ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮಕಾಡೆ ಮಲಗಿದೆ. 65 ಸ್ಥಾನಕ್ಕೆ ಕುಸಿದಿದೆ. ಕಾಂಗ್ರೆಸ್ ಸುನಾಮಿಗೆ ಬಿಜೆಪಿ ಕೊಚ್ಚಿ ಹೋಗಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರು(ಮೇ.13): ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತ ನಿರೀಕ್ಷಿಸಿದ್ದ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಕೇವಲ 65 ಸ್ಥಾನಕ್ಕೆ ಬಿಜೆಪಿ ಕುಸಿದಿದೆ. ಹಲವು ಜಿಲ್ಲೆಗಳಲ್ಲಿ ಬಿಜೆಪಿ ಮಕಾಡೆ ಮಲಗಿದೆ. ಗೆಲ್ಲುವ ಕುದುರೆಗಳು ನೆಲಕಚ್ಚಿದೆ. ಇತ್ತ ಕಾಂಗ್ರೆಸ್ 136 ಸ್ಥಾನದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಸಂಭ್ರಮ ಆಚರಿಸುತ್ತಿದೆ. ಕಾಂಗ್ರೆಸ್ ಭರ್ಜರಿ ಗೆಲುವಿನ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿದ ಬಸವರಾಜ್ ಬೊಮ್ಮಾಯಿ, ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಸೋಲಿನ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ರಾಜೀನಾಮೆ ಸಲ್ಲಿಸಿದ್ದಾರೆ. 19 ತಿಂಗಳು 17 ದಿನಗಳ ಕಾಲ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಬೊಮ್ಮಾಯಿ ಇದೀಗ ಕುರ್ಚಿಯಿಂದ ಕೆಳಗಿಳಿದಿದ್ದಾರೆ. ಬಿಎಸ್ ಯಡಿಯೂರಪ್ಪ ನಿರ್ಗಮನದ ಬಳಿಕ ಜುಲೈ 26, 2021ರಂದು ಮುಖ್ಯಮಂತ್ರಿಯಾಗಿ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ್ದರು. ಬಿಜೆಪಿ ಸೋಲು ಅನುಭವಿಸಿದ ಕಾರಣ ಬಸವರಾಜ್ ಬೊಮ್ಮಾಯಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Karnataka Election Results 2023: ಬಿಜೆಪಿಯ ಈ ಸೋಲಿನ ಜವಾಬ್ದಾರಿಯನ್ನು ನಾನೇ ಹೋರುತ್ತೆನೆ: ಸಿಎಂ ಬೊಮ್ಮಾಯಿ
ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿನ ಬೆನ್ನಲ್ಲೇ ಇಂದು ಸಭೆ ನಡೆಸಿದೆ. ನಾಳೆ ಕಾಂಗ್ರೆಸ್ ಶಾಸಕಾಂಗದ ಪಕ್ಷದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂದು ನಿರ್ಧಾರವಾಗಲಿದೆ. ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲರ ಬಳಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ.
ಬಸವರಾಜ್ ಬೊಮ್ಮಾಯಿ ತಮ್ಮ ಸ್ವಕ್ಷೇತ್ರ ಶಿಗ್ಗಾಂವಿಯಿಂದ ಸ್ಪರ್ಧಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮ್ಮದ್ ಖಾನ್ ವಿರುದ್ಧ ಗೆಲುವು ದಾಖಲಿಸಿದ್ದಾರೆ. ಬಸವರಾಜ್ ಬೊಮ್ಮಾಯಿ 99073 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ. 2008ರಿಂದ ಶಿಗ್ಗಾಂವಿ ಕ್ಷೇತ್ರದಿಂದ ಬಿಜೆಪಿ ನಾಯಕನಾಗಿ ಆರಿಸಿ ಬಂದ ಬಸವರಾಜ್ ಬೊಮ್ಮಾಯಿ, ಬಳಿಕ ಹಿಂತುರಿಗಿ ನೋಡಿಲ್ಲ. 2008, 2013, 2018 ಹಾಗೂ ಇದೀಗ 2013ರಲ್ಲಿ ಬಸವರಾಜ್ ಬೊಮ್ಮಾಯಿ ಗೆಲುವು ದಾಖಲಿಸಿದ್ದಾರೆ. 2018ರಲ್ಲಿ 83,868 ಮತಗಳನ್ನು ಪದು ಗೆಲುವು ದಾಖಲಿಸಿದ್ದರು.
ನಿಜವಾಗಿಯೂ ಕರ್ನಾಟಕದಲ್ಲಿ ಗೆದ್ದಿರುವುದು ಕಾಂಗ್ರೆಸ್ ಪಕ್ಷವಲ್ಲ; ಮತದಾರ!
16ನೇ ವಿಧಾನಸಭಾ ಚುನಾವಣೆಯು ಮೇ 10ರಂದು ಒಂದೇ ಹಂತದಲ್ಲಿ ನಡೆದಿತ್ತು. ರಾಜ್ಯದ ಎಲ್ಲೆಡೆ ಸ್ಥಾಪನೆಯಾದ 58,545 ಮತಗಟ್ಟೆಗಳಲ್ಲಿ 2615 ಅಭ್ಯರ್ಥಿಗಳ ಭವಿಷ್ಯವನ್ನು 3.8 ಕೋಟಿ ಮತದಾರರು ಬರೆದಿದ್ದು, ಒಟ್ಟಾರೆ ದಾಖಲೆಯುತ ಶೇ.73.19ರಷ್ಟು ಮತದಾನವಾಗಿತ್ತು. 224 ಅಭ್ಯರ್ಥಿಗಳು ರಾಜ್ಯ ವಿಧಾನಸಭೆಗೆ ಆಯ್ಕೆಯಾಗಲಿದ್ದು, ಸರಕಾರ ರಚಿಸಲು ಪಕ್ಷವೊಂದಕ್ಕೆ 113 ಬಲಾಬಲ ಪ್ರದರ್ಶಿಸಬೇಕು.
