ಪಕ್ಷದ ಹೈಕಮಾಂಡ್‌ ಜೊತೆ ಚರ್ಚಿಸುವ ಸಂಬಂಧ ಇದೇ ತಿಂಗಳ 12 ಅಥವಾ 13ರಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದೆಹಲಿಗೆ ತೆರಳುವ ಸಾಧ್ಯತೆಯಿದೆ. ಈ ವೇಳೆ ಸಂಪುಟ ವಿಸ್ತರಣೆ ಸೇರಿದಂತೆ ವಿವಿಧ ವಿಚಾರಗಳ ಚರ್ಚೆ ನಡೆಯಲಿದೆ.  

ಬೆಂಗಳೂರು [ಜ.09]:  ಬಹುನಿರೀಕ್ಷಿತ ಸಂಪುಟ ವಿಸ್ತರಣೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಪಕ್ಷದ ಹೈಕಮಾಂಡ್‌ ಜೊತೆ ಚರ್ಚಿಸುವ ಸಂಬಂಧ ಇದೇ ತಿಂಗಳ 12 ಅಥವಾ 13ರಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದೆಹಲಿಗೆ ತೆರಳುವ ಸಾಧ್ಯತೆಯಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರೊಂದಿಗೆ ಸಮಾಲೋಚನೆ ನಡೆಸಿದ ಬಳಿಕವೇ ಸಂಪುಟ ವಿಸ್ತರಣೆ ಯಾವಾಗ ನಡೆಯಲಿದೆ ಎಂಬುದರ ಬಗ್ಗೆ ಸ್ಪಷ್ಟಚಿತ್ರಣ ಹೊರಬೀಳಲಿದೆ.

ಮುಖ್ಯಮಂತ್ರಿಗಳು ಇದೇ ತಿಂಗಳ 21ರಂದು ನಾಲ್ಕು ದಿನಗಳ ವಿದೇಶ ಪ್ರವಾಸಕ್ಕೆ ತೆರಳಲಿದ್ದಾರೆ. ಹೀಗಾಗಿ, ವಿದೇಶ ಪ್ರವಾಸಕ್ಕೂ ಮೊದಲೇ ಸಂಪುಟ ವಿಸ್ತರಣೆಯಾಗುತ್ತದೆಯೊ ಅಥವಾ ನಂತರ ಆಗುತ್ತದೆಯೊ ಎಂಬುದು ಕುತೂಹಲ ಮೂಡಿಸಿದೆ.

ಸಂಪುಟ ವಿಸ್ತರಣೆ ಯಾವಾಗ? ಕೊನೆಗೂ ಬಾಯ್ಬಿಟ್ಟ ಯಡಿಯೂರಪ್ಪ...

ಕಳೆದ ತಿಂಗಳ 9ರಂದು ಉಪಚುನಾವಣೆಯ ಫಲಿತಾಂಶ ಹೊರಬಿದ್ದರೂ ಇದುವರೆಗೆ 11 ಅರ್ಹ ಶಾಸಕರು ಸಚಿವ ಸ್ಥಾನಕ್ಕಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಲೇ ಇದ್ದಾರೆ. ಇನ್ನೇನು ಸಂಪುಟ ವಿಸ್ತರಣೆಯಾಗಿ ಸಚಿವ ಸ್ಥಾನ ಅಲಂಕರಿಸಬಹುದು ಎಂದುಕೊಳ್ಳುತ್ತಿರುವಾಗಲೇ ಧನುರ್ಮಾಸ ಎದುರಾಗಿದ್ದರಿಂದ ಅದು ಮುಗಿಯುವವರೆಗೆ ಸಂಪುಟ ವಿಸ್ತರಣೆ ಮಾಡದಿರಲು ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧರಿಸಿದರು.

ಇದೀಗ ಬರುವ ಸಂಕ್ರಾಂತಿಗೆ ಧನುರ್ಮಾಸ ಮುಗಿಯಲಿದೆ. ಹೀಗಾಗಿ, ಸಂಕ್ರಾಂತಿ ಮುಗಿದ ಬೆನ್ನಲ್ಲೇ ಸಂಪುಟ ವಿಸ್ತರಣೆ ಮಾಡಬೇಕು ಎಂಬ ಬೇಡಿಕೆಯನ್ನು ಅರ್ಹ ಶಾಸಕರು ಮುಖ್ಯಮಂತ್ರಿಗಳ ಬಳಿ ಇಟ್ಟಿದ್ದಾರೆ. ಈ ನಡುವೆ ವಿದೇಶ ಪ್ರವಾಸಕ್ಕೆ ತೆರಳಬೇಕಾಗಿರುವುದರಿಂದ ಅಲ್ಲಿಂದ ವಾಪಸ್‌ ಬಂದ ನಂತರವೇ ವಿಸ್ತರಣೆ ಕೈಗೆತ್ತಿಕೊಳ್ಳುವುದು ಸೂಕ್ತ ಎಂಬ ಸಲಹೆಯನ್ನು ಹಲವು ಹಿರಿಯ ನಾಯಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನೀಡಿದ್ದಾರೆ.

ಹೀಗಾಗಿ, ಅಂತಿಮವಾಗಿ ಹೈಕಮಾಂಡ್‌ ಬಳಿ ಚರ್ಚಿಸಿ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಪಡಿಸುವುದಾಗಿ ಹೇಳಿರುವ ಯಡಿಯೂರಪ್ಪ ಅವರು ದೆಹಲಿಯಿಂದ ವಾಪಸಾದ ಬಳಿಕ ಸ್ಪಷ್ಟಮಾಹಿತಿ ಹೊರಬೀಳಲಿದೆ.