ಕೋಲಾರದ ರಾಜೇನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ದಂಪತಿಯೊಬ್ಬರು ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ್ದಾರೆ. ತಮ್ಮ ಮನೆಯನ್ನು ಅಕ್ರಮವಾಗಿ ಬೇರೆಯವರಿಗೆ ಖಾತೆ ಮಾಡಿಕೊಟ್ಟ ಪಿಡಿಒ ವಿರುದ್ಧ ಆರೋಪಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ಈ ಕೃತ್ಯಕ್ಕೆ ಮುಂದಾಗಿದ್ದಾರೆ.

ಕೋಲಾರ (ಸೆ.18): ಜಿಲ್ಲೆಯ ಮಾಲೂರು ತಾಲೂಕಿನ ರಾಜೇನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ದಂಪತಿಯೊಬ್ಬರು ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ತಮ್ಮ ಮನೆಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅಕ್ರಮವಾಗಿ ಬೇರೆಯವರಿಗೆ ಖಾತೆ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿ ದಂಪತಿ ಈ ಕೃತ್ಯಕ್ಕೆ ಮುಂದಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಘಟನೆಯ ವಿವರಗಳು

ದೊಡ್ಡಕಲ್ಲಹಳ್ಳಿ ಗ್ರಾಮದ ಮಂಜುಳಾ ಮತ್ತು ರಾಮಪ್ಪ ಎಂಬ ದಂಪತಿ ಕಳೆದ 30 ವರ್ಷಗಳಿಂದ ವಾಸವಿದ್ದ ಮನೆಯನ್ನು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸೋಮೇಶ್ ಅಕ್ರಮವಾಗಿ ಬೇರೆಯವರಿಗೆ ಖಾತೆ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ತಮ್ಮ ಮನೆಗೆ ಇ-ಖಾತೆ ಮಾಡಿಕೊಡುವುದಾಗಿ ಪಿಡಿಒ ಸೋಮೇಶ್ ಅವರು ದಂಪತಿಯಿಂದ 1 ಲಕ್ಷ ರೂಪಾಯಿ ಮುಂಗಡ ಹಣ ಪಡೆದಿದ್ದರು ಎನ್ನಲಾಗಿದೆ. ಆದರೆ, ಹಣ ಪಡೆದ ನಂತರ ಅವರು ಅದೇ ಮನೆಯನ್ನು ಬೇರೊಬ್ಬರ ಹೆಸರಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂದು ದಂಪತಿ ದೂರಿದ್ದಾರೆ.

ಪ್ರತಿಭಟನೆ ಮತ್ತು ಆತ್ಮಹ*ತ್ಯೆ ಯತ್ನ

ಈ ಅನ್ಯಾಯದ ವಿರುದ್ಧ ದಂಪತಿ ರಾಜೇನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಒಳಗೆ ಧರಣಿ ಕುಳಿತಿದ್ದರು. ತಮ್ಮ ಗೋಳನ್ನು ಯಾರೂ ಕೇಳುತ್ತಿಲ್ಲ ಎಂದು ಹತಾಶರಾದ ಅವರು, ತಾವು ತಂದಿದ್ದ ವಿಷದ ಬಾಟಲಿಯನ್ನು ಮುಂದಿಟ್ಟುಕೊಂಡು ಹೈಡ್ರಾಮ ನಡೆಸಿದರು. ಈ ವೇಳೆ, ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಮಾಸ್ತಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ಗ್ರಾಮ ಪಂಚಾಯಿತಿ ಆಡಳಿತದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಪಿಡಿಒ ಸೋಮೇಶ್ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಸದ್ಯ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ಅಕ್ರಮಗಳಿಗೆ ಈ ಘಟನೆ ಮತ್ತೊಂದು ನಿದರ್ಶನವಾಗಿದೆ.