‘ಮುಖ್ಯಮಂತ್ರಿ ಬದಲಾವಣೆಯಿಲ್ಲ, 2028 ರವರೆಗೆ ನಾನೇ ಮುಖ್ಯಮಂತ್ರಿ’ ಎಂದು ದೆಹಲಿಯಲ್ಲಿ ಕುಳಿತು ಸಿದ್ದರಾಮಯ್ಯ ಶಾಕ್ ನೀಡಿದ ಬೆನ್ನಲ್ಲೇ, ಇದೀಗ ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು’ ಎಂದು ಪುನರುಚ್ಚರಿಸಿದ್ದಾರೆ.
ಬೆಂಗಳೂರು : ‘ಮುಖ್ಯಮಂತ್ರಿ ಬದಲಾವಣೆಯಿಲ್ಲ, 2028 ರವರೆಗೆ ನಾನೇ ಮುಖ್ಯಮಂತ್ರಿ’ ಎಂದು ದೆಹಲಿಯಲ್ಲಿ ಕುಳಿತು ಸಿದ್ದರಾಮಯ್ಯ ಶಾಕ್ ನೀಡಿದ ಬೆನ್ನಲ್ಲೇ, ಇದೀಗ ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು’ ಎಂದು ಪುನರುಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾಯಕತ್ವ ಬದಲಾವಣೆ ಚರ್ಚೆಗೆ ಸಿದ್ದರಾಮಯ್ಯ ಪೂರ್ಣವಿರಾಮ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಾಯಕತ್ವ ಬದಲಾವಣೆ ಕುರಿತು ಜಾರಕಿಹೊಳಿ ಚರ್ಚೆ ಆರಂಭಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾವಣೆ ಆಗಬೇಕು. ಈ ಬಗ್ಗೆ ಸಾಕಷ್ಟು ಬಾರಿ ಹೇಳಿದ್ದೇವೆ. ಕೆಪಿಸಿಸಿ ಅಧ್ಯಕ್ಷರು ಬದಲಾಗಬೇಕು. ಪದೇ ಪದೆ ಹೇಳುವ ಅವಶ್ಯಕತೆ ಇಲ್ಲ. ಎಲ್ಲವನ್ನೂ ಹೈಕಮಾಂಡ್ ಗಮನಿಸುತ್ತಿದೆ. ಸೂಕ್ತ ನಿರ್ಧಾರವನ್ನು ಹೈಕಮಾಂಡ್ ನಾಯಕರು ಮಾಡುತ್ತಾರೆ ಎಂದು ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ‘ಭೇಟಿ ಕುರಿತು ಗುರುವಾರವೇ ಮಾತನಾಡಿದ್ದೇನೆ. ಊಟಕ್ಕಾಗಿ ಸೇರಿದ್ದೇವೆಯೇ ಹೊರತು ವಿಶೇಷವೇನೂ ಇಲ್ಲ. ಹಿಂದೆ ಕೂಡ ಖರ್ಗೆ ಅವರನ್ನು ಭೇಟಿ ಮಾಡಿದ್ದೆವು. ನಾವು ಆಗಾಗ ಭೇಟಿ ಮಾಡುತ್ತಿರುತ್ತೇವೆ. ಪಕ್ಷದ ಅಧ್ಯಕ್ಷರು ಅಂದ ಮೇಲೆ ಭೇಟಿ ಮಾಡಬೇಕಲ್ಲವೇ ಎಂದು ಪ್ರಶ್ನಿಸಿದರು.
ಭೇಟಿ ವೇಳೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚಿಸಿದಿರಾ? ಎಂಬ ಪ್ರಶ್ನೆಗೆ, ‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಆಗಿಲ್ಲ. ಸಮಯ ಬಂದಾಗ ಹೈಕಮಾಂಡ್ ಮಾಡಲಿದೆ. ನಾವು ಈಗಾಗಲೇ ಹೇಳಬೇಕಾದ್ದನ್ನು ಹೇಳಿದ್ದೇವೆ’ ಎಂದಷ್ಟೇ ಹೇಳಿದರು.
ಡಿ.ಕೆ. ಶಿವಕುಮಾರ್ ಅವರ ಸಂಯಮದ ಪ್ರತಿಕ್ರಿಯೆ
ಪಕ್ಷ ನನಗೆ ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಹುದ್ದೆ, ಜವಾಬ್ದಾರಿ ನೀಡಿದೆ. ಅದನ್ನು ಜವಾಬ್ದಾರಿಯುತವಾಗಿ ನಿಭಾಯಿಸುತ್ತೇನೆ. ಉಳಿದ ಯಾವ ವಿಚಾರಗಳಿಗೂ ನಾನು ಪ್ರತಿಕ್ರಿಯಿಸಲ್ಲ. ನನ್ನ ಗಮನವೇನಿದ್ದರೂ ಪಕ್ಷ ಮತ್ತು ಸರ್ಕಾರದ ಹಿತಾಸಕ್ತಿ ಕಾಪಾಡುವುದರ ಕಡೆಗಿದೆ.
ಅಧಿಕಾರ ಹಂಚಿಕೆ ಒಪ್ಪಂದವಾಗಿಲ್ಲ, ಐದು ವರ್ಷ ನಾನೇ ಮುಖ್ಯಮಂತ್ರಿ ಎಂಬ ಸಿದ್ದರಾಮಯ್ಯ ಅವರ ಘಂಟಾಘೋಷದ ನುಡಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಯಮದ ಪ್ರತಿಕ್ರಿಯೆಯಿದು.
ಯಾವ ವಿಚಾರವಾದರೂ ಕಡ್ಡಿ ಮುರಿದಂತೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಸಿದ್ದರಾಮಯ್ಯ ಅವರ ಹೇಳಿಕೆ ಸೇರಿ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಅತ್ಯಂತ ಹಿಡಿತದ ಪ್ರತಿಕ್ರಿಯೆ ನೀಡಿದರು. ಜತೆಗೆ, ಪಕ್ಷ ಇದ್ದರಷ್ಟೇ ನಾನು. ಪಕ್ಷ ಇಲ್ಲದಿದ್ದರೆ ನಾನಿಲ್ಲ ಎಂದು ನುಡಿದರು.
ಇನ್ನು ಡಿ.ಕೆ.ಶಿವಕುಮಾರ್ಗೆ ಶಾಸಕರ ಬೆಂಬಲವಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಮಾಧ್ಯಮಗಳ ಮುಂದೆ ಪ್ರತಿಕ್ರಿಯಿಸಲು ಶಿವಕುಮಾರ್ ನಿರಾಕರಿಸಿದರು. ಶುಕ್ರವಾರ ಒಂದೇ ದಿನ ನಾಲ್ಕೈದು ಬಾರಿ ಮಾಧ್ಯಮಗಳಿಗೆ ಬೇರೆ ಬೇರೆ ವಿಚಾರಗಳಿಗೆ ಪ್ರತಿಕ್ರಿಯಿಸಿದರೂ, ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಲು ನಯವಾಗಿಯೇ ತಿರಸ್ಕರಿಸಿದರು.
‘ಮಾಧ್ಯಮದವರು ಹೇಗೆ ತಿರುಗಿಸಿ ಕೇಳಿದರೂ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಮತ್ತು ಮಾಧ್ಯಮಗಳ ಪ್ರಶ್ನೆಗೆ ಬಲಿಯಾಗುವುದಿಲ್ಲ. ಪಕ್ಷ ನನಗೆ ಕೆಪಿಸಿಸಿ ಅಧ್ಯಕ್ಷ ಮತ್ತು ಡಿಸಿಎಂ ಜವಾಬ್ದಾರಿ ನೀಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಮಗೆ ಧೀಕ್ಷೆ ನೀಡಿದ್ದು, ನಾವೆಲ್ಲರೂ ಅದನ್ನು ಸಂತೋಷದಿಂದ ಸ್ವೀಕರಿಸಿದ್ದೇವೆ. ಪಕ್ಷ ಸಂಘಟನೆಯತ್ತ ಹೆಚ್ಚಿನ ಗಮನಹರಿಸಿದ್ದೇನೆ. ಅವುಗಳನ್ನು ಹೊರತುಪಡಿಸಿ ಬೇರೆ ಯಾವುದಕ್ಕೂ ಪ್ರತಿಕ್ರಿಯಿಸಲ್ಲ ಎಂದು ಸ್ಪಷ್ಟ ನುಡಿಗಳಲ್ಲಿ ಹೇಳಿದ್ದಾರೆ.
