ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್ ಅವರು, ಮೊದಲ ಹಾಗೂ ಎರಡನೇ ಬಾರಿ ಗೆದ್ದ ಸುಮಾರು 55 ಶಾಸಕರಿಗೆ ಮುಂಬರುವ ಸಂಪುಟ ಪುನಾರಚನೆಯಲ್ಲಿ ಮಂತ್ರಿಗಿರಿ ನೀಡಬೇಕೆಂದು ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ತಮ್ಮ ಬೇಡಿಕೆಗೆ ಸ್ಪಂದಿಸುವ ವಿಶ್ವಾಸವಿದೆ ಎಂದರು.

ರಾಮನಗರ (ಮಾ.22): ಮೊದಲ ಬಾರಿಗೆ ಹಾಗೂ ಎರಡನೇ ಬಾರಿ ಗೆದ್ದವರಿಗೆ ಈ ಬಾರಿಯ ಸಂಪುಟ ಪುನಾರಚನೆ ವೇಳೆ ಮಂತ್ರಿಗಿರಿ ನೀಡಲಿ ಎಂದು ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್ ಆಗ್ರಹಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಪ್ರಿಯಾಂಕ ಖರ್ಗೆ ಅವರು ಮೊದಲ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾಗ ಸಚಿವರಾಗಿದ್ದರು. ಹಾಗಾಗಿ, ಈಗಲೂ ಮೊದಲ ಬಾರಿ ಗೆದ್ದವರನ್ನು ಸಚಿವರನ್ನಾಗಿ ಮಾಡಬೇಕೆಂದು ಆಗ್ರಹಿಸುತ್ತಿದ್ದೇವೆ. ಸುಮಾರು 55 ಮಂದಿ ಸೇರಿ, ಒಟ್ಟಿಗೆ ಊಟ ಮಾಡಿ, ಈ ಎಲ್ಲಾ ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ನಮ್ಮ ಮನವಿಯನ್ನು ಮುಖ್ಯಮಂತ್ರಿಗೆ ತಿಳಿಸಿದ್ದೇವೆ. ನಮ್ಮ ಮನವಿಗೆ ಮುಖ್ಯಮಂತ್ರಿಗಳು ಸ್ಪಂದಿಸುವ ವಿಶ್ವಾಸ ಇದೆ ಎಂದು ಹೇಳಿದರು.

ಮೂರು-ನಾಲ್ಕು ಬಾರಿ ಗೆದ್ದ ಶಾಸಕರು ಸಭೆ ಮಾಡಿ, ಮುಖ್ಯಮಂತ್ರಿಗಳಲ್ಲಿ ಸಚಿವ ಪದವಿಗೆ ಮನವಿ ಮಾಡಿದ್ದಾರೆ. ಹಾಗಾಗಿ, ಮೊದಲ ಬಾರಿ ಹಾಗೂ ಎರಡು ಬಾರಿ ಗೆದ್ದ ಶಾಸಕರು ಕೂಡ ನಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ತಿಳಿಸುವ ನಿಟ್ಟಿನಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದೇವೆ ಎಂದು ಅವರು ಹೇಳಿದರು.