ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಶಿವರಾಜ್‌ಕುಮಾರ್‌ ಅವರ ಸಿನಿಮಾ ಮತ್ತು ಜಾಹೀರಾತುಗಳಿಗೆ ನಿರ್ಬಂಧ ಹೇರಬೇಕು ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಆಗ್ರಹಿಸಿದೆ.

ಬೆಂಗಳೂರು (ಮಾ.23): ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಶಿವರಾಜ್‌ಕುಮಾರ್‌ ಅವರ ಸಿನಿಮಾ ಮತ್ತು ಜಾಹೀರಾತುಗಳಿಗೆ ನಿರ್ಬಂಧ ಹೇರಬೇಕು ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಆಗ್ರಹಿಸಿದೆ. ಈ ಸಂಬಂಧ ಶುಕ್ರವಾರ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ಆರ್‌.ರಘು ದೂರು ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಿವರಾಜ್‌ಕುಮಾರ್‌ ಅವರು ರಾಜ್ಯದಲ್ಲಿ ಖ್ಯಾತ ನಟರಾಗಿದ್ದು, ಚುನಾವಣೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಕಾಂಗ್ರೆಸ್‌ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ಸಿನಿಮಾ ಮಂದಿರಗಳು, ಟಿವಿ ವಾಹಿನಿಗಳು, ಸಾಮಾಜಿಕ ಜಾಲತಾಣಗಳಲ್ಲಿ ಅವರ ಸಿನಿಮಾ, ಜಾಹೀರಾತುಗಳ ಪ್ರದರ್ಶನಕ್ಕೆ ನಿಷೇಧ ಹೇರಬೇಕು. ಚುನಾವಣೆ ಮುಗಿಯುವವರೆಗೆ ನಿರ್ಬಂಧಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ಬೆಳಗಾವಿಗೆ ಜಗದೀಶ್‌ ಶೆಟ್ಟರ್‌ ಹೆಸರೇ ಮುಂಚೂಣಿಯಲ್ಲಿದೆ: ಪ್ರಲ್ಹಾದ್‌ ಜೋಶಿ

ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಬೇಕಾಗಿದೆ. ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಿದೆ. ಶಿವರಾಜ್‌ ಕುಮಾರ್‌ ಅವರ ಜನಪ್ರಿಯತೆ ಮತ್ತು ಚಲನಚಿತ್ರಗಳು ಮತದಾರರ ಮೇಲೆ ಪ್ರಭಾವ ಬೀರಲಿವೆ. ಈ ಹಿನ್ನೆಲೆಯಲ್ಲಿ ಸಿನಿಮಾ, ಜಾಹೀರಾತುಗಳಿಗೆ ನಿರ್ಬಂಧ ಹೇರಬೇಕು ಎಂದು ಆಗ್ರಹಿಸಲಾಗಿದೆ. ಶಿವರಾಜ್‌ಕುಮಾರ್‌ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅವರ ಪರವಾಗಿಯೂ ಶಿವರಾಜ್‌ ಕುಮಾರ್‌ ಪ್ರಚಾರ ಕೈಗೊಂಡಿದ್ದಾರೆ.