ಜಿಎಸ್‌ಟಿ ಸರಳೀಕರಣದ ನಿರ್ಧಾರದಿಂದ ರಾಜ್ಯಕ್ಕೆ 15,000 ದಿಂದ 20,000 ಕೋಟಿ ರು. ನಷ್ಟ ಉಂಟಾಗಲಿದೆ. ಆದರೂ ಜನಸಾಮಾನ್ಯರ ಮೇಲಿನ ಆರ್ಥಿಕ ಭಾರ ತಗ್ಗಿಸುವ ಸಲುವಾಗಿ ಈ ನಿರ್ಧಾರ ಸ್ವಾಗತಿಸುತ್ತೇವೆ.

ಬೆಂಗಳೂರು (ಸೆ.06): ಜಿಎಸ್‌ಟಿ ಸರಳೀಕರಣದ ನಿರ್ಧಾರದಿಂದ ರಾಜ್ಯಕ್ಕೆ 15,000 ದಿಂದ 20,000 ಕೋಟಿ ರು. ನಷ್ಟ ಉಂಟಾಗಲಿದೆ. ಆದರೂ ಜನಸಾಮಾನ್ಯರ ಮೇಲಿನ ಆರ್ಥಿಕ ಭಾರ ತಗ್ಗಿಸುವ ಸಲುವಾಗಿ ಈ ನಿರ್ಧಾರ ಸ್ವಾಗತಿಸುತ್ತೇವೆ. ಆದರೆ, ಈ ಲಾಭ ಬಳಕೆದಾರರಿಗೆ ನೀಡದೆ ವ್ಯಾಪಾರಿಗಳು, ಉದ್ಯಮಿಗಳು ದುರುಪಯೋಗ ಮಾಡಿಕೊಳ್ಳದಂತೆ ತಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಎಸ್‌ಟಿ ಸರಳೀಕರಣ ಎಂಬುದು ಮೋದಿ ಸರ್ಕಾರದ ಹೊಸ ಅವಿಷ್ಕಾರವೇನಲ್ಲ.

Add Asianetnews Kannada as a Preferred SourcegooglePreferred

ಅತ್ಯಂತ ಅವಸರದಲ್ಲಿ ಎನ್‌ಡಿಎ ಸರ್ಕಾರ 2017ರಲ್ಲಿ ದೋಷಪೂರ್ಣ ಜಿಎಸ್‌ಟಿ ಜಾರಿಗೊಳಿಸಿದಾಗಲೇ ರಾಹುಲ್ ಗಾಂಧಿ ಮತ್ತು ವಿರೋಧ ಪಕ್ಷಗಳ ನಾಯಕರು ಸುಧಾರಣೆಗೆ ಒತ್ತಾಯಿಸಿದ್ದರು. ಗಬ್ಬರ್ ಸಿಂಗ್ ತೆರಿಗೆ ದೇಶದ ಸಣ್ಣ ವ್ಯಾಪಾರಿಗಳ ಸರ್ವನಾಶ ಮಾಡಿದ್ದನ್ನು ಸಾಕ್ಷ್ಯಸಹಿತ ಬಹಿರಂಗಪಡಿಸಿದ್ದರು. ಕೊನೆಗೂ ಮೋದಿ ಎಚ್ಚೆತ್ತುಕೊಂಡಿದ್ದಾರೆ ಎಂದು ಹೇಳಿದ್ದಾರೆ. ವಾಸ್ತವದಲ್ಲಿ ಜಿಎಸ್‌ಟಿ ತೆರಿಗೆ ವ್ಯವಸ್ಥೆ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಕಪಿಮುಷ್ಟಿಯಲ್ಲಿದೆ. ಇದೀಗ ರಾಜ್ಯಗಳ ಒತ್ತಾಯದಿಂದ ಜಿಎಸ್‌ಟಿ ಸರಳೀಕರಣಕ್ಕೆ ಮುಂದಾಗಿದ್ದಾರೆ.

ಜಿಎಸ್ಟಿ ಸುಧಾರಣೆಯ ಲಾಭ ಬಳಕೆದಾರ ಜನತೆಗೆ ತಲುಪುವಂತೆ ಮಾಡುವುದು ಕೇಂದ್ರ ಸರ್ಕಾರ ಮತ್ತು ಕೇಂದ್ರ ತೆರಿಗೆ ಮತ್ತು ಸುಂಕ ಮಂಡಳಿ (ಸಿಬಿಐಸಿ) ಜವಾಬ್ದಾರಿ. ಈ ತೆರಿಗೆ ಸುಧಾರಣೆಯನ್ನು ವ್ಯಾಪಾರಿಗಳು ಮತ್ತು ಉದ್ಯಮಿಗಳು ತಮ್ಮ ಲಾಭಾಂಶ ಹೆಚ್ಚಿಸಲು ದುರುಪಯೋಗ ಮಾಡದಂತೆ ಕೇಂದ್ರ ತಡೆಯಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈಗಲೂ ಸಂಗ್ರಹಿಸುತ್ತಿರುವ ಜಿಎಸ್ಟಿ ಪರಿಹಾರ ಸುಂಕದಲ್ಲಿ ನ್ಯಾಯಬದ್ಧ ಪಾಲನ್ನು ರಾಜ್ಯಕ್ಕೆ ನೀಡಬೇಕು ಎಂದೂ ಒತ್ತಾಯಿಸಿದ್ದಾರೆ.

ಲಿಂಗತ್ವ ಅಲ್ಪಸಂಖ್ಯಾತರ ಮೂಲ ಸಮೀಕ್ಷೆಗೆ ಚಾಲನೆ: ಒಳ ಮೀಸಲಾತಿಗಾಗಿ ಪರಿಶಿಷ್ಟ ಜಾತಿಯ ಉಪಜಾತಿಯ ಸಮೀಕ್ಷೆ ಪೂರ್ಣಗೊಂಡ ನಂತರ ಇದೀಗ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದೆ. ಅದರ ಜತೆಗೆ ದೇಶದಲ್ಲಿ ಇದೇ ಮೊದಲ ಬಾರಿ ರಾಜ್ಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿಯರ ಮರು ಸಮೀಕ್ಷೆಗೆ ಚಾಲನೆ ನೀಡಲಾಗಿದೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಡಿ ಕೈಗೊಳ್ಳಲಾಗುತ್ತಿರರುವ ಎರಡು ಸಮೀಕ್ಷೆಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿ, ಸಮೀಕ್ಷೆಗೆ ಸಂಬಂಧಿಸಿದ ಪೋಸ್ಟರ್‌ ಬಿಡುಗಡೆ ಮಾಡಿದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಪ್ರಧಾನ ಕಾರ್ಯದರ್ಶಿ ಡಾ. ಶಾಮ್ಲಾ ಇಕ್ಬಾಲ್‌, ನಿಗಮದ ಅಧ್ಯಕ್ಷೆ ಪದ್ಮಾವತಿ, ವ್ಯವಸ್ಥಾಪಕ ನಿರ್ದೇಶಕ ಮಹೇಶ್‌ ಬಾಬು ಇತರರಿದ್ದರು.