ಹಿಂಸಾಚಾರ, ಪ್ರಿಯಾಂಕಾ ಗಾಂಧಿ ಬಂಧನ: ರಾಜ್ಯಪಾಲರನ್ನ ಭೇಟಿಯಾದ ಕಾಂಗ್ರೆಸ್ ನಾಯಕರು
* ಉತ್ತರ ಪ್ರದೇಶದಲ್ಲಿ ಹಿಂಸಾಚಾರ ಹಾಗೂ ಪ್ರಿಯಾಂಕಾ ಗಾಂಧಿ ಬಂಧನ
* ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಕಾಂಗ್ರೆಸ್ ನಾಯಕರ ಪಂಜಿನ ಮೆರವಣಿಗೆ
* ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲಗೆ ಮನವಿ
ಬೆಂಗಳೂರು, (ಅ.04): ಉತ್ತರಪ್ರದೇಶದಲ್ಲಿ ಲಖೀಮ್ಪುರ್ ಖೇರಿಯಲ್ಲಿ ಹಿಂಸಾಚಾರ ಹಾಗೂ ಪ್ರಿಯಾಂಕಾ ಗಾಂಧಿ ಗೃಹ ಬಂಧನ ಖಂಡಿಸಿ ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿದರು.
ಪಂಜಿನ ಮೆರವಣಿಗೆ ಮೂಲಕ ರಾಜಭವನ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ಬೆಂಗಳೂರಿನ ಇಂಡಿಯನ್ ಎಕ್ಸ್ಪ್ರೆಸ್ ಸರ್ಕಲ್ ಬಳಿ ತಡೆದರು. ಸಿದ್ದರಾಮಯ್ಯ, ಖರ್ಗೆ, ಡಿಕೆಶಿ ಸೇರಿ 15 ನಾಯಕರಿಗೆ ಮಾತ್ರ ರಾಜ್ಯಪಾಲರ ಭೇಟಿಗೆ ಅವಕಾಶ ನೀಡಲಾಗಿಗಿತ್ತು,
ಅದರಂತೆ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದ ನಿಯೋಗ ರಾಜಯಭವನಕ್ಕೆ ತೆರಳಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಸಚಿವರಾಗಿರುವ ಆರೋಪಿಗಳನ್ನು ಬಂಧಿಸಿ ಕ್ರಮ ಜರುಗಿರುಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.
ಪೊಲೀಸರ ಬಂಧನದಲ್ಲಿ ಪೊರಕೆ ಹಿಡಿದು ಕೊಠಡಿ ಸ್ವಚ್ಚಗೊಳಿಸಿದ ಪ್ರಿಯಾಂಕಾ ಗಾಂಧಿ!
ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಮೊಳಗಿಸಿದರು. ರೈತರ ಮೇಲೆ ಕಾರು ಹರಿಸಿ ಅವರ ಸಾವಿಗೆ ಕಾರಣವಾದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರ ವಿರುದ್ಧ ಕಠಿಣ ಕ್ರಮಗಳಡಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದರು.
ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ನಾಳೆ (ಅ.05) ಎಲ್ಲ ಜಿಲ್ಲೆಗಳಲ್ಲಿ ರೈತರ ಸಾವಿನ ಪ್ರಕರಣ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಈ ವೇಳೆ ಕರೆ ಕೊಟ್ಟರು.
ಯಾವುದೇ ನೋಟಿಸ್ ಇಲ್ಲದೇ ನಮ್ಮ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿರುವುದು ಖಂಡನೀಯ. ರೈತರನ್ನು ಕೊಲೆ ಮಾಡಿದವರನ್ನು ಬಂಧಿಸಿಲ್ಲ. ಸಾತ್ವಾನ ಹೇಳಲು ಹೊರಟಿದ್ದ ನಮ್ಮ ನಾಯಕಿಯನ್ನು ಬಂಧಿಸಿದ್ದು ಖಂಡನೀಯ ಎಂದು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ದೇಶದ ಅಖಂಡ ರೈತರ ಪರವಾಗಿ ನಮ್ಮ ಹೋರಾಟ ಮುಂದುವರೆಯಲಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರು ಈ ಕೂಡಲೇ ರಾಜೀನಾಮೆ ನೀಡುಬೇಕು ಎಂದು ಒತ್ತಾಯಿಸಿದರು.
ದೇಶದಲ್ಲಿ ಪ್ರಜಾಪ್ರಭುತ್ವ ಇದೆಯಾ ಎಂಬ ಪ್ರಶ್ನೆ ಮೂಡಿದೆ. ರೈತರು ಸಾವನ್ನಪ್ಪಿದ್ದಾರೆ. ಪಕ್ಷದ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ.ಯಾರೇ ಸಾವನ್ನಪ್ಪಿದ್ರೂ ನೋವಿನ ಸಂಗತಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟ ಒಂದು ಭಾಗ ಎಂದರು.
ಪ್ರಿಯಾಂಕಾ ಗಾಂಧಿ ಅವರನ್ನ ಗೃಹ ಬಂಧನ ಮಾಡುವ ಉದ್ದೇಶ ಏನು? ಸಾವನ್ನಪ್ಪಿರುವ ರೈತ ಕುಟುಂಬಗಳ ಮನೆಗಳಿಗೆ ಭೇಟಿ ನೀಡಿ ಅವರ ಸಾಂತ್ವಾನ ಹೇಳಲು ಪ್ರಿಯಾಂಕಾ ಗಾಂಧಿ ಅವರು ತೆರಳಲು ಮುಂದಾಗಿದ್ರು. ಆದ್ರೆ ಅವರನ್ನ ತಡೆದು, ಅವರನ್ನ ಎಳೆದಾಡಿ ವಿಪಕ್ಷ ನಾಯಕರನ್ನ ಹತ್ತಿಕ್ಕುವ ಪ್ರಯತ್ನ ಉತ್ತರ ಪ್ರದೇಶ ಬಿಜೆಪಿ ಸರ್ಕಾರ ಮಾಡಿದೆ ಎಂದು ಕಿಡಿಕಾರಿದರು.