ರಾಜ್ಯದ ಸಾರಥ್ಯ ಬ್ಲ್ಯಾಕ್‌ ಹಾರ್ಸ್ ಕೈಗೆ ಸಿಗಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.

ಬೆಳಗಾವಿ (ಅ.30): ರಾಜ್ಯದ ಸಾರಥ್ಯ ಬ್ಲ್ಯಾಕ್‌ ಹಾರ್ಸ್ ಕೈಗೆ ಸಿಗಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ. ನವೆಂಬರ್‌ನಲ್ಲಿ ರಾಜ್ಯದಲ್ಲಿ ಕ್ರಾಂತಿ ಆಗಲಿದೆ. ಡಿ.ಕೆ.ಶಿವಕುಮಾರ್‌ ಅವರನ್ನು ಸಿಎಂ ಮಾಡುತ್ತೇವೆ ಎಂದು ನೀವು ನಿರ್ಧರಿಸಿದರೆ ನಾನು ಸತೀಶ ಜಾರಕಿಹೊಳಿ ಪರವಾಗಿ ನಿಲ್ಲುತ್ತೇನೆ ಎಂದು ಸಿದ್ದರಾಮಯ್ಯ ಸಂದೇಶ ಕೊಟ್ಟಿದ್ದಾರೆ.

ತಮ್ಮ ಮಗನನ್ನು ಕಳಿಸಿ ಸಂದೇಶ ಸಾರಿದ್ದಾರೆ. ಹೀಗಾಗಿ, ಸಿಎಂ ಪುತ್ರ ಕೂಡ ಬೆಳಗಾವಿಗೆ ಬಂದು ಸತೀಶ್ ಜಾರಕಿಹೊಳಿ‌ ಹೆಸರು ಹೇಳಿ ಹೋಗಿದ್ದಾರೆ. ಆದರೆ, ಡಿ.ಕೆ.ಶಿವಕುಮಾರ ಆಗಲಿ, ಸತೀಶ ಜಾರಕಿಹೊಳಿ ಆಗಲಿ ಮುಖ್ಯಮಂತ್ರಿ ಆಗುವುದಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ. ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಆಗಲಿದೆ. ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಸಿಎಂ ಆಗಲಿದ್ದಾರೆ ಎಂದು ಹೇಳಿದರು.

ಸರ್ಕಾರಿ ಜಾಗದಲ್ಲಿ ನಮಾಜ್‌ ಕೂಡ ನಿಷೇಧಿಸಿ: ಕಾಂಗ್ರೆಸ್‌ ಸರ್ಕಾರವು ಆರ್‌ಎಸ್‌ಎಸ್‌ನಂತಹ ಸಂಘಟನೆಗಳ ಚಟುವಟಿಕೆಗಳಿಗೆ ಕಡಿವಾಣ ಹಾಕಿದ ಬೆನ್ನಲ್ಲೇ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಕಿಡಿಕಾರಿದ್ದು, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಸರ್ಕಾರವೇ ಪರಿಚಯಿಸಿರುವ ನಿಯಮಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದು. ಸರ್ವ ಜನಾಂಗದ ಶಾಂತಿಯ ತೋಟ ಎಂಬ ಸರ್ಕಾರದ ಆಶಯ ಎಲ್ಲರಿಗೂ ಅನ್ವಯ ಆಗಬೇಕು. ರಾಜ್ಯ ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಿ ಎಂದು ಯತ್ನಾಳ್‌ ಆಗ್ರಹಿಸಿದ್ದಾರೆ.

ಪತ್ರದಲ್ಲಿ ಏನಿದೆ?

ಖಾಸಗಿ ಸಂಘ-ಸಂಸ್ಥೆಗಳು ಸರ್ಕಾರಿ ಆಸ್ತಿಗಳು, ಶಿಕ್ಷಣ ಸಂಸ್ಥೆಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಖಾಸಗಿ ಅಥವಾ ಸಾಂಸ್ಥಿಕ ಉದ್ದೇಶಗಳಿಗಾಗಿ ಬಳಸುವುದನ್ನು ನಿರ್ಬಂಧಿಸುವ ಸರ್ಕಾರದ ಇತ್ತೀಚಿನ ನಿರ್ಧಾರದ ಹಿನ್ನೆಲೆಯಲ್ಲಿ, ಸಮಾಜದ ಎಲ್ಲ ವಿಭಾಗಗಳಲ್ಲಿ ತಟಸ್ಥತೆ ಮತ್ತು ನ್ಯಾಯಸಮ್ಮತ ಒಂದೇ ತತ್ವವನ್ನು ಏಕರೂಪವಾಗಿ ಜಾರಿಗೊಳಿಸುವುದು ಅತ್ಯಗತ್ಯ. ಸಕ್ಷಮ ಅಧಿಕಾರಿಗಳಿಂದ ಅನುಮತಿ ಪಡೆಯದೆ, ಜನರು ರಸ್ತೆಗಳು ಮತ್ತು ಸರ್ಕಾರಿ ಆವರಣದಲ್ಲಿ ನಮಾಜ್ ಮಾಡುವುದನ್ನು ನಾವು ನೋಡಿದ್ದೇವೆ. ಇಂತಹ ಚಟುವಟಿಕೆಗಳು ವಾಹನ ಮತ್ತು ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತವೆ. ಹೀಗಾಗಿ ಸರ್ಕಾರಿ ಕಚೇರಿಗಳು ಅಥವಾ ಯಾವುದೇ ಇತರೆ ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ನಮಾಜ್ ಮಾಡಲು ಅವಕಾಶ ನೀಡಬಾರದು.