‘ಒಕ್ಕೂಟ ಸರ್ಕಾರದ ಅಣತಿಯಂತೆ ವಿಶ್ವ ಹಿಂದಿ ದಿವಸದ ಬಗ್ಗೆ ಉತ್ಸುಕರಾಗಿರುವ ರಾಜ್ಯ ಬಿಜೆಪಿಯವರೇ, ನಿಮ್ಮ ಗುಲಾಮಗಿರಿಗೆ ಕನ್ನಡಿಗರ ಒಕ್ಕೊರಲ ಧಿಕ್ಕಾರ. ಹಿಂದಿ ಹೇರಿಕೆಯ ಹುನ್ನಾರಕ್ಕೆ ನಮ್ಮ ಭಾಷೆಯನ್ನು ಬಲಿಕೊಡುವ ನಿಮ್ಮ ‘ಬೆನ್ನು ಮೂಳೆ’ ಇಲ್ಲದ ರಾಜಕೀಯವನ್ನು ಬಲವಾಗಿ ಖಂಡಿಸುತ್ತೇವೆ’ ಎಂದು ಜೆಡಿಎಸ್‌ ಟೀಕಾಪ್ರಹಾರ ನಡೆಸಿದೆ.

ಬೆಂಗಳೂರು (ಜ.11) : ‘ಒಕ್ಕೂಟ ಸರ್ಕಾರದ ಅಣತಿಯಂತೆ ವಿಶ್ವ ಹಿಂದಿ ದಿವಸದ ಬಗ್ಗೆ ಉತ್ಸುಕರಾಗಿರುವ ರಾಜ್ಯ ಬಿಜೆಪಿಯವರೇ, ನಿಮ್ಮ ಗುಲಾಮಗಿರಿಗೆ ಕನ್ನಡಿಗರ ಒಕ್ಕೊರಲ ಧಿಕ್ಕಾರ. ಹಿಂದಿ ಹೇರಿಕೆಯ ಹುನ್ನಾರಕ್ಕೆ ನಮ್ಮ ಭಾಷೆಯನ್ನು ಬಲಿಕೊಡುವ ನಿಮ್ಮ ‘ಬೆನ್ನು ಮೂಳೆ’ ಇಲ್ಲದ ರಾಜಕೀಯವನ್ನು ಬಲವಾಗಿ ಖಂಡಿಸುತ್ತೇವೆ’ ಎಂದು ಜೆಡಿಎಸ್‌ ಟೀಕಾಪ್ರಹಾರ ನಡೆಸಿದೆ.

Add Asianetnews Kannada as a Preferred SourcegooglePreferred

ಈ ಸಂಬಂಧ ಟ್ವೀಟ್‌(Tweet) ಮಾಡಿರುವ ಜೆಡಿಎಸ್‌(JDS), ‘ಬಹುಭಾಷೆಯ, ಬಹುಸಂಸ್ಕೃತಿಯ ದೇಶ ನಮ್ಮ ಭಾರತ ಕೇವಲ ಒಂದು ಭಾಷೆಯನ್ನು ಮೆರೆಸುವ ಈ ಕೀಳುಮಟ್ಟದ ರಾಜಕೀಯ ಏಕೆ? ಒಂದು ಭಾಷೆಯ ವೈಭವೀಕರಣದಿಂದಾಗಿ ಭಾರತದ ಅನ್ಯ ಭಾಷೆಗಳ ಶ್ರೀಮಂತಿಕೆಯನ್ನು ಗೌಣವಾಗಿಸುವ ಈ ಹುನ್ನಾರಕ್ಕೆ ಕನ್ನಡಿಗ(Kannadiga)ರ ಪ್ರಬಲ ವಿರೋಧ ಇದೆ. ನಮ್ಮ ದೇಶದ ಸಂವಿಧಾನದಲ್ಲಿ ರಾಷ್ಟ್ರಭಾಷೆಯೆಂಬ ಪರಿಕಲ್ಪನೆಯೇ ಇಲ್ಲ. ಹಾಗಿದ್ದಾಗ, ಯಾವಾಗಿಂದ ಹಿಂದಿ ರಾಷ್ಟ್ರಭಾಷೆಯಾಯಿತು? ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಿಂದಿಯನ್ನು ಈ ಪರಿ ವಿಜೃಂಭಿಸುವ ನಿಮ್ಮ ರಾಜಕೀಯವನ್ನು ಸ್ವಾಭಿಮಾನಿ ಕನ್ನಡಿಗರು ಒಪ್ಪುವುದಿಲ್ಲ. ಇದಕ್ಕೆ ತಕ್ಕ ಪ್ರತಿಫಲ ಅನುಭವಿಸುತ್ತೀರಿ’ ಎಂದು ಕಿಡಿಕಾರಿದೆ.

ಮೂರು ತಿಂಗಳಲ್ಲಿ ನಾನೇ ಮುಖ್ಯಮಂತ್ರಿ: ಕುಮಾರಸ್ವಾಮಿ

‘ಹಿಂದಿ ಭಾಷಿಕ ಪ್ರದೇಶಗಳು ಕನ್ನಡವೂ ಸೇರಿದಂತೆ ಭಾರತದ ಭಿನ್ನ ಭಾಷೆಗಳ ದಿವಸವನ್ನು ಅಚರಿಸುತ್ತವೆಯೇ? ಕೇವಲ ಒಂದು ಭಾಷೆಗೆ ಈ ಮಟ್ಟದ ಆದ್ಯತೆ ಏಕೆ? ಕೇಂದ್ರ ಬಿಜೆಪಿಯ ತಾಳಕ್ಕೆ ಕುಣಿಯುವುದು ಬಿಟ್ಟು ಬೇರೇನೂ ಬಾರದ ರಾಜ್ಯ ಬಿಜೆಪಿಯವರೇ, ನಿಮ್ಮ ಅಭಿಮಾನ ಶೂನ್ಯ ನಡೆಯು ತಲೆತಗ್ಗಿಸುವಂತಹದ್ದು. ‘ನನ್ನ ಕನ್ನಡಕ್ಕಿಂತ ಯಾರೂ ದೊಡ್ಡವರಲ್ಲ’ ಎಂದ ಕುವೆಂಪು ಅವರ ಕನ್ನಡಾಭಿಮಾನ ನಮ್ಮದೂ ಕೂಡ. ಭಾರತದ ಅಸಂಖ್ಯ ಶ್ರೀಮಂತ ಭಾಷೆಗಳಲ್ಲಿ ಹಿಂದಿಯೂ ಒಂದು. ಅದರ ಹೊರತಾಗಿ ಹಿಂದಿ ಹೇರಿಕೆ, ವೈಭವೀಕರಣದ ಯಾವುದೇ ಕುತಂತ್ರದ ರಾಜಕೀಯಕ್ಕೆ ಧಿಕ್ಕಾರವೇ ಸೈ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.