ಕೋಮುವಾದಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ ಜೆಡಿಎಸ್‌ಗೆ ಯಾವ ಸಿದ್ಧಾಂತವಿದೆ? ಜೆಡಿಎಸ್‌ಗೆ ಯಾವುದೇ ತತ್ವ ಸಿದ್ಧಾಂತಗಳಿಲ್ಲ. ಅದೊಂದು ಅವಕಾಶವಾದಿ ಪಕ್ಷ. ಜೆಡಿಎಸ್‌ನವರು ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ. ಜೆಡಿಎಸ್‌ ಮುಂದಿರುವ ಜಾತ್ಯತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೆ: ದಿನೇಶ್‌ ಗುಂಡೂರಾವ್‌ 

ಬೆಂಗಳೂರು(ಜು.17):  ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ನಾವು ಅನೇಕ ಬಾರಿ ಹೇಳಿದಂತೆ ಜೆಡಿಎಸ್‌ ಪಕ್ಷ ಬಿಜೆಪಿಯ ‘ಬಿ’ ಟೀಂ ಎಂಬುದು ಸತ್ಯ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಟೀಕಿಸಿದ್ದಾರೆ.

ಈ ಸಂಬಂಧ ‘ಕನ್ನಡ ಪ್ರಭ’ ವರದಿಯನ್ನು ಉಲ್ಲೇಖಿಸಿ ಸರಣಿ ಟ್ವೀಟ್‌ ಮಾಡಿರುವ ಅವರು, ಕೋಮುವಾದಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ ಜೆಡಿಎಸ್‌ಗೆ ಯಾವ ಸಿದ್ಧಾಂತವಿದೆ? ಜೆಡಿಎಸ್‌ಗೆ ಯಾವುದೇ ತತ್ವ ಸಿದ್ಧಾಂತಗಳಿಲ್ಲ. ಅದೊಂದು ಅವಕಾಶವಾದಿ ಪಕ್ಷ. ಜೆಡಿಎಸ್‌ನವರು ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ. ಜೆಡಿಎಸ್‌ ಮುಂದಿರುವ ಜಾತ್ಯತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೆ. 2006ರಲ್ಲಿ ಬಿಜೆಪಿ ಜೊತೆ ಸೇರಿ 20-20 ಸರ್ಕಾರ ಮಾಡಿದಾಗಲೇ ಜಾತ್ಯತೀತ ತತ್ವಕ್ಕೆ ಕುಮಾರಸ್ವಾಮಿ ಎಳ್ಳು ನೀರು ಬಿಟ್ಟಿದ್ದರು. ಆಗಲೇ ಜೆಡಿಎಸ್‌ ಅವನತಿ ಶುರುವಾಗಿದ್ದು, 2004ರಲ್ಲಿ 59 ಸ್ಥಾನ ಗೆದ್ದದ್ದ ಜೆಡಿಎಸ್‌ ಈ ಬಾರಿ 19 ಸ್ಥಾನಕ್ಕೆ ಕುಸಿಯಲು ಆ ನಕಲಿ ಜಾತ್ಯತೀತ ಸಿದ್ಧಾಂತವೇ ಕಾರಣ ಎಂದು ಹೇಳಿದ್ದಾರೆ.

ಆಶಾ ಕಾರ್ಯಕರ್ತೆಯರ ಸೇವೆ ಕಾಯಂ: ಸಚಿವ ಗುಂಡೂರಾವ್‌ ಹೇಳಿದ್ದಿಷ್ಟು

ಬಿಜೆಪಿಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ. ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು. ಈ ಮೂಲಕವಾದರೂ ಕುಮಾರಸ್ವಾಮಿ ಅವರ ಸುಳ್ಳು ಜಾತ್ಯತೀತತೆಯ ನಕಲಿ ಶ್ಯಾಮನ ಅವತಾರ ಕೊನೆಯಾಗಲಿ ಎಂದು ಕುಟುಕಿದ್ದಾರೆ.