ರಾಜ್ಯದ ಬಹುವರ್ಷಗಳ ಬೇಡಿಕೆಯಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗವು(ಎನ್‌ಎಂಸಿ) ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ರಾಜ್ಯಕ್ಕೆ 450 ಹೆಚ್ಚುವರಿ ವೈದ್ಯಕೀಯ ಸೀಟು ನೀಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ಬೆಂಗಳೂರು (ಸೆ.07): ರಾಜ್ಯದ ಬಹುವರ್ಷಗಳ ಬೇಡಿಕೆಯಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗವು(ಎನ್‌ಎಂಸಿ) ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ರಾಜ್ಯಕ್ಕೆ 450 ಹೆಚ್ಚುವರಿ ವೈದ್ಯಕೀಯ ಸೀಟು ನೀಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎನ್‌ಎಂಸಿ ರಾಜ್ಯಕ್ಕೆ ನೀಡಿದ 450 ಹೆಚ್ಚುವರಿ ವೈದ್ಯಕೀಯ ಸೀಟುಗಳ ಪೈಕಿ ಹುಬ್ಬಳ್ಳಿಯ ಮೂರು ಸಾವಿರ ಮಠದ ಮೆಡಿಕಲ್‌ ಕಾಲೇಜಿಗೆ 50 ಸೀಟುಗಳನ್ನು ನೀಡಲಾಗಿದೆ.

400 ಹೆಚ್ಚುವರಿ ವೈದ್ಯಕೀಯ ಸೀಟುಗಳು ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ, ಚಿಕ್ಕಬಳ್ಳಾಪುರ, ಹಾಸನ, ರಾಯಚೂರು, ವಿಜಯನಗರ ವೈದ್ಯಕೀಯ ಕಾಲೇಜುಗಳಿಗೆ ತಲಾ 50 ಹಂಚಿಕೆಯಾಗಲಿದೆ. ರಾಜ್ಯದಲ್ಲಿ ಲಭ್ಯವಿರುವ ವೈದ್ಯಕೀಯ ಸೀಟುಗಳ ಸಂಖ್ಯೆ ಈಗ 9,663ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದರು. ಈ 400 ಸೀಟುಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಇದೇ ಮೊದಲ ಬಾರಿಗೆ ಶೇ.15ರಷ್ಟು ಎನ್ಆರ್‌ಐ ಕೋಟಾ ನಿಗದಿಪಡಿಸಲಾಗಿದೆ. ಇದಕ್ಕೆ 25 ಲಕ್ಷ ರು. ಶುಲ್ಕ ನಿಗದಿಪಡಿಸಲಾಗಿದೆ. ಇದರಿಂದ ಸರ್ಕಾರಿ ವೈದ್ಯಕೀಯ ಕಾಲೇಜು ಸಂಸ್ಥೆಗಳು ಸರ್ಕಾರದ ಅನುದಾನದ ಮೇಲೆ ಹೆಚ್ಚು ಅವಲಂಬಿತವಾಗದೆ ಸ್ವಾವಲಂಬಿಯಾಗಲು ನೆರವಾಗಲಿದೆ ಎಂದರು.

ಒಟ್ಟು ಸೀಟುಗಳ ಸಂಖ್ಯೆ 9,663ಕ್ಕೆ ಏರಿಕೆ: ನೀಟ್ ಫಲಿತಾಂಶದ ನಂತರ ಪ್ರಕಟಿಸಿದ್ದ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ 9,263 ಸೀಟುಗಳು ಲಭ್ಯವಿದ್ದವು. ಈಗ ಹೆಚ್ಚುವರಿಯಾಗಿ ಸೀಟುಗಳು ಬಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತಿ ವರ್ಷ ವೈದ್ಯಕೀಯ ಶಿಕ್ಷಣಕ್ಕೆ ದಾಖಲಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೆಲ ಪ್ರತಿಭಾವಂತ ವಿದ್ಯಾರ್ಥಿಗಳು ಖಾಸಗಿ ಕಾಲೇಜುಗಳಿಗೆ ಅಧಿಕ ಶುಲ್ಕ ಕಟ್ಟಿ ಪ್ರವೇಶ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕರ್ನಾಟಕಕ್ಕೆ ನಿಗದಿಪಡಿಸಿರುವ ವೈದ್ಯಕೀಯ ಸೀಟುಗಳು ಜೊತೆಗೆ ಹೆಚ್ಚುವರಿಯಾಗಿ ವೈದ್ಯಕೀಯ ಸೀಟುಗಳನ್ನು ಮಂಜೂರು ಮಾಡುವಂತೆ ಮನವಿ ಮಾಡಿದ್ದೆವು. ಅದರಂತೆ ಎನ್‌ಎಂಸಿ ರಾಜ್ಯಕ್ಕೆ 450 ಹೆಚ್ಚುವರಿ ಸೀಟುಗಳನ್ನು ನೀಡಿದೆ ಎಂದು ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌ ತಿಳಿಸಿದರು.

ಯಾವ ಕಾಲೇಜುಗಳಿಗೆ ಹೆಚ್ಚವರಿ ಸೀಟು?: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಚಿಕ್ಕಬಳ್ಳಾಪುರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆ, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ, ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರು ಮತ್ತು ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಿಗೆ ತಲಾ 50 ಹೆಚ್ಚುವರಿ ಸೀಟುಗಳು ಸಿಕ್ಕಿವೆ.

ನವೆಂಬರ್‌ಗೆ ಸ್ಕಿಲ್‌ ಸಮ್ಮಿಟ್‌: ಬೆಂಗಳೂರು ಟೆಕ್‌ ಸಮ್ಮಿಟ್‌ ಮಾದರಿಯಲ್ಲಿ ಇದೇ ನ. 4, 5, 6 ರಂದು ‘ಸ್ಕಿಲ್‌ ಸಮ್ಮಿಟ್‌’ ಆಯೋಜಿಸಲಾಗುವುದು. ಅಂತೆಯೆ ದಸರಾ ಬಳಿಕ ಮೈಸೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುವುದು. ಈಗಾಗಲೇ ಉದ್ಯೋಗ ಮೇಳದ ಪೋಸ್ಟರ್‌ ಸಹ ಬಿಡುಗಡೆಗೊಳಿಸಲಾಗಿದೆ. ಇದರ ನೋಂದಣಿ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಸಚಿವ ಡಾ.ಶರಣ ಪ್ರಕಾಶ್‌ ಆರ್‌.ಪಾಟೀಲ್‌ ಮಾಹಿತಿ ನೀಡಿದರು.