ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ನಿನ್ನೆ [ಮಂಗಳವಾರ] ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರನ್ನ ಭೇಟಿ ಮಾಡಿದ ಬೆನ್ನಲ್ಲೇ ಇಂದು ಬಿ.ಎಸ್. ಯಡಿಯೂರಪ್ಪ ಅವರು ಎಸ್ ಎಮ್ ಕೆ ಅವರನ್ನು ಭೇಟಿ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರು, [ಜ.02]: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದಾಗಿನಿಂದ ರಾಜಕೀಯವಾಗಿ ಮೂಲೆ ಗುಂಪಾಗಿರುವ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರನ್ನ ಇದೀಗ ರಾಜ್ಯ ನಾಯಕರು ಒಬ್ಬೊಬ್ಬರಾಗಿ ಭೇಟಿ ಮಾಡುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದಕ್ಕೆ ಪೂರಕವೆಂಬಂತೆ ನಿನ್ನೆ ಅಷ್ಟೇ ಹೊಸ ವರ್ಷ ದಿನದಂದು ಸಚಿವ ಡಿ.ಕೆ ಶಿವಕುಮಾರ್ ಅವರು ಎಸ್​.ಎಂ.ಕೃಷ್ಣ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದರು. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಸರದಿ.

ರಾಜಕೀಯ ಗುರು ಎಸ್‌ಎಂ ಕೃಷ್ಣ ಭೇಟಿ ಮಾಡಿದ ಡಿಕೆಶಿ...ಕಾರಣ?

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಷಾ ಅವರ ಸೂಚನೆಯಂತೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಎಸ್​.ಎಂ.ಕೃಷ್ಣ ಅವರ ನಿವಾಸಕ್ಕೆ ಬುಧವಾರ ಬಿ.ಎಸ್​.ಯಡಿಯೂರಪ್ಪ ಭೇಟಿ ನೀಡಿದ್ದು, ಹೊಸ ವರ್ಷದ ಶುಭಾಶಗಳನ್ನ ತಿಳಿಸಿದ್ದಾರೆ.

ಅಷ್ಟೇ ಅಲ್ಲದೇ ಲೋಕಸಭಾ ಚುನಾವಣೆ ಸಿದ್ಧತೆ ಕುರಿತು ಚರ್ಚೆ ನಡೆಸಿದ್ದು, ಚುನಾವಣಾ ಪ್ರಚಾರದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವಂತೆ ಕೃಷ್ಣರಿಗೆ ಬಿಎಸ್​ವೈ ಮನವಿ ‌ಮಾಡಿದ್ದಾರೆ ಎನ್ನಲಾಗಿದೆ.

ಬಿಎಸ್ ವೈ ಮನವಿಗೆ ಸ್ಪಂದಿಸಿರುವ ಕೃಷ್ಣ ಅವರು ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ಸಮ್ಮತಿಸಿದ್ದಾರೆ. 

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್​.ಎಂ.ಕೃಷ್ಣ, ತಾವಾಗಲಿ ತಮ್ಮ ಮಗಳು ಶಾಂಭವಿಯಾಗಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷದ ಪರ ಪ್ರಚಾರಕ್ಕೆ ಸೀಮಿತರಾಗುವುದಾಗಿ ಸ್ಪಷ್ಟನೆ ನೀಡಿದರು.

ಒಟ್ಟಿನಲ್ಲಿ ಇಷ್ಟು ದಿನ ಪಕ್ಷದಲ್ಲಿದ್ರೂ ಕ್ಯಾರೆ ಎನ್ನದ ರಾಜ್ಯ ಬಿಜೆಪಿಗೆ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಸ್.ಎಂ. ಕೃಷ್ಣ ನೆನಪಾಗಿದ್ದಾರೆ ಎಂದು ಅವರ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.