ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ. ಖರ್ಗೆ, ನಾನು, ಸಿದ್ದರಾಮಯ್ಯ ಎಲ್ಲರೂ ಪಕ್ಷ ಹೇಳಿದಂತೆ ಕೇಳಬೇಕು. ಕಾಂಗ್ರೆಸ್‌ ಏನನ್ನು ಹೇಳುತ್ತದೆ ಅದನ್ನು ಎಲ್ಲರೂ ಕೇಳಬೇಕು. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ: ಡಿ.ಕೆ.ಶಿವಕುಮಾರ್‌ 

ಶೃಂಗೇರಿ(ಏ.11): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಮತ್ತೊಮ್ಮೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಎಳೆತಂದಿದ್ದಾರೆ. ಖರ್ಗೆ ನಮ್ಮ ಪಕ್ಷದ ಹಿರಿಯ ನಾಯಕ. ಎಐಸಿಸಿ ಅಧ್ಯಕ್ಷರಾಗಿರುವ ಅವರು ಮುಖ್ಯಮಂತ್ರಿ ಆಗಬೇಕು ಎಂಬ ಕೂಗು ರಾಜ್ಯದಲ್ಲಿದೆ. ಆದರೆ ಅವರು ಏನನ್ನೂ ಕೇಳಿಲ್ಲ ಎಂದು ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಸೋಮವಾರ ಶೃಂಗೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ಇಚ್ಛೆ ಖರ್ಗೆ ಅವರದ್ದು. ಅದಕ್ಕಾಗಿ ಅವರು ದುಡಿಯುತ್ತಿದ್ದಾರೆ. ಅವರಿಗೆ ಹಿಂದೆ ಅನ್ಯಾಯವಾಗಿದೆ ಎಂಬ ಕೂಗು ಇದೆ. ಎಲ್ಲರೂ ಪಕ್ಷಕ್ಕೆ ನಿಷ್ಠರಾಗಿ ಕೆಲಸ ಮಾಡಬೇಕು. ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ. ಖರ್ಗೆ, ನಾನು, ಸಿದ್ದರಾಮಯ್ಯ ಎಲ್ಲರೂ ಪಕ್ಷ ಹೇಳಿದಂತೆ ಕೇಳಬೇಕು. ಕಾಂಗ್ರೆಸ್‌ ಏನನ್ನು ಹೇಳುತ್ತದೆ ಅದನ್ನು ಎಲ್ಲರೂ ಕೇಳಬೇಕು. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ಮಲ್ಲಿಕಾರ್ಜುನ ಖರ್ಗೆಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ಸಿದ್ಧ: ಡಿಕೆಶಿ

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉನ್ನತ ಸ್ಥಾನ ನೀಡಲಾಗುವುದು. ನಾನು ಶೃಂಗೇರಿ ಶಾರದಾ ಪೀಠದ ಭಕ್ತ. ಶ್ರೀ ಶಾರದಾಂಬೆ ದರ್ಶನ, ಜಗದ್ಗುರುಗಳ ಆಶೀರ್ವಾದ ಪಡೆದುಕೊಳ್ಳಲು ಆಗಾಗ ಪೀಠಕ್ಕೆ ಭೇಟಿ ನೀಡುತ್ತಿದ್ದೇನೆ ಎಂದರು.

ಕಾರ‍್ಯಕ್ರಮ ದಿಢೀರ್‌ ಮೊಟಕು: 

ಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು. ಸಭೆ ಮುಗಿದ ನಂತರ ಧರ್ಮಸ್ಥಳಕ್ಕೆ ಭೇಟಿ ನೀಡಿ ದರ್ಶನ ಪಡೆಯುವ ಕಾರ್ಯಕ್ರಮವಿತ್ತು. ಆದರೆ ಡಿ.ಕೆ.ಶಿವಕುಮಾರ್‌ ತುರ್ತಾಗಿ ದೆಹಲಿಗೆ ತೆರಳಬೇಕಾಗಿ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸಭೆ ಹಾಗೂ ಧರ್ಮಸ್ಥಳ ಭೇಟಿ ರದ್ದುಪಡಿಸಿ ಶೃಂಗೇರಿ ಹೆಲಿಪ್ಯಾಡ್‌ನಿಂದ ಬೆಂಗಳೂರಿಗೆ ತೆರಳಿದರು.

ರಾಜಕಾರಣ ಅಂದ್ರೆ ಫುಟ್ಬಾಲ್ ಅಲ್ಲ, ಚೆಸ್ ಗೇಮ್, ಬಿಜೆಪಿ ಪಟ್ಟಿ ಬರಲಿ ಬಳಿಕ ಮಾತಾಡ್ತೇನೆ: ಡಿಕೆಶಿ

ಸಿಎಂ ಡಿಕೆಶಿಗೆ ಜೈ: 

ಡಿ.ಕೆ.ಶಿವಕುಮಾರ್‌ ಅವರು ಹೆಲಿಪ್ಯಾಡ್‌ಗೆ ತೆರಳಿದಾಗ ಕಾರ್ಯಕರ್ತರು ಜಮಾವಣೆಗೊಂಡು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಜೈ ಎಂದು ಘೋಷಣೆ ಕೂಗತೊಡಗಿದರು. ನೂರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಜೈಕಾರ, ಘೋಷಣೆಗಳನ್ನು ಕೂಗಿದರು. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂಬ ಕಾರ್ಯಕರ್ತರ ಘೋಷಣೆಗಳು ಹೆಲಿಪ್ಯಾಡ್‌ನಲ್ಲಿ ಮೊಳಗತೊಡಗಿತು. ನಂತರ ಕಾಪ್ಟರ್‌ ಮೂಲಕ ಅವರು ತೆರಳಿದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.