ಜಾತಿ ಧರ್ಮಗಳ ಮಧ್ಯೆ ವಿಷಬೀಜ ಬಿತ್ತುವುದು ಕಾಂಗ್ರೆಸ್ ಜಾಯಮಾನ. ಪ್ರಧಾನಿ ಮೋದಿರವರು ಎಂದಿಗೂ ಜಾತಿ ಧರ್ಮವನ್ನು ಚುನಾವಣೆಗೆ ಬಳಸಿಕೊಳ್ಳಲಿಲ್ಲವೆಂದು ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.  

ಚಿತ್ರದುರ್ಗ (ಏ.10): ಜಾತಿ ಧರ್ಮಗಳ ಮಧ್ಯೆ ವಿಷಬೀಜ ಬಿತ್ತುವುದು ಕಾಂಗ್ರೆಸ್ ಜಾಯಮಾನ. ಪ್ರಧಾನಿ ಮೋದಿರವರು ಎಂದಿಗೂ ಜಾತಿ ಧರ್ಮವನ್ನು ಚುನಾವಣೆಗೆ ಬಳಸಿಕೊಳ್ಳಲಿಲ್ಲವೆಂದು ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು. ನಗರದ ಕಾಟಮ್ಮ, ವೀರನಾಗಪ್ಪ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಬಿಜೆಪಿ, ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ದೇಶದ ಏಳಿಗೆ, ಭಾರತ ಸುರಕ್ಷಿತವಾಗಿರಬೇಕಾದರೆ ಮತ್ತೊಮ್ಮೆ ನರೇಂದ್ರಮೋದಿ ಪ್ರಧಾನಿಯಾಗಬೇಕು. ಅದಕ್ಕಾಗಿ ಕಾರ್ಯಕರ್ತರು ಪ್ರತಿ ಮನೆ ಮನೆಗೆ ಹೋಗಿ ಯುದ್ದೋಪಾದಿಯಲ್ಲಿ ಸೈನಿಕರಂತೆ ಕೆಲಸ ಮಾಡಬೇಕು ಎಂದರು.

Add Asianetnews Kannada as a Preferred SourcegooglePreferred

ಮುಂದಿನ ಮೂರು ವರ್ಷಗಳಲ್ಲಿ ಭಾರತ ಶ್ರೀಮಂತರ ಪಟ್ಟಿಯಲ್ಲಿ ವಿಶ್ವದಲ್ಲಿಯೆ ಮೂರನೆ ಸ್ಥಾನಕ್ಕೆ ಬರಲಿದೆ. 25 ಕೋಟಿ ಜನ ಬಡತನ ರೇಖೆಗಿಂತ ಮೇಲೆ ಬಂದಿದ್ದಾರೆ. ದೇವಾಲಯಗಳನ್ನು ಕಟ್ಟಿಸುವುದು ಎಷ್ಟು ಮುಖ್ಯವೋ, ಶೌಚಾಲಯಗಳನ್ನು ಕಟ್ಟಿಸುವುದು ಅಷ್ಟೆ ಮುಖ್ಯವೆಂದು ತಿಳಿದು ನರೇಂದ್ರಮೋದಿ ದೇಶದಲ್ಲಿ ಹನ್ನೊಂದು ಕೋಟಿ ಶೌಚಾಲಯಗಳನ್ನು ನಿರ್ಮಾಣ ಮಾಡಿದ್ದಾರೆಂದು ಹೇಳಿದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಜಾರಿಗೆ ತಂದ ಎಲ್ಲಾ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರದ್ದುಪಡಿಸಿ ಭಂಡತನದ ಭಾಷಣ ಮಾಡುತ್ತಿದ್ದಾರೆ. 

ದೇಶದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ ಇದು: ಬಿ.ವೈ.ವಿಜಯೇಂದ್ರ

ಬಡವರ ಮಕ್ಕಳು ಡಾಕ್ಟರ್ ಗಳಾಗಬೇಕೆಂಬ ಕಾರಣಕ್ಕೆ ಮೋದಿ ಮೆಡಿಕಲ್ ಕಾಲೇಜುಗಳ ನಿರ್ಮಾಣಕ್ಕೆ ಒತ್ತು ಕೊಟ್ಟ ಪ್ರಯುಕ್ತ ಹತ್ತು ವರ್ಷಗಳಲ್ಲಿ ಒಂದು ಲಕ್ಷದ ಐವತ್ತು ಸಾವಿರ ಡಾಕ್ಟರ್ ಗಳು ಹೊರ ಬಂದಿದ್ದಾರೆ. ಮೋಸಗಾರ ಪಕ್ಷ ಕಾಂಗ್ರೆಸ್‍ನ್ನು ನಂಬಬೇಡಿ. ಕಾಂಗ್ರೆಸ್ ಪಕ್ಷ ಭಯೋತ್ಪಾದಕರ ಹುಟ್ಟುಹಾಕಿದ್ದು, ಮೋದಿ ಆಡಳಿತದಲ್ಲಿ ಭಯೋತ್ಪಾದಕರು ಬಿಲ ಸೇರಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್‍ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗೂ ಇಲ್ಲ. ಅದಕ್ಕಾಗಿ ಮೋದಿ ಕೈಬಲಪಡಿಸಿ ಮೂರನೆ ಬಾರಿಗೆ ಪ್ರಧಾನಿಯಾಗಲು ಸಹಕರಿಸಿ ಎಂದು ಕಾರ್ಯಕರ್ತರಲ್ಲಿ ಗೋವಿಂದ ಕಾರಜೋಳ ವಿನಂತಿಸಿದರು.

ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ ಗೋವಿಂದ ಕಾರಜೋಳರವರು ನೀರಾವರಿ ಸಚಿವರಾಗಿದ್ದಾಗ ರೈತರಿಗೆ ಅನೇಕ ಚೆಕ್‍ಡ್ಯಾಂಗಳನ್ನು ಕೊಟ್ಟಿದ್ದಾರೆ. ಅಪ್ಪಲ್ ಭದ್ರಾಗೆ ಕೇಂದ್ರ ಸರ್ಕಾರ ಐದು ಸಾವಿರದ ಮುನ್ನೂರು ಕೋಟಿ ರು. ಘೋಷಣೆ ಮಾಡುವುದರಲ್ಲಿ ಇವರ ಪಾತ್ರ ಬಹಳಷ್ಟಿದೆ ಎಂದರು. ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ ಭಾರತೀಯ ಜನತಾಪಕ್ಷಕ್ಕೆ ತನ್ನದೆ ಆದ ಶಕ್ತಿಯಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದು ಪಕ್ಷಕ್ಕೆ ಆನೆ ಬಲ ಬಂದಿದೆ. ಗೋವಿಂದ ಕಾರಜೋಳ ಹೆಚ್ಚು ಮತಗಳ ಅಂತರದಿಂದ ಗೆಲ್ಲುವುದರಲ್ಲಿ ಸಂಶಯವಿಲ್ಲ. ಹೈಕಮಾಂಡ್ ತೀರ್ಮಾನಕ್ಕೆ ಬದ್ದನಾಗಿ ಅಭ್ಯರ್ಥಿ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಮಾತನಾಡಿ ದೇಶದ ಅಭಿವೃದ್ಧಿ ದೃಷ್ಟಿಯಿಂದ ನಮ್ಮ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಬೂತ್ ಮಟ್ಟದಲ್ಲಿ ಉಭಯ ಪಕ್ಷಗಳು ಒಂದಾಗಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವಿಗೆ ಪ್ರಾಮಾಣಿಕಾಗಿ ಶ್ರಮಿಸುತ್ತೇವೆಂದು ಹೇಳಿದರು. ಅಮಿತ್‍ ಶಾ ಚಿತ್ರದುರ್ಗಕ್ಕೆ ಬಂದಾಗ ಮದಕರಿನಾಯಕ ಥೀಂ ಪಾರ್ಕ್ ನಿರ್ಮಾಣ ಮಾಡುವುದಾಗಿ ವಾಗ್ದಾನ ಮಾಡಿದ್ದರು. ಅದು ಮುನ್ನೆಲೆಗೆ ಬರುವಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ ಎಂದು ಬಿಜೆಪಿ ಮುಖಂಡರಲ್ಲಿ ಮನವಿ ಮಾಡಿದರು.

ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ ಭಾರತದ ಶತ್ರು ರಾಷ್ಟ್ರಗಳು ನರೇಂದ್ರಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗುವುದನ್ನು ತಡೆಯುವ ಹುನ್ನಾರ ನಡೆಸುತ್ತಿರುವುದನ್ನು ಮಾಧ್ಯಮಗಳು ಬಹಿರಂಗಪಡಿಸಿವೆ. ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಗೋವಿಂದ ಕಾರಜೋಳರವರನ್ನು ಎರಡು ಲಕ್ಷಗಳ ಮತಗಳ ಅಂತರದಿಂದ ಗೆಲ್ಲಿಸಿ ಮೋದಿ ಕೈಬಲಪಡಿಸಿ ಎಂದು ಕಾರ್ಯಕರ್ತರಲ್ಲಿ ಕೇಳಿಕೊಂಡರು.

Lok Sabha Election 2024: ಕಾಂಗ್ರೆಸ್ ಮಣಿಸಲು ಕೊಡಗು ಬಿಜೆಪಿ, ಜೆಡಿಎಸ್ ಮೈತ್ರಿ ಮುಖಂಡರ ಪ್ಲಾನ್!

ಜೆಡಿಎಸ್ ಜಿಲ್ಲಾಧ್ಯಕ್ಷ ಜಯಣ್ಣ, ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಜೆಡಿಎಸ್ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ತಾಲೂಕು ಅಧ್ಯಕ್ಷ ತಿಮ್ಮಣ್ಣ, ಯುವ ಘಟಕದ ಅಧ್ಯಕ್ಷ ಪ್ರತಾಪ್‍ಜೋಗಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್‍ಸಿದ್ದಾಪುರ, ಸಂಪತ್‍ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಗದೀಶ್, ಡಾ.ಸಿದ್ದಾರ್ಥ, ನಗರಸಭೆ ಸದಸ್ಯರಾದ ಹರೀಶ್, ಸುರೇಶ್, ದೀಪು ಇನ್ನು ಅನೇಕರು ವೇದಿಕೆಯಲ್ಲಿದ್ದರು.