ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮಾರಂಭದಿಂದಾಗಿ ಉಂಟಾದ ಟ್ರಾಫಿಕ್ ಜಾಮ್ನಿಂದಾಗಿ ಹಲವು ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ. ನೀಟ್ ವಿದ್ಯಾರ್ಥಿಗಳ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುತ್ತಿದೆ ಎಂದು ಕಿಡಿಕಾರಿದರು.
ಬೆಂಗಳೂರು (ಜೂ.23): ಕಾಂಗ್ರೆಸ್ ಸಮಾರಂಭದಿಂದಾಗಿ ಭಾನುವಾರ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಹಲವು ವಿದ್ಯಾರ್ಥಿಗಳು ನೀಟ್(NEET) ಪರೀಕ್ಷೆ ಬರೆಯುವುದರಿಂದ ವಂಚಿತರಾಗಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ(MP Tejasvi Surya) ಆರೋಪಿಸಿದ್ದಾರೆ.
ಭಾನುವಾರ ದೇಶಾದ್ಯಂತ ನೀಟ್ ಪರೀಕ್ಷೆ ಆಯೋಜಿಸಲಾಗಿತ್ತು. ಹೀಗಿದ್ದರೂ ಕೆಪಿಸಿಸಿ ಅಧ್ಯಕ್ಷ(KPCC President)ರಾಗಿ ಹರಿಪ್ರಸಾದ್(BK Hariprasad) ಅಧಿಕಾರ ಸ್ವೀಕಾರ ಸಮಾರಂಭವನ್ನು ಆಯೋಜಿಸಿ ಕಾಂಗ್ರೆಸ್ನವರು ಸಾರ್ವಜನಿಕರಿಗೆ ತೊಂದರೆಯಾಗುವಂತೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಷ್ಟೇ ಅಲ್ಲ, ಹಲವು ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪಲು ಸಾಧ್ಯವಾಗದೇ ನೀಟ್ ಪರೀಕ್ಷೆಯಿಂದ ವಂಚಿತರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸಮಾವೇಶದಿಂದ ಟ್ರಾಫಿಕ್ ಜಾಮ್
ಟ್ರಾಫಿಕ್ ಜಾಮ್ನಿಂದಾಗಿ ಪರೀಕ್ಷೆಯಿಂದ ವಂಚಿತರಾದ ಮಕ್ಕಳು ಅಳುವುದು, ಅಂಗಾಲಾಚುವುದು ಕಂಡುಬಂದಿದೆ. ಮಕ್ಕಳು ಪರೀಕ್ಷೆಗೆ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಾರೆ. ಅದರಲ್ಲೂ ಒಂದು ಸಲ ಪರೀಕ್ಷೆ ಮುಂದೂಡಲಾಗಿತ್ತು. ಆದ್ದರಿಂದ ಕಾಂಗ್ರೆಸ್ ಕಾರ್ಯಕ್ರಮವನ್ನು ಒಂದು ದಿವಸ ಮುಂದೂಡಿದ್ದರೆ ಈ ರೀತಿ ಆಗುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ನವರು ಢೋಂಗಿ ರಾಜಕಾರಣ ಮಾಡುತ್ತಿದ್ದಾರೆ. ಯಾವಾಗ ಪರೀಕ್ಷೆ ಇರುತ್ತದೆಯೋ ಆಗ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಬಾರದು. ಮುಖಂಡರ ಹುಟ್ಟುಹಬ್ಬ, ದೇವಸ್ಥಾನ-ಮಸೀದಿಗಳ ಉದ್ಘಾಟನೆ, ಕಾರ್ಯಕ್ರಮ ಎಂದು ರಸ್ತೆ ಬಂದ್ ಮಾಡುತ್ತಾರೆ. ಇದೆಲ್ಲಾ ಇನ್ನೂ ಎಷ್ಟು ದಿವಸ ನಡೆಯಬೇಕು. ವಿಐಪಿ ಸಂಸ್ಕೃತಿ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.


