ಶಾಸಕ ಲಕ್ಷ್ಮಣ ಸವದಿ ಯಾವುದೇ ಕಾರಣಕ್ಕೂ ಬಿಜೆಪಿಗೆ ಮರಳುವುದಿಲ್ಲ ಮತ್ತು ಅವರನ್ನು ಸೇರಿಸಿಕೊಳ್ಳುವುದಿಲ್ಲ ಎಂದು ರಮೇಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಉಚ್ಚಾಟಿತ ನಾಯಕ ಯತ್ನಾಳರನ್ನು ಪಕ್ಷಕ್ಕೆ ಮರಳಿ ಕರೆತರುವ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು.

ಅಥಣಿ (ಏ.8): ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿರುವ ಲಕ್ಷ್ಮಣ ಸವದಿ ಯಾವುದೇ ಕಾರಣಕ್ಕೂ ಬಿಜೆಪಿಗೆ ಮರಳಿ ಬರುವುದಿಲ್ಲ, ಒಂದು ವೇಳೆ ಬಿಜೆಪಿಗೆ ಬಂದರೆ ನಾವು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪಟ್ಟಣದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಲಕ್ಷ್ಮಣ ಸವದಿ ಅವರು ಪಕ್ಷವನ್ನು ಬಿಟ್ಟು ಬಿಜೆಪಿ ನಾಯಕರ ಬಗ್ಗೆ ಮತ್ತು ಮತಕ್ಷೇತ್ರದ ಜನರಿಗೆ ಹೇಳಿದ ಭಾಷಣಗಳನ್ನು ಎಲ್ಇಡಿ ಸ್ಕ್ರೀನ್ ಮೂಲಕ ತೋರಿಸುತ್ತೇವೆ. ಅವರು ಬಿಜೆಪಿಗೆ ಬರಲಿದ್ದಾರೆ ಎಂಬುದನ್ನು ಮತಕ್ಷೇತ್ರದಲ್ಲಿ ಸೃಷ್ಟಿ ಮಾಡಲಾಗುತ್ತಿದೆ. ಲಕ್ಷ್ಮಣ ಸವದಿ ಬಿಜೆಪಿಗೆ ಬರುತ್ತಾರೆ ಎಂದು ಬೀದಿಯಲ್ಲಿ ಜನ ಹೇಳುತ್ತಿದ್ದಾರೆ. ನಾನು ಹೇಳಿಲ್ಲ, ಅಥಣಿಯ ಬಿಜೆಪಿ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಸುವ ತಂತ್ರಗಾರಿಕೆಯನ್ನು ಲಕ್ಷ್ಮಣ ಸವದಿ ಹಾಗೂ ಅವರ ಬೆಂಬಲಿಗರು ಮಾಡುತ್ತಿದ್ದಾರೆ. ಇಂತಹ ತಂತ್ರಗಾರಿಕೆಯ ಮಾತುಗಳಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಯಾವುದೇ ಕಿವಿಗೊಡದೆ ಸಂಘಟಿತರಾಗಿ ಕೆಲಸ ಮಾಡಬೇಕು. 

ಬರುವ 2028ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ನಾವು ಇಂದಿನಿಂದಲೇ ಕೆಲಸ ಮಾಡಬೇಕಾಗಿದೆ. ಈ ಬಾರಿ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಾಗಿ ಬಿಜೆಪಿ ಗೆಲ್ಲಿಸುವ ನಿಟ್ಟಿನಲ್ಲಿ ಸಂಘಟನೆ ಮಾಡುತ್ತಿದ್ದೇವೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸುವುದು ಒಂದೇ ಗುರಿಯೆಂದು ತಿಳಿಸಿದರು.

ಯತ್ನಾಳ ಮರಳಿ ಬಿಜೆಪಿ ಬರ್ತಾರೆ: 

ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಮರಳಿ ಬಿಜೆಪಿಗೆ ಕರೆತರುವ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ಒಂದು ವೇದಿಕೆ ಸಜ್ಜಾಗಿದೆ. ಬಾಗಲಕೋಟೆಯಲ್ಲಿ ನಮ್ಮ ಅಭ್ಯರ್ಥಿ ಪರ ಯತ್ನಾಳ ಪ್ರಚಾರ ನಡೆಸಿದ್ದಾರೆ. ಯತ್ನಾಳ ಪ್ರಚಾರದಿಂದ ನಮ್ಮ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ. ಯತ್ನಾಳ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳುವುದರಿಂದ ಹಿಂದುತ್ವ ಸಂಘಟನೆ ಮತ್ತು ಬಿಜೆಪಿ ಬಲಿಷ್ಠ ಗೊಳಿಸಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಯತ್ನಾಳ ಬಂದ್ರೆ ಪಕ್ಷಕ್ಕೆ ಅನುಕೂಲವಾಗಲಿದೆ. ಬಾಗಲಕೋಟೆ ಮತ್ತು ದಾವಣಗೆರೆಯ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದವರು ಎಲ್ಲರು ಒಳ್ಳೆಯ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ಆಶಾಭಾವನೆಯನ್ನು ನಾವು ಹೊಂದಿದ್ದೇವೆ ಎಂದರು