13ಕ್ಕೂ 13 ಸ್ಥಾನಗಳಲ್ಲಿ ಜೆಡಿಎಸ್ ಗೆಲುವು: ಆಡಳಿತರೂಢ ಬಿಜೆಪಿಗೆ ಭಾರೀ ಮುಖಭಂಗ
13ಕ್ಕೂ 13 ಸ್ಥಾನಗಳಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ. ಈ ಮೂಲಕ ಜೆಡಿಎಸ್ ಭದ್ರಕೋಟೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಇದರಿಂದ ಆಡಳಿತರೂಢ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.
ಹಾಸನ, (ಸೆ. 25): ಹಾಸನ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಹೆಚ್ಡಿಸಿಸಿ) ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, 13ಕ್ಕೂ 13 ಸ್ಥಾನಗಳಲ್ಲಿಯೂ ಜೆಡಿಎಸ್ ಗೆಲುವು ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ಮಾಡಿದೆ.
ಒಟ್ಟು 13 ನಿರ್ದೇಶಕರ ಸ್ಥಾನಗಳ ಪೈಕಿ 9ರಲ್ಲಿ ಜೆಡಿಎಸ್ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ 4 ಸ್ಥಾನಗಳಿಗೆ ಇಂದು (ಶುಕ್ರವಾರ) ಚುನಾವಣೆ ನಡೆದಿದ್ದು, ಎಲ್ಲಾ ಸ್ಥಾನಗಳು ಜೆಡಿಎಸ್ ಪಾಲಾಗಿವೆ. ಪಟೇಲ್ ಶಿವರಾಂ, ಬಂಡೀಗೌಡ ರಾಜಣ್ಣ, ಜಯರಾಂ ಮತ್ತು ಗಿರೀಶ್ ಗೆಲುವು ಸಾಧಿಸಿದ್ದಾರೆ.
ದೇವೇಗೌಡ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಗ್ರ್ಯಾಂಡ್ ಎಂಟ್ರಿ..!
ಹಾಸನ ಕ್ಷೇತ್ರದಲ್ಲಿ ಬಿಜೆಪಿಯ ಪ್ರೀತಂಗೌಡ ಅವರ ನೇತೃತ್ವದಲ್ಲಿ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿಗಳು ಚುನಾವಣಾ ಕಣಕ್ಕಿಳಿದಿದ್ದು, ಕೆಲ ಸ್ಥಾನಗಳಲ್ಲಿ ಗೆಲ್ಲಬಹುದು ಎಂಬ ಕುತೂಹಲವಿತ್ತು.
ಆದರೆ, ಒಂದು ಸ್ಥಾನದಲ್ಲಿಯೂ ಬಿಜೆಪಿ ಗೆಲ್ಲಲು ಸಾಧ್ಯವಾಗಲಿಲ್ಲ. ಎಲ್ಲಾ ಸ್ಥಾನಗಳಲ್ಲೂ ಜೆಡಿಎಸ್ ಜಯಭೇರಿ ಬಾರಿಸಿದೆ. ಈ ಮೂಲಕ ಹಾಸನ ಜೆಡಿಎಸ್ ಭದ್ರಕೋಟೆ ಎಂಬುದು ಸಾಬೀತಾಗಿದೆ. ಅಲ್ಲದೇ ಆಡಳಿತರೂಢ ಬಿಜೆಪಿಗೆ ಭಾರೀ ಮುಖಭಂಗವಾಗದಂತಾಗಿದೆ.
ಕಮಲವನ್ನು ಚಿವುಟಿದ ರೇವಣ್ಣ
ಇದೇ ಮೊದಲ ಬಾರಿಗೆ ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಬಿಜೆಪಿಯ ಪ್ರೀತಂಗೌಡ ಅವರು ಗೆಲುವು ಸಾಧಿಸುವ ಮೂಲಕ ಜಿಲ್ಲೆಯಲ್ಲಿ ಕೇಸರಿ ಬಾವುಟ ಹಾರಿಸಿದ್ದರು. ಇದೇ ಒಳ್ಳೆ ಅವಕಾಶ ಅಂತ ಬಿಜೆಪಿ ಹಾಸನದಲ್ಲಿ ಕಮಲವನ್ನು ಕಟ್ಟಿ ಬೆಳಸಲು ಮುಂದಾಗಿದೆ. ಆದ್ರೆ, ರೇವಣ್ಣ ಅವರು ಸಹಕಾರಿ ಬ್ಯಾಂಕ್ ಚುನಾವಣೆಯಲ್ಲಿ ಕಮಲವನ್ನು ಚಿವುಟಿ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ.