ಕಾಂಗ್ರೆಸ್ನಿಂದ ಆಹ್ವಾನ: ಬಿಜೆಪಿ ತೊರೆಯುವ ಸುಳಿವು ನೀಡಿದ ಸಚಿವ ನಾರಾಯಣಗೌಡ
ಕಾಂಗ್ರೆಸ್ನಿಂದ ಆಹ್ವಾನ ಬಂದಿರೋದು ನಿಜ. ಆದರೆ, ಸೇರ್ಪಡೆ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಆಪ್ತರು ಮತ್ತು ಹಿತೈಷಿಗಳ ಜೊತೆ ಚರ್ಚಿಸಿ ಅಭಿಪ್ರಾಯ ಕೇಳಬೇಕು. ಅವರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಪಕ್ಷ ಸೇರ್ಪಡೆ ಬಗ್ಗೆ ನಿರ್ಧರಿಸುವುದಾಗಿ ಹೇಳಿದ ಸಚಿವ ಕೆ.ಸಿ.ನಾರಾಯಣಗೌಡ.
ಮಂಡ್ಯ(ಮಾ.03): ಜಿಲ್ಲೆಯಲ್ಲಿ ಮೊದಲ ಬಾರಿಗೆ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಕಮಲ ಅರಳಿಸುವುದರೊಂದಿಗೆ ದಾಖಲೆ ಸೃಷ್ಟಿಸಿದ್ದ ಸಚಿವ ಕೆ.ಸಿ.ನಾರಾಯಣಗೌಡರು ಇದೀಗ ಬಿಜೆಪಿ ತೊರೆಯುವ ಸುಳಿವು ನೀಡಿದ್ದಾರೆ.
ಇಷ್ಟು ದಿನ ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಬಿಜೆಪಿ ನನಗೆ ಎಲ್ಲವನ್ನೂ ಕೊಟ್ಟಿದೆ ಎನ್ನುತ್ತಿದ್ದ ನಾರಾಯಣಗೌಡರು ಇದೀಗ, ಕಾಂಗ್ರೆಸ್ನಿಂದ ಆಹ್ವಾನ ಬಂದಿರೋದು ನಿಜ. ಆದರೆ, ಸೇರ್ಪಡೆ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಆಪ್ತರು ಮತ್ತು ಹಿತೈಷಿಗಳ ಜೊತೆ ಚರ್ಚಿಸಿ ಅಭಿಪ್ರಾಯ ಕೇಳಬೇಕು. ಅವರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಪಕ್ಷ ಸೇರ್ಪಡೆ ಬಗ್ಗೆ ನಿರ್ಧರಿಸುವುದಾಗಿ ಹೇಳಿದ್ದಾರೆ.
ಈ ಸಂಬಂಧ ಗುರುವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕೆ.ಆರ್.ಪೇಟೆ ಕಾಂಗ್ರೆಸ್ನಲ್ಲಿ ನಾಯಕತ್ವದ ಕೊರತೆ ಇದೆ. ಅದಕ್ಕಾಗಿ ಪಕ್ಷಕ್ಕೆ ಬರುವಂತೆ ಒತ್ತಾಯಿಸಲಾಗುತ್ತಿದೆ. ಯಾವುದೇ ನಿರ್ಧಾರ ಮಾಡಿದರೂ ಮಾಧ್ಯಮಗಳ ಮೂಲಕವೇ ತಿಳಿಸುತ್ತೇನೆ ಎಂದು ಹೇಳಿದರು. ಈ ಮೂಲಕ ಅವರು ಇದೀಗ ಕಾಂಗ್ರೆಸ್ ಕಡೆ ಹೆಜ್ಜೆ ಹಾಕುವ ಕುರಿತು ಪರೋಕ್ಷ ಸುಳಿವು ನೀಡಿದ್ದಾರೆ.