ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಮ್‌ ಆದ್ಮಿ ಪಕ್ಷವು ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ, ಪ್ರತಿ ಮನೆಗೆ ತಿಂಗಳಿಗೆ 300 ಯೂನಿಟ್‌ ವಿದ್ಯುತ್‌ ಉಚಿತ, ನಿರುದ್ಯೋಗಿ ಯುವಜನತೆಗೆ ತಿಂಗಳಿಗೆ ಮೂರು ಸಾವಿರ ರು. ನಿರುದ್ಯೋಗ ಭತ್ಯೆ ಸೇರಿದಂತೆ ಹಲವು ಭರವಸೆಗಳನ್ನು ‘ಕೇಜ್ರಿವಾಲ್‌ ಗ್ಯಾರಂಟಿ’ ಹೆಸರಲ್ಲಿ ನೀಡಿದೆ. 

ಬೆಂಗಳೂರು (ಮಾ.30): ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಮ್‌ ಆದ್ಮಿ ಪಕ್ಷವು ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ, ಪ್ರತಿ ಮನೆಗೆ ತಿಂಗಳಿಗೆ 300 ಯೂನಿಟ್‌ ವಿದ್ಯುತ್‌ ಉಚಿತ, ನಿರುದ್ಯೋಗಿ ಯುವಜನತೆಗೆ ತಿಂಗಳಿಗೆ ಮೂರು ಸಾವಿರ ರು. ನಿರುದ್ಯೋಗ ಭತ್ಯೆ ಸೇರಿದಂತೆ ಹಲವು ಭರವಸೆಗಳನ್ನು ‘ಕೇಜ್ರಿವಾಲ್‌ ಗ್ಯಾರಂಟಿ’ ಹೆಸರಲ್ಲಿ ನೀಡಿದೆ. ಪಕ್ಷದ ರಾಷ್ಟ್ರೀಯ ವಕ್ತಾರ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌ ಅವರು ಬುಧವಾರ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಗ್ಯಾರಂಟಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.

Add Asianetnews Kannada as a Preferred SourcegooglePreferred

ಬಳಿಕ ಮಾತನಾಡಿದ ಅವರು, ಆಮ್‌ ಆದ್ಮಿ ಪಾರ್ಟಿಯು ಸುಳ್ಳು ಆಶ್ವಾಸನೆಗಳನ್ನು ನೀಡುವ ಪಕ್ಷವಲ್ಲ. ನಾವು ಆಶ್ವಾಸನೆಗಳ ಬದಲು ಗ್ಯಾರೆಂಟಿ ಕಾರ್ಡ್‌ ನೀಡುತ್ತೇವೆ. ಇದೊಂದು ಕರಾರುಪತ್ರವಾಗಿದ್ದು, ಇವೆಲ್ಲವನ್ನೂ ಶೇ. 100ರಷ್ಟು ಈಡೇರಿಸುತ್ತೇವೆ. ಪ್ರಣಾಳಿಕೆಯಲ್ಲಿದ್ದ ಎಲ್ಲ ಗ್ಯಾರಂಟಿಗಳನ್ನು ದೆಹಲಿಯಲ್ಲಿ ಈಡೇರಿಸಿದ್ದೇವೆ. ಪಂಜಾಬ್‌ನಲ್ಲಿ ಕೂಡ ಒಂದೊಂದಾಗಿ ಜಾರಿಗೆ ಬರುತ್ತಿದೆ. ಕರ್ನಾಟಕದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ನಾವು ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ತಿಳಿಸಿದರು. ಗುಣಮಟ್ಟದ ಆರೋಗ್ಯ ಸೇವೆಗಾಗಿ ಕ್ಲಿನಿಕ್‌ಗಳು, ಸರ್ಕಾರಿ ಶಾಲೆಗಳ ಅಭಿವೃದ್ಧಿ, ಹಳೆ ಪಿಂಚಣಿ ಯೋಜನೆ ಜಾರಿ ಮುಂತಾದ ಒಟ್ಟು ಹತ್ತು ವಲಯಗಳಿಗೆ ಸಂಬಂಧಿಸಿದ ಪ್ರಮುಖ ಗ್ಯಾರಂಟಿಗಳನ್ನು ಇಂದು ಘೋಷಿಸಲಾಗುತ್ತಿದೆ. 

ಬಿಜೆಪಿ ಅಭ್ಯರ್ಥಿ ಪಟ್ಟಿ ಶೀಘ್ರವೇ ಘೋಷಣೆ: ನಳಿನ್‌ ಕುಮಾರ್‌ ಕಟೀಲ್‌

ಜೊತೆಗೆ, ಬೆಂಗಳೂರು ಹಾಗೂ ರಾಜ್ಯದ ಪ್ರಾದೇಶಿಕ ಅಭಿವೃದ್ಧಿಗಾಗಿ ಪ್ರತ್ಯೇಕವಾದ ಗ್ಯಾರಂಟಿಗಳನ್ನು ಘೋಷಿಸುತ್ತಿದ್ದೇವೆ ಎಂದು ಹೇಳಿದರು. ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಅಶ್ವಿನ್‌ ಮಹೇಶ್‌, ರಾಜ್ಯ ಕಾರ್ಯಾಧ್ಯಕ್ಷ ಮೋಹನ್‌ ದಾಸರಿ ಮತ್ತಿತರರು ಭಾಗವಹಿಸಿದ್ದರು. ಪಕ್ಷವು ದೆಹಲಿಯಲ್ಲಿ ಮೂರನೇ ಬಾರಿ ಹಾಗೂ ಪಂಜಾಬ್‌ನಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದೆ. ಗೋವಾ ಚುನಾವಣೆಯಲ್ಲಿ ಶೇ.6ಕ್ಕಿಂತಲೂ ಹೆಚ್ಚು ಮತ ಪಡೆದಿದ್ದೇವೆ. ಗುಜರಾತ್‌ನಲ್ಲಿ ಶೇ.14ರಷ್ಟು ಮತ ಪಡೆದಿದ್ದು, ಐವರು ಶಾಸಕರು ಆಯ್ಕೆಯಾಗಿದ್ದಾರೆ. 

ನನ್ನ ರಾಜಕೀಯ ಜೀವನ ಉತ್ತುಂಗಕ್ಕೆ ಏರಿದ್ದನ್ನು ಕೆಲವರಿಗೆ ಸಹಿಸಲಾಗುತ್ತಿಲ್ಲ: ಸಚಿವ ಸಿ.ಸಿ.ಪಾಟೀಲ್‌

ಈ ಮೂಲಕ ಆಮ್‌ ಆದ್ಮಿ ಪಾರ್ಟಿಯು ರಾಷ್ಟ್ರೀಯ ಪಕ್ಷದ ಸ್ಥಾನಮಾನಕ್ಕೆ ಕಾನೂನಿನ ಪ್ರಕಾರ ಅರ್ಹವಾಗಿದ್ದರೂ ಚುನಾವಣಾ ಆಯೋಗವು ಇನ್ನೂ ಇದನ್ನು ಅಧಿಕೃತವಾಗಿ ಘೋಷಿಸಿಲ್ಲ. ಸ್ಥಾನಮಾನ ಕೋರಿ ನಾವು ಸಲ್ಲಿಸಿದ್ದ ಅರ್ಜಿಯನ್ನು ಹಲವು ತಿಂಗಳುಗಳಿಂದ ಬಾಕಿ ಉಳಿಸಿಕೊಂಡಿದೆ ಎಂದು ಸಂಜಯ್‌ ಸಿಂಗ್‌ ಬೇಸರ ವ್ಯಕ್ತಪಡಿಸಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.