ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿವೆ. ಬಿಜೆಪಿ ಒತ್ತಡ ಮತ್ತು ಇ.ಡಿ ತನಿಖೆಯ ನಡುವೆ, ನಾಗೇಂದ್ರ ಅವರು ಸ್ವತಃ ರಾಜೀನಾಮೆ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿವೆ. ಆದರೆ, ಈ ವರದಿಗಳ ಬಗ್ಗೆ ಸಚಿವರು ನೀಡಿದ ಸ್ಪಷ್ಟನೆ ಏನು ತಿಳಿಯಿರಿ.
ಬೆಂಗಳೂರು (ಆ.26): ರಾಜ್ಯಪಾಲರು ಸಚಿವ ಸ್ಥಾನದಿಂದ ತೆರವುಗೊಳಿಸುವ ಮುನ್ನವೇ ವಾಲ್ಮೀಕಿ ಹಗರಣದ ಆರೋಪಿ ಬಿ. ನಾಗೇಂದ್ರ ಅವರು ತಾವೇ ಸ್ವತಃ ರಾಜೀನಾಮೆ ನೀಡಲಿದ್ದಾರೆ. ರಾಜಕೀಯ ಪಡಸಾಲೆಯಲ್ಲಿ ನಡೆದ ಚರ್ಚೆಯಂತೇ ನಡೆದಲ್ಲಿ ಇಂದು ಸಂಜೆ ವೇಳೆಗೆ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಸಲ್ಲಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದಿಂದ ಹೊರ ನಡೆಯಲಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ.
ರಾಜೀನಾಮೆಗೆ ಸಿದ್ಧ ಎಂದಿದ್ದ ಸಚಿವರು?:
ವಿಪಕ್ಷ ಬಿಜೆಪಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ನಿರಂತರವಾಗಿ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ, ರಾಜಕೀಯ ವಲಯದಲ್ಲಿ ಹಲವು ಲೆಕ್ಕಾಚಾರಗಳು ಗರಿಗೆದರಿದ್ದವು. ಇದರ ಬೆನ್ನಲ್ಲಿಯೇ ಸರ್ಕಾರಕ್ಕೆ ಮುಜುಗರವಾಗುವುದನ್ನು ತಪ್ಪಿಸಲು ಸಚಿವರು ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ವೇಳೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಸದ್ಯಕ್ಕೆ ಯಾವುದೇ ಆತುರದ ನಿರ್ಧಾರ ಕೈಗೊಳ್ಳುವುದು ಬೇಡ, ಹೈಕಮಾಂಡ್ ಜೊತೆ ಚರ್ಚಿಸಿದ ನಂತರವೇ ಅಂತಿಮ ತೀರ್ಮಾನ ತೆಗೆದುಕೊಳ್ಳೋಣ ಎಂದು ಸಚಿವರಿಗೆ ಅಭಯ ನೀಡಿದ್ದಾರೆ ಎನ್ನಲಾಗಿತ್ತು.
'ಬಿಜೆಪಿಯದ್ದು ದಲಿತ ವಿರೋಧಿ ನೀತಿ':
ತಮ್ಮನ್ನು ಟಾರ್ಗೆಟ್ ಮಾಡುತ್ತಿರುವ ಬಿಜೆಪಿಯ ನಡೆ ವಿರುದ್ಧ ಕಿಡಿಕಾರಿದ್ದ ಸಚಿವರು, 'ನನ್ನ ರಾಜೀನಾಮೆ ಕೇಳುತ್ತಿರುವ ಬಿಜೆಪಿ ದಲಿತ ಮತ್ತು ಹಿಂದುಳಿದ ವರ್ಗಗಳ ವಿರೋಧಿ ಎಂಬುದು ಜನರಿಗೆ ಗೊತ್ತಾಗಲಿ' ಎಂದು ಆಪ್ತರ ಬಳಿ ಅಸಮಾಧಾನ ಹೊರಹಾಕಿದ್ದರು ಎನ್ನಲಾಗಿದೆ. ಮತ್ತೊಂದೆಡೆ, ಸರ್ಕಾರದ ವಿರುದ್ಧ ಹೋರಾಟ ರೂಪಿಸುತ್ತಿರುವ ಬಿಜೆಪಿಗೆ ಅದೇ ದಾಟಿಯಲ್ಲಿ ಕೌಂಟರ್ ಕೊಡಲು ಕಾಂಗ್ರೆಸ್ ಪಕ್ಷವು ಬೃಹತ್ ಪ್ಲಾನ್ ರೂಪಿಸುತ್ತಿದೆ. ಈ ಮೂಲಕ ಬಿಜೆಪಿಯ ಹೋರಾಟವನ್ನು 'ದಲಿತ ಮತ್ತು ಎಸ್ಟಿ ವಿರೋಧಿ ನಡೆ' ಎಂದು ಬಿಂಬಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.
ರಾಜ್ಯದಲ್ಲಿ ವಾಲ್ಮೀಕಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಆರೋಪಿಯಾಗಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಈಗಾಗಲೇ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಮತ್ತೊಂದೆಡೆ, ವಾಲ್ಮೀಕಿ ಹಗರಣದ ಕೇಸಿನಲ್ಲಿ ಚಾರ್ಜ್ಶೀಟ್ ಸಿದ್ಧಪಡಿಸಿರುವ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾಇಗಳು ನಾಗೇಂದ್ರ ಅವರನ್ನು ಪ್ರಾಸಿಕ್ಯೂಶನ್ಗೆ ಒಳಪಡಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಪತ್ರವನ್ನು ಬರೆದಿದ್ದಾರೆ. ಇದೀಗ ರಾಜ್ಯಪಾಲರು ಪ್ರಾಸಿಕ್ಯೂಶನ್ಗೆ ಅನುಮತಿ ಕೊಡುವ ಮೊದಲೇ ಮುಜುಗರದಿಂದ ತಪ್ಪಿಸಿಕೊಳ್ಳಲು ಸಚಿವ ನಾಗೇಂದ್ರ ಅವರೇ ರಾಜೀನಾಮೆ ಕೊಡಲಿದ್ದಾರೆ ಎಂಬ ಚರ್ಚೆಗಳು ನಡೆದಿವೆ ಎನ್ನಲಾಗುತ್ತಿದೆ.
ಸಚಿವ ನಾಗೇಂದ್ರ ಸ್ಪಷ್ಟನೆ:
ಆದರೆ, ಮಾಧ್ಯಮಗಳಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ವಿಚಾರಗಳು ಮುನ್ನೆಲೆಗೆ ಬರುತ್ತಿದ್ದಂತೆ ಸ್ವತಃ ಸಚಿವ ನಾಗೇಂದ್ರ ಅವರೇ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವರದಿಗಳಿಗೆ ಅಧಿಕೃತ ಸ್ಪಷ್ಟನೆ ನೀಡುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ತಮ್ಮ ರಾಜೀನಾಮೆ ಕುರಿತಂತೆ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವರದಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿರುವ ಸಚಿವ ಬಿ. ನಾಗೇಂದ್ರ ಅವರು, 'ಇದೀಗ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ವರದಿಗಳು ಎಲ್ಲವೂ ಕೂಡ ಸತ್ಯಕ್ಕೆ ದೂರವಾಗಿವೆ. ಮುಖ್ಯಮಂತ್ರಿಗಳ ಕಚೇರಿಯಿಂದ (CMO) ನನಗೆ ಯಾವುದೇ ಕರೆ ಬಂದಿಲ್ಲ. ಹಾಗೆಯೇ ನನ್ನ ರಾಜೀನಾಮೆ ವಿಚಾರವೂ ಎಲ್ಲಿಯೂ ಚರ್ಚೆಯಾಗಿಲ್ಲ. ಮಾಧ್ಯಮಗಳು ಸಹಕರಿಸಲು ಕೋರುತ್ತೇನೆ' ಎಂದು ಮಾಹಿತಿ ನೀಡಿದ್ದಾರೆ.
ಎಸ್ಟಿ ಪ್ರಾಬಲ್ಯದ ಜಿಲ್ಲೆಗಳಲ್ಲಿ ಜಾಗೃತಿ:
ಸಚಿವ ನಾಗೇಂದ್ರ ಅವರ ನೇತೃತ್ವದಲ್ಲೇ ವಾಲ್ಮೀಕಿ ಮತ್ತು ಎಸ್ಟಿ ಸಮುದಾಯಗಳು ಹೆಚ್ಚಿರುವ ಜಿಲ್ಲೆಗಳಲ್ಲಿ ಬೃಹತ್ ಪಾದಯಾತ್ರೆ ನಡೆಸಿ, ಬಿಜೆಪಿಯ ಹುನ್ನಾರವನ್ನು ಜನಸಾಮಾನ್ಯರಿಗೆ ತಿಳಿಸುವ ಯೋಜನೆಯನ್ನು ಕೈ ನಾಯಕರು ಹಾಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಸಚಿವರ ನೇರ ಸ್ಪಷ್ಟನೆಯೊಂದಿಗೆ ರಾಜೀನಾಮೆ ಗೊಂದಲ ಸದ್ಯಕ್ಕೆ ತಣ್ಣಗಾಗಿದ್ದರೂ, ಮುಂಬರುವ ದಿನಗಳಲ್ಲಿ ಈ ವಿಚಾರ ರಾಜಕೀಯ ಅಖಾಡದಲ್ಲಿ ಮತ್ತಷ್ಟು ಕಾವೇರುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.


