ಜೀವನದಲ್ಲಿ ಗಳಿಸುವ ಸಂಪತ್ತು ಶಾಶ್ವತವಲ್ಲ. ಆದರೆ ನಾವು ಪಡೆಯುವ ಶಿಕ್ಷಣ ಮತ್ತು ಜ್ಞಾನ ಮಾತ್ರ ನಮ್ಮೊಂದಿಗೆ ಕೊನೆವರೆಗೂ ಇರುವ ಶಾಶ್ವತ ಆಸ್ತಿಯಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟರು.

ಚಿಕ್ಕಮಗಳೂರು (ಮಾ.07): ಜೀವನದಲ್ಲಿ ಗಳಿಸುವ ಸಂಪತ್ತು ಶಾಶ್ವತವಲ್ಲ. ಆದರೆ ನಾವು ಪಡೆಯುವ ಶಿಕ್ಷಣ ಮತ್ತು ಜ್ಞಾನ ಮಾತ್ರ ನಮ್ಮೊಂದಿಗೆ ಕೊನೆವರೆಗೂ ಇರುವ ಶಾಶ್ವತ ಆಸ್ತಿಯಾಗಿದೆ ಎಂದು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟರು.

Add Asianetnews Kannada as a Preferred SourcegooglePreferred

ತಾಲೂಕಿನ ತೇಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ’ಶತಮಾನೋತ್ಸವ ಸಂಭ್ರಮದಲ್ಲಿ ಮಾತನಾಡಿ ತಾವೂ ಕೂಡ ಕೊಡಗಿನ ಇಂತಹದೇ ಒಂದು ಸರ್ಕಾರಿ ಶಾಲೆಯಲ್ಲಿ ಓದಿ ಬಂದವನು. ಇಂದು ನಾನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಲು ಅಂದು ಆ ಶಾಲೆ ನೀಡಿದ ಶಿಕ್ಷಣ ಮತ್ತು ಶಿಸ್ತಿನ ತರಬೇತಿಯೇ ಕಾರಣ ಎಂದು ಹೇಳಿದರು.

ಹಳೆಯ ಕಾಲದ ಶಾಲಾ ವ್ಯವಸ್ಥೆ ನೆನಪಿಸಿಕೊಂಡ ಸಚಿವರು, ನಮ್ಮ ಶಾಲೆಯಲ್ಲಿ ಕಾಫಿ ತೋಟ ಮತ್ತು ಗದ್ದೆಗಳಿದ್ದವು. ನಾವು ವಿದ್ಯಾರ್ಥಿಗಳೇ ಅಲ್ಲಿ ಕೆಲಸ ಮಾಡುತ್ತಿದ್ದೆವು. ಇದರಿಂದ ನಮಗೆ ಯಾವುದೇ ಕೆಲಸ ಮಾಡಿದರೂ ಅದಕ್ಕೊಂದು ಗೌರವವಿದೆ ಎಂಬ ’ಕಾಯಕದ ಗೌರವ’ ಬಾಲ್ಯದಲ್ಲಿಯೇ ಮೈಗೂಡಿತು. ಅಂದಿನ ಶಿಕ್ಷಕರು ಕೇವಲ ಪಾಠವನ್ನಷ್ಟೇ ಅಲ್ಲದೆ, ಜೀವನದ ಮೌಲ್ಯಗಳನ್ನು ಕಲಿಸಿದ್ದಾರೆ ಎಂದು ಸ್ಮರಿಸಿದರು.

ದಾನಿಗಳ ಪಾತ್ರ ಬಹಳ ದೊಡ್ಡದು

ತೇಗೂರು ಶಾಲೆ ಹಳೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಒಗ್ಗೂಡಿ ಶಾಲೆ ಅಭಿವೃದ್ಧಿಪಡಿಸಿರುವುದನ್ನು ಶ್ಲಾಘಿಸಿದ ಸಚಿವರು, ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ದಾನಿಗಳ ಪಾತ್ರ ಬಹಳ ದೊಡ್ಡದು. ಅಭಿವೃದ್ಧಿ ಸಮಿತಿ ಮತ್ತು ದಾನಿಗಳು ಸರ್ಕಾರಿ ಶಾಲೆಯನ್ನು ನಮ್ಮ ಶಾಲೆ ಎಂದು ಭಾವಿಸಿ ಕೆಲಸ ಮಾಡಿದರೆ, ನಮ್ಮ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ ಎಂದು ಕರೆ ನೀಡಿದರು.

ಸರಸ್ವತಿಯನ್ನು ಬಂಡೆ ಮೇಲೆ ಮತ್ತು ಲಕ್ಷ್ಮಿಯನ್ನು ಕಮಲದ ಮೇಲೆ ಕೂರಿಸಿರುವ ಪುರಾಣದ ಉದಾಹರಣೆ ನೀಡಿದ ಅವರು, ಸಂಪತ್ತು ಒಬ್ಬರ ಕೈಯಲ್ಲಿ ಶಾಶ್ವತವಾಗಿರುವುದಿಲ್ಲ. ಅದು ಚಂಚಲ. ಆದರೆ ವಿದ್ಯೆ ಹಂಚಿದಷ್ಟು ಬೆಳೆಯುತ್ತದೆ. ಅದು ನಮ್ಮನ್ನು ಸದಾ ರಕ್ಷಿಸುತ್ತದೆ. ದೇಶದ ಪ್ರಗತಿಯಲ್ಲಿ ಯುವಜನತೆ ಮತ್ತು ಶಿಕ್ಷಕರ ಪಾತ್ರ ಬಹಳ ದೊಡ್ಡದಿದೆ ಎಂದರು.