* ಮೋದಿ ಭೇಟಿ ಮಾಡಿ ಸಿಎಂ ಮರಳಿದ ಬೆನ್ನಲ್ಲೇ ದಿಲ್ಲಿಗೆ* ಜಗದೀಶ್‌ ಶೆಟ್ಟರ್‌ ದಿಢೀರ್‌ ದೆಹಲಿಗೆ: ಭಾರಿ ಕುತೂಹಲ* ವರಿಷ್ಠರನ್ನು ಭೇಟಿ ಮಾಡುತ್ತಾರಾ ಎಂಬುದು ಸ್ಪಷ್ಟವಿಲ್ಲ

ಬೆಂಗಳೂರು(ನ.13): ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಸೇರಿದಂತೆ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ವಾಪಸಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ.

ಶುಕ್ರವಾರ ಮಧ್ಯಾಹ್ನ ಹುಬ್ಬಳ್ಳಿಯಿಂದ ದೆಹಲಿಗೆ ತೆರಳಿದ ಅವರು ಪಕ್ಷದ ವರಿಷ್ಠರನ್ನು ಭೇಟಿ ಮಾಡುತ್ತಾರೆಯೋ ಅಥವಾ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ತೆರಳಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ಬಂದಿದ್ದೇನೆ. ಯಾವುದೇ ರಾಜಕೀಯ ನಾಯಕರನ್ನು ಈ ವೇಳೆ ಭೇಟಿಯಾಗುವುದಿಲ್ಲ. ಎಲ್ಲೂ ರಾಜಕೀಯ ಚರ್ಚೆ ನಡೆಸುವುದಿಲ್ಲ ಎಂದು ತಿಳಿಸಿದರು.

ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬಿಟ್‌ ಕಾಯಿನ್‌ ಹಗರಣ ಸದ್ದು ಮಾಡುತ್ತಿರುವ ಮಧ್ಯೆಯೇ ನಾಯಕತ್ವ ಬದಲಾವಣೆ ಬಗ್ಗೆಯೂ ವದಂತಿ ಹಬ್ಬಿತ್ತು. ಮುಖ್ಯಮಂತ್ರಿ ಬೊಮ್ಮಾಯಿ ಅವರು ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ದೆಹಲಿಗೆ ತೆರಳಿ ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ವಿವರಣೆ ನೀಡಿದ್ದರು.

ವೈಯಕ್ತಿಕ ಭೇಟಿ

ನನ್ನ ವೈಯಕ್ತಿಕ ಕೆಲಸದ ಮೇಲೆ ದೆಹಲಿಗೆ ಬಂದಿದ್ದೇನೆ. ಯಾವುದೇ ರಾಜಕೀಯ ನಾಯಕರನ್ನು ಈ ವೇಳೆ ಭೇಟಿಯಾಗುವುದಿಲ್ಲ. ಎಲ್ಲೂ ರಾಜಕೀಯ ಚರ್ಚೆ ನಡೆಸುವುದಿಲ್ಲ.

- ಜಗದೀಶ್‌ ಶೆಟ್ಟರ್‌ ಮಾಜಿ ಮುಖ್ಯಮಂತ್ರಿ