ಬೂತ್‌ ಮಟ್ಟದಿಂದ ಜೆಡಿಎಸ್ ಕಾರ್ಯಕರ್ತರ ಬಲ ಹೆಚ್ಚಿಸಿ ಮುಂಬರುವ ಚುನಾವಣೆಗೆ ಸಜ್ಜಾಗಬೇಕು ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. 

ಮೈಸೂರು (ಸೆ.19): ಬೂತ್‌ ಮಟ್ಟದಿಂದ ಜೆಡಿಎಸ್ ಕಾರ್ಯಕರ್ತರ ಬಲ ಹೆಚ್ಚಿಸಿ ಮುಂಬರುವ ಚುನಾವಣೆಗೆ ಸಜ್ಜಾಗಬೇಕು ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಜೆಡಿಎಸ್ ಪಕ್ಷವು ನಗರದ ಮಂಜುನಾಥಪುರದ ಎಚ್.ಕೆಂಪೇಗೌಡ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ನಗರ ಹಾಗೂ ಜಿಲ್ಲಾ ಘಟಕದ ಸದಸ್ಯತ್ವ ನೋಂದಣಿ ಮತ್ತು ಬೂತ್ ಸಮಿತಿ ಅಭಿಯಾನದಲ್ಲಿ ಅವರು ಮಾತನಾಡಿದರು. ಬೂತ್‌ ಮಟ್ಟದಿಂದ ಪಕ್ಷ ಬೆಳೆಸಲು ಮತ್ತು ಸದೃಢಗೊಳಿಸಲು ಪ್ರತಿ ಸಮಾಜವನ್ನೂ ಒಗ್ಗೂಡಿಸಬೇಕು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮಾರ್ಗದರ್ಶನದಲ್ಲಿ ಈ ಅಭಿಯಾನ ನಡೆಸಲಾಗುತ್ತಿದೆ ಎಂದರು.

Add Asianetnews Kannada as a Preferred SourcegooglePreferred

ಇಳಿ ವಯಸ್ಸಿನಲ್ಲೂ ದೇವೇಗೌಡರ ಉತ್ಸಾಹ ನಮ್ಮೆಲ್ಲರಿಗೂ ಪ್ರೇರಣೆ ಆಗಬೇಕು. ಸಿನಿಮಾರಂಗದಲ್ಲಿ ರಾಜಕುಮಾರ್ ಅವರಿಗೆ ಅಣ್ಣಾವ್ರು ಎಂಬ ಹೆಸರಿದೆ; ಪ್ರೀತಿ ಇದೆ. ಅಂತೆಯೇ ರಾಜಕಾರಣದಲ್ಲಿ ಯಾರಿಗಾದರೂ ಅಣ್ಣಾವ್ರು ಎಂಬ ಪಟ್ಟ ಸಿಕ್ಕಿದ್ದರೆ ಅದು ಕುಮಾರಸ್ವಾಮಿ ಅವರಿಗೆ ಮಾತ್ರ. ಜೆಡಿಎಸ್, ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ ನಿಜ. ಆದರೆ, ನಮ್ಮ ಪಕ್ಷದ ಸಿದ್ಧಾಂತದವನ್ನು ನಾವು ಬಿಟ್ಟಿಲ್ಲ. ಆ ಸಿದ್ಧಾಂತವನ್ನು ಪ್ರಚಾರ ಮಾಡಿ ತಳಮಟ್ಟದಿಂದ ಪಕ್ಷ ಸಂಘಟಿಸಿ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಬೇಕು ಎಂದರು. ಪ್ರತಿ ಬೂತ್ ನಲ್ಲಿ ಸರಾಸರಿ 25 ರಿಂದ 30 ಮಂದಿಯನ್ನಾದರೂ ನೋಂದಣಿ ಮಾಡಿಸಬೇಕು. ಅವರಿಗೊಬ್ಬ ನಾಯಕನನ್ನು ಮಾಡಿಕೊಳ್ಳಬೇಕು. ಈ ಮೂಲಕ, ಮುಂಬರುವ ಜಿಪಂ ಹಾಗೂ ತಾಪಂ ಚುನಾವಣೆಗೆ ಸಜ್ಜಾಗಬೇಕು ಎಂದರು.

ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು, ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಡಾ.ಕೆ. ಅನ್ನದಾನಿ, ಜೆಡಿಎಸ್ ಪ್ರಮುಖರ ಸಮಿತಿಯ ಅಧ್ಯಕ್ಷ ಜಿ.ಟಿ. ದೇವೇಗೌಡ ಶಾಸಕ ಜಿ.ಡಿ. ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ, ಪಕ್ಷದ ನಗರ ಘಟಕದ ಅಧ್ಯಕ್ಷ ಕೆ.ಟಿ. ಚಲುವೇಗೌಡ, ಜಿಲ್ಲಾ ಘಟಕದ ಅಧ್ಯಕ್ಷ ನರಸಿಂಹಸ್ವಾಮಿ, ಮುಖಂಡರಾದ ಕೆ.ಟಿ. ಶ್ರೀಕಂಠೇಗೌಡ, ಎಚ್.ಕೆ. ರಾಮು, ಪ್ರೇಮಾ ಶಂಕರೇಗೌಡ, ಆರ್. ಲಿಂಗಪ್ಪ, ಎಂ. ಅಶ್ವಿನ್ ಕುಮಾರ್, ಸತೀಶ್, ಕೃಷ್ಣ, ಶಿವಣ್ಣ, ಭಾಗ್ಯವತಿ, ರಾಜೇಶ್ವರಿ ಸೋಮು, ಎಸ್.ಬಿ.ಎಂ ಮಂಜು, ಎಂ.ಜೆ. ರವಿಕುಮಾರ್, ಅಶ್ವಿನಿ ಪಾಲ್ಗೊಂಡಿದ್ದರು.

ಚಿಕ್ಕಪ್ಪನ ಕ್ರಷರ್‌ಗೆ ರಸ್ತೆ ಮಾಡಲು ದಲಿತರ ಜಮೀನಿನಲ್ಲಿ ಫಸಲು ನಾಶ: ಶಾಸಕ ಗಣೇಶ್ ಪ್ರಸಾದ್ ವಿರುದ್ದ ಗಂಭೀರ ಆರೋಪ

ನಾಗಮಂಗಲ ಗಲಭೆ ವಿಷಯದಲ್ಲಿ ಗುಪ್ತಚರ ಇಲಾಖೆ ವಿಫಲ: ನಾಗಮಂಗಲದಲ್ಲಿ ಗಣೇಶ ಗಲಾಟೆ ವಿಚಾರ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು. ಸುದ್ದಿಗಾರರೊಡನೆ ಮಾತನಾಡಿದ ಅವರು, ಗಣೇಶನ ಗಲಾಟೆ ವಿಷಯದಲ್ಲಿ ಒಂದು ಸಮುದಾಯದ ಓಲೈಕೆಗಾಗಿ ಇನ್ನೊಂದು ಸಮುದಾಯ ಕೈ ಬಿಟ್ಟಿದ್ದಾರೆ. ಮಂಡ್ಯದ ಜನ ಪ್ರಬುದ್ಧರಾಗಿದ್ದು, ಎಲ್ಲವನ್ನೂ ಗಮನಿಸುತ್ತಿದ್ದಾರೆ. ರಾಜ್ಯ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಅಂತ ಗೊತ್ತಾಗುತ್ತಿದೆ ಎಂದು ಕಿಡಿಕಾರಿದರು. ಸರ್ಕಾರ ಹಗರಣದಲ್ಲಿ ನಿರತವಾಗಿದೆ. ಅದನ್ನು ಮುಚ್ಚಿಕೊಳ್ಳಲು ಈ ರೀತಿಯ ಗಲಾಟೆ ಇತ್ಯಾದಿಗಳನ್ನು ನಡೆಸುತ್ತಿದೆ. ಎಂದು ಅವರು ಟೀಕಿಸಿದರು.