೆಗೆ ಸಾಂಕೇತಿಕವಾಗಿ ಚಾಲನೆ ನೀಡಲಾಗಿತ್ತು.

ಇಂದು ಎಚ್‌ಡಿಕೆ ಗ್ರಾಮ ವಾಸ್ತವ್ಯ: ಪಂಚರತ್ನ ರಥಯಾತ್ರೆ ಆರಂಭವಾದ ದಿನವಾದ ಮಂಗಳವಾರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮುಳಬಾಗಿಲು ವಿಧಾನಸಭೆ ಕ್ಷೇತ್ರದ ಗ್ರಾಮ ಒಂದರಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯದ ನಿಮಿತ್ತ ಕುಮಾರಸ್ವಾಮಿ ಅವರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಥವಾ ದೇಗುಲದಲ್ಲಿ ಉಳಿದುಕೊಳ್ಳಲಿದ್ದಾರೆ. ಅಂದು ಅವರು ಗ್ರಾಮದ ಜನರ ಜತೆ ಸಂವಾದ, ವಿಚಾರ ವಿನಿಮಯ ನಡೆಸುವರು. ಮುಖ್ಯವಾಗಿ ಮಹಿಳೆಯರು, ಯುವಕರು, ರೈತರು, ವೃದ್ಧರ ಜತೆ ಚರ್ಚೆ ನಡೆಸುವರು. ಹಳ್ಳಿಯ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯುವುದರ ಜತೆಗೆ, ಸ್ವತಃ ತಾವೇ ಗ್ರಾಮ ಸಂಚಾರ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಮುಳಬಾಗಿಲು ಕ್ಷೇತ್ರ ಅಭ್ಯರ್ಥಿ ಕೂಡ ಜತೆಯಲ್ಲಿ ಇರುತ್ತಾರೆ.

ಅಸೆಂಬ್ಲಿ ಚುನಾವಣೆಯಲ್ಲಿ ನಿಖಿಲ್‌ ಸ್ಪರ್ಧೆ ಖಚಿತಪಡಿಸಿದ ಎಚ್‌ಡಿಕೆ

ದಿನಕ್ಕೊಂದು ಕ್ಷೇತ್ರದಂತೆ ಕೋಲಾರ ಜಿಲ್ಲೆಯ ಮುಳಬಾಗಿಲು ಬಳಿಕ ಕ್ರಮವಾಗಿ ಬಂಗಾರಪೇಟೆ, ಮಾಲೂರು, ಕೋಲಾರ, ಶ್ರೀನಿವಾಸಪುರ, ನಂತರ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ, ಶಿಡ್ಲಘಟ್ಟ, ಬಾಗೇಪಲ್ಲಿ, ಗೌರಿಬಿದನೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲ, ತುಮಕೂರು ಜಿಲ್ಲೆಯ ತುಮಕೂರು ನಗರ, ಕೊರಟಗೆರೆ, ಮಧುಗಿರಿ, ಪಾವಗಡ, ಶಿರಾ, ಗುಬ್ಬಿ, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ತಿಪಟೂರು, ಹಾಸನ ಜಿಲ್ಲೆಯ ಬೇಲೂರು, ಅರಸೀಕೆರೆ, ಹಾಸನ, ಸಕಲೇಶಪುರ, ಅರಕಲಗೂಡು, ಹೊಳೆನರಸೀಪುರ, ಚನ್ನರಾಯಪಟ್ಟಣ, ತುಮಕೂರು ಜಿಲ್ಲೆಯ ಕುಣಿಗಲ್‌, ತುಮಕೂರು ಗ್ರಾಮಾಂತರ, ರಾಮನಗರ ಜಿಲ್ಲೆಯ ಮಾಗಡಿ, ರಾಮನಗರ, ಚನ್ನಪಟ್ಟಣ, ಕನಕಪುರ, ಆನೇಕಲ್‌ನಲ್ಲಿ ರಥಯಾತ್ರೆ ನಡೆಯಲಿದೆ.

ಏನಿದು ಪಂಚರತ್ನ?
1. ಸಂಪೂರ್ಣ ಉಚಿತ ಶಿಕ್ಷಣ
2. ಉಚಿತ ಆರೋಗ್ಯ ಸೇವೆ
3. ರೈತಪರ ಯೋಜನೆಗಳು
4. ಪ್ರತಿಯೊಬ್ಬರಿಗೂ ವಸತಿ
5. ಯುವ, ಮಹಿಳಾ ಯೋಜನೆ

Follow Us:
Download App:
  • android
  • ios