ಪ್ರಿಯಾಂಕ್ ಖರ್ಗೆ ಮಹಿಳಾ ವಿರೋಧಿ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ಮಹಿಳಾ ಮೋರ್ಚ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

 ಕೊಪ್ಪಳ (ಆ.19): ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಶಾಸಕ ಪ್ರಿಯಾಂಕ್‌ ಖರ್ಗೆ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಗುರುವಾರ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಶಾಸಕ ಪ್ರಿಯಾಂಕ್‌ ಖರ್ಗೆ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಬೆಂಕಿಯನ್ನು ಹಚ್ಚಿ, ತೀವ್ರ ವಾಗ್ದಾಳಿ ನಡೆಸಿದರು.

Add Asianetnews Kannada as a Preferred SourcegooglePreferred

ಬಿಜೆಪಿ ಸರ್ಕಾರದಲ್ಲಿ ಉದ್ಯೋಗ ಬೇಕೆಂದರೆ ಮಹಿಳೆಯರು ಮಂಚ ಹತ್ತಬೇಕು: ಪ್ರಿಯಾಂಕ ಖರ್ಗೆ ವಾಗ್ದಾಳಿ

ಪ್ರಿಯಾಂಕ್‌ ಖರ್ಗೆ(Priyanka Kharge)ಯವರು ನಾಲಿಗೆ ಹರಿಬಿಡುವ ಮೂಲಕ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. ಮಹಿಳೆಯರ ಬಗ್ಗೆ ಗೌರವ ಇರಿಸಿಕೊಳ್ಳದ ಇವರು ರಾಜಕೀಯಕ್ಕೆ ಯೋಗ್ಯರಲ್ಲ. ಇಂಥವರು ಕೂಡಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಆಗ್ರಹಿಸಿದರು. ಇಂಥ ಮಹಿಳಾ ವಿರೋಧಿ ಹೇಳಿಕೆಯನ್ನು ನೀಡಿದಾಗ ಸರ್ಕಾರವೂ ಸುಮ್ಮನೆ ಇರುವುದು ಸರಿಯಲ್ಲ. ಕೂಡಲೇ ಇವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಹಾಗೂ ಶಾಸಕ ಪ್ರಿಯಾಂಕ್‌ ಖರ್ಗೆ ಅವರು ರಾಜ್ಯದ ಮಹಿಳೆಯರ ಕ್ಷಮೆ ಕೇಳದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಎಚ್ಚರಿಕೆ ನೀಡಿದರು. ನಗರದ ಅಶೋಕ ವೃತ್ತದಿಂದ ಮುಖ್ಯರಸ್ತೆಯ ಮೂಲಕ ಬಸವೇಶ್ವರ ವೃತ್ತದ ಮಾರ್ಗವಾಗಿ ಜಿಲ್ಲಾಡಳಿತ ಭವನದವರೆಗೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳಿಕ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿಗೆ ಮನವಿ ಸಲ್ಲಿಸಿದರು.

ಪ್ರಿಯಾಂಕ್ ಖರ್ಗೆ ಆರೋಪಿಸ್ತಾರೆ, ದಾಖಲೆ ನೀಡಲ್ಲ: ಭಷ್ಟಾಚಾರ ಅಂದ್ರೆ ಸಿದ್ದು ಸರ್ಕಾರ: ಕಟೀಲ್‌

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ(BJP jilla mahila morcha) ಅಧ್ಯಕ್ಷೆ ವಾಣಿಶ್ರೀ ಮಠದ, ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿ ಸದಸ್ಯೆ ಶೋಭಾ ನಗರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೀತಾ ಮುತ್ತಾಳ, ರತ್ನಕುಮಾರಿ, ಗೀತಾ ಪಾಟೀಲ್‌, ಮಂಜುಳಾ ಕರಡಿ, ಮಹಾಲಕ್ಷ್ಮಿ ಕಂದಾರಿ ಸೇರಿದಂತೆ ಮತ್ತಿತರರಿದ್ದರು.

ಸರ್ಕಾರದ ವಿರುದ್ಧವೇ ಘೋಷಣೆ!

ಶಾಸಕ ಪ್ರಿಯಾಂಕ್‌ ಖರ್ಗೆ ಅವರು ನೀಡಿರುವ ಮಹಿಳಾ ವಿರೋಧಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸುವ ಭರದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಸರ್ಕಾರದ ವಿರುದ್ಧವೂ ಘೋಷಣೆ ಕೂಗಿ ಮುಜುಗರಕ್ಕೀಡಾದರು. ಅಲ್ಲದೇ ಪ್ರಿಯಾಂಕ್‌ ಖರ್ಗೆ ಎಂದು ಕೂಗುವ ಬದಲು ಪ್ರಿಯಾಂಕ್‌ ಗಾಂಧಿ ಎಂದು ಕೆಲವರು ಕೂಗಿದರು.