ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು. ಕಳೆದ 10 ವರ್ಷಗಳಿಂದ ಸುಳ್ಳುಗಳನ್ನೇ ಬಂಡವಾಳ ಮಾಡಿಕೊಂಡಿರುವ ಬಿಜೆಪಿಗೆ ಈ‌ ಸೋಲು ಗ್ಯಾರಂಟಿ ಎಂದು ಭವಿಷ್ಯ ನುಡಿದ ಲಕ್ಷ್ಮೀ ಹೆಬ್ಬಾಳಕರ್‌

ಮೂಡಲಗಿ(ಏ.24): ಬೆಳಗಾವಿ ಹಾಗೂ ಚಿಕ್ಕೋಡಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಬಲ ತುಂಬಿದಂತಾಗುತ್ತದೆ. ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದರು. ಅರಭಾವಿ ವಿಧಾನಸಭಾ ಕ್ಷೇತ್ರದ ದುರದುಂಡಿ, ರಾಜಾಪೂರ, ಶಿವಾಪೂರ, ಖಾನಟ್ಟಿ‌ ಹಾಗೂ ಮುನ್ಯಾಳ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಪರ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಜೊತೆಗೂಡಿ ಮತಯಾಚಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಮಾತ್ರ ಬಡವರ ಏಳಿಗೆ ಸಾಧ್ಯ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಪಕ್ಷ ಕಾಂಗ್ರೆಸ್ ಎಂದರು.

Add Asianetnews Kannada as a Preferred SourcegooglePreferred

ಪಕ್ಷದ ಹುರಿಯಾಳುಗಳಾದ ಚಿಕ್ಕೋಡಿಯಲ್ಲಿ ಪ್ರಿಯಾಂಕಾ, ಬೆಳಗಾವಿಯಲ್ಲಿ ಮೃಣಾಲ್ ಅವರನ್ನು ಗೆಲ್ಲಿಸಿ. ಯುವಕರನ್ನು ಗೆಲ್ಲಿಸುವ ಮೂಲಕ ಇತಿಹಾಸ ನಿರ್ಮಿಸುವ ಅವಕಾಶವಿದೆ. ಅರಭಾವಿ ಭಾಗದಲ್ಲಿ ಬಾಕಿ ಉಳಿದಿರುವ ನೀರಾವರಿ ಯೋಜನೆಗಳನ್ನು‌ ಶೀಘ್ರವೇ ಮುಕ್ತಾಯಗೊಳಿಸುವುದಾಗಿ ಭರವಸೆ ನೀಡಿದರು.

ಮತ್ತೆ ಭಾರತ ಮಾತಾಕೀ ಜೈ ಎಂದ ಲಕ್ಷ್ಮಣ ಸವದಿ; ಬಿಜೆಪಿ ವಿರುದ್ಧ ವಾಗ್ದಾಳಿ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು. ಕಳೆದ 10 ವರ್ಷಗಳಿಂದ ಸುಳ್ಳುಗಳನ್ನೇ ಬಂಡವಾಳ ಮಾಡಿಕೊಂಡಿರುವ ಬಿಜೆಪಿಗೆ ಈ‌ ಸೋಲು ಗ್ಯಾರಂಟಿ ಎಂದು ಭವಿಷ್ಯ ನುಡಿದರು.

ನಿಮ್ಮೆಲ್ಲರ ಸೇವೆ ಮಾಡಲು ಮೃಣಾಲ್‌ ಬಂದಿದ್ದಾನೆ.‌ ಮನೆ ಬಾಗಿಲಿಗೆ ಬಂದು ಸೇವೆ ಮಾಡುತ್ತಾನೆ, ಮೃಣಾಲ್‌ ಹೆಬ್ಬಾಳಕರ್‌ ಅವರಿಗೆ ನಿಮ್ಮ ಮತ ನೀಡಿ, ಜನ ಸೇವೆಗೆ ಅವಕಾಶ ಮಾಡಿಕೊಡಬೇಕು. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ಮುಖಂಡರಾದ ಅರವಿಂದ್ ದಳವಾಯಿ, ಸೊನವಾಲ್ಕರ್‌, ಭೀಮಪ್ಪ ಹಂದಿಗುಂದ, ಸುರೇಶ್ ಮಗದುಮ್ಮ, ರಮೇಶ್ ಉಟಗಿ, ಅಶೋಕ್ ದಳವಾಯಿ, ಪ್ರಕಾಶ್ ಅರಳಿ, ಭರಮಣ್ಣ ಉಪ್ಪಾರ್, ಕಲ್ಲಪ್ಪ ಗೌಡ ಲಕ್ಕಾರ, ಲಕ್ಕಣ್ಣ ಸವಸುದ್ದಿ, ಬಸವರಾಜ ಬೆಳಕೋಡ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಬಿಜೆಪಿಯಿಂದ ದೇಶಭಕ್ತಿ ಪಾಠ ಕಲಿಯಬೇಕಿಲ್ಲ: ಲಕ್ಷ್ಮಣ ಸವದಿ

ಗೃಹಲಕ್ಷ್ಮಿ,‌ ಶಕ್ತಿ ಯೋಜನೆ, ಗೃಹ ಜ್ಯೋತಿ, ಅನ್ನಭಾಗ್ಯ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಮಹಿಳೆಯರಿಗೆ ಸಿದ್ದರಾಮಯ್ಯ ಸಹಾಯ ಹಸ್ತ ಚಾಚಿದ್ದಾರೆ. ಮತಗಳ ಮೂಲಕ ಸರ್ಕಾರವನ್ನು ಬೆಂಬಲಿಸಬೇಕು. ಸರ್ಕಾರ ಎಲ್ಲರ ಪರವಾಗಿ ಕೆಲಸ ಮಾಡುತ್ತಿದ್ದು, ಕಾರ್ಮಿಕರಿಗೆ, ರೈತರಿಗೆ, ದಲಿತರಿಗೆ ಸಾಕಷ್ಟು ಅನುಕೂಲ ಮಾಡಿಕೊಟ್ಟಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 

ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿವೆ. ಲೋಕಸಭೆ ಚುನಾವಣೆ ಮುಗಿದ ಮೇಲೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಈ‌ ಯೋಜನೆಗಳು ನಿರಂತರವಾಗಿ ಸಾಗಲಿವೆ. ಯೋಜನೆಗಳ ವಿರುದ್ಧ ಬಿಜೆಪಿಗರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದ್ದಾರೆ.