ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ ಆಗಲಿದೆ ಎಂದು ಅವರು ಕನಸು ಕಾಣುತ್ತಲೇ ಇರಲಿ. ನಾವು ಮಾತ್ರ ಇದೇ ರೀತಿ ಅಧಿಕಾರದಲ್ಲಿ ಮುಂದುವರಿಯುತ್ತೇವೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.

ನಾಗಮಂಗಲ (ಡಿ.11): ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ ಆಗಲಿದೆ ಎಂದು ಅವರು ಕನಸು ಕಾಣುತ್ತಲೇ ಇರಲಿ. ನಾವು ಮಾತ್ರ ಇದೇ ರೀತಿ ಅಧಿಕಾರದಲ್ಲಿ ಮುಂದುವರಿಯುತ್ತೇವೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು. ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಇಡೀ ಸಚಿವ ಸಂಪುಟ, ಎಲ್ಲ ಶಾಸಕರು ಒಗ್ಗಟ್ಟಾಗಿದ್ದೇವೆ. ಲೋಕಸಭಾ ಚುನಾವಣೆಯಲ್ಲೂ 20 ಸ್ಥಾನಗಳಲ್ಲಿ ಗೆಲ್ಲುತ್ತೇವೆ. 5 ವರ್ಷ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಲೋಕಸಭೆ ಚುನಾವಣೆ ಬಳಿಕ ರಸ್ತೆ ಅಭಿವೃದ್ಧಿಗೆ ಕ್ರಮ: ಮುಂಬರುವ ಲೋಕಸಭಾ ಚುನಾವಣೆ ನಂತರ ಚಾಮರಾಜನಗರ- ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ಶ್ರೀರಘುರಾಮಪುರ ಗೇಟ್ ಮಾರ್ಗವಾಗಿ ಮೇಲುಕೋಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ ಕ್ರಮ ವಹಿಸುವುದಾಗಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ತಾಲೂಕಿನ ಗೊಟಕಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನಾಡಿ ಕೇಂದ್ರ ಮತ್ತು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಕಟ್ಟಡ ಉದ್ಘಾಟಿಸಿ ಮಾತನಾಡಿ, ಗ್ರಾಮದ ಕೆರೆಗೆ ನೀರು ತುಂಬಿಸಲು ಕಾಲುವೆ ನಿರ್ಮಾಣ ಸೇರಿದಂತೆ ಇನ್ನಿತರೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ಜನವರಿ ಅಂತ್ಯಕ್ಕೆ ರಾಜ್ಯದಲ್ಲಿ ಪ್ರವಾಸೋದ್ಯಮದ ಹೊಸ ನೀತಿ: ಸಚಿವ ಎಚ್‌.ಕೆ.ಪಾಟೀಲ್‌

ಕಳೆದ 30 ವರ್ಷಗಳಿಂದ ಕ್ಷೇತ್ರದ ಜನರು ನನ್ನ ಮೇಲೆ ತೋರಿಸುತ್ತಿರುವ ಪ್ರೀತಿ, ವಿಶ್ವಾಸಕ್ಕಿಂತ ನಾನು ಮಾಡುವ ಅಭಿವೃದ್ಧಿ ಕೆಲಸಗಳು ದೊಡ್ಡದಲ್ಲ. ಜನರ ಪ್ರೀತಿ, ನಂಬಿಕೆ, ವಿಶ್ವಾಸಕ್ಕೆ ಯಾವುದೇ ಚ್ಯುತಿ ಬಾರದಂತೆ ತಾಲೂಕು ಮತ್ತು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಹೇಳಿದರು. ಹೈನುಗಾರಿಕೆಯಿಂದ ಗ್ರಾಮೀಣ ಪ್ರದೇಶದ ರೈತ ಕುಟುಂಬಗಳಿಗೆ ಹೆಚ್ಚು ಅನುಕೂಲವಾಗಲಿದೆ. ಗ್ರಾಮೀಣ ಪ್ರದೇಶದ ರೈತ ಕುಟುಂಬಗಳು ಕೃಷಿ ಚಟುವಟಿಕೆ ಜೊತೆಗೆ ಹೈನುಗಾರಿಕೆ ಅವಲಂಬಿಸಿಕೊಂಡರೆ ಶಾಂತಿ ನೆಮ್ಮದಿ ಜೀವನ ನಡೆಸಬಹುದು ಎಂದರು.

ಗ್ರಾಮಸ್ಥರು ಸಂಘಕ್ಕೆ ಗುಣಮಟ್ಟದ ಹಾಲು ಪೂರೈಕೆ ಮಾಡಿದರೆ ಆರ್ಥಿಕವಾಗಿ ಸದೃಢರಾಗಬಹುದು. ಅಲ್ಲದೇ, ಸಂಘವನ್ನೂ ಸಹ ಉತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸಬಹುದು. ಆದ್ದರಿಂದ ಗ್ರಾಮದ ಅಭಿವೃದ್ಧಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟು ಪ್ರದರ್ಶಿಸಬೇಕು ಎಂದರು. ಮನ್ಮುಲ್ ಅಧ್ಯಕ್ಷ ಬೋರೇಗೌಡ ಮಾತನಾಡಿ, 2012ರಲ್ಲಿ ಆರಂಭಗೊಂಡಿರುವ ಈ ಸಂಘಕ್ಕೆ ಗ್ರಾಮಸ್ಥರು ಗುಣಮಟ್ಟದ ಹಾಲು ಪೂರೈಕೆ ಮಾಡಿ ಸಂಘವನ್ನು ಆರ್ಥಿಕವಾಗಿ ಅಭಿವೃದ್ಧಿ ಪಡಿಸಿರುವುದರಿಂದ ಮನ್ಮುನಿಂದ ಯಾವುದೇ ಆರ್ಥಿಕ ಸಹಾಯ ಪಡೆಯದೆ ಸ್ವಂತ ಕಟ್ಟಡ ನಿರ್ಮಿಸಿರುವುದು ಶ್ಲಾಘನೀಯ ಎಂದರು.

ಕೇಂದ್ರ ಸರ್ಕಾರದಿಂದ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌

ಮುಂದೆಯೂ ಸಹ ಗ್ರಾಮಸ್ಥರು ಸಂಘಕ್ಕೆ ಗುಣಮಟ್ಟದ ಹಾಲು ಸರಬರಾಜು ಮಾಡಿ ಮತ್ತಷ್ಟು ಅಭಿವೃದ್ಧಿ ಪಡಿಸಬೇಕು. ಎಲ್ಲ ಸಂಘಗಳು ಇದೇ ರೀತಿ ಮುನ್ನಡೆಸಿದರೆ ಒಕ್ಕೂಟಕ್ಕೂ ಅನುಕೂಲವಾಗುತ್ತದೆ ಎಂದರು. ಸಮಾರಂಭದಲ್ಲಿ ಸಂಘದ ಅಧ್ಯಕ್ಷೆ ಇಂದ್ರಮ್ಮ ಕೃಷ್ಣೇಗೌಡ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಸೇವಕ ಎನ್.ಲಕ್ಷ್ಮೀಕಾಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಗೊಟಕಹಳ್ಳಿ ಕೃಷ್ಣೇಗೌಡ, ಮುಖಂಡರಾದ ಕೊಣನೂರು ಹನುಮಂತು, ಜಯಕುಮಾರ್, ಚಿಣ್ಯ ವೆಂಕಟೇಶ್, ಗ್ರಾಮದ ಮುಖ್ಯಸ್ಥರಾದ ಹುಚ್ಚಪ್ಪ, ಜವರೇಗೌಡ, ಜಯರಾಮು, ನಾಗಣ್ಣ, ಭೀಮಣ್ಣ, ಗೋವಿಂದಯ್ಯ ಸೇರಿದಂತೆ ಗ್ರಾಮದ ಬೆಂಗಳೂರು ನಿವಾಸಿಗಳು ಇದ್ದರು.