ಒಂದೆಡೆ ಕೊರೋನಾ ತಾಂಡವವಾಡುತ್ತಿದ್ರೆ, ಮತ್ತೊಂದೆಡೆ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಪೆನ್‌ ಡ್ರೈವ್ ಸಾಕ್ಷಿಗೆ ಸಚಿವ ಆರ್ ಅಶೋಕ್ ಸವಾಲು ಹಾಕಿದ್ದಾರೆ.

ಬೆಂಗಳೂರು,(ಜು.9): ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಒಂದು ವೇಳೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಬಳಿ ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಕಂದಾಯ ಸಚಿವ ಆರ್.ಅಶೋಕ್ ಸವಾಲು ಹಾಕಿದ್ದಾರೆ.

Add Asianetnews Kannada as a Preferred SourcegooglePreferred

ಇಂದು (ಗುರುವಾರ) ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಖರೀದಿಸಿರುವ ವೈದ್ಯಕೀಯ ಪರಿಕರಗಳಲ್ಲಿ ಹಗರಣ ನಡೆದಿರುವುದಕ್ಕೆ ದಾಖಲೆಗಳು ಸಿದ್ದರಾಮಯ್ಯನವರ ಬಳಿ ಇದ್ದರೆ ಅದನ್ನು ಬಹಿರಂಗಪಡಿಸಲು ತಡವೇಕೆ ಎಂದು ಪ್ರಶ್ನಿಸಿದರು.

ವೈದ್ಯಕೀಯ ಉಪಕರಣ ಮಾಹಿತಿ ನೀಡಲು ಅಂಜಿಕೆ ಯಾಕೆ? ಸರ್ಕಾರಕ್ಕೆ ಬಾಣ ಬಿಟ್ಟ ಸಿದ್ದು

ಖರೀದಿಯಲ್ಲಿ ಒಂದೇ ಒಂದು ನಯಾಪೈಸೆ ಭ್ರಷ್ಟಾಚಾರ ನಡೆದಿಲ್ಲ. ಎಲ್ಲವೂ ಪಾರದರ್ಶಕವಾಗಿಯೇ ನಡೆದಿದೆ. ಸಿದ್ದರಾಮಯ್ಯನವರು ಕೇವಲ ಆರೋಪ ಮಾಡಬೇಕೆಂಬ ಕಾರಣಕ್ಕಾಗಿ ಆಧಾರರಹಿತ ಆರೋಪ ಮಾಡಿದ್ದಾರೆ. ನಮ್ಮ ಪಕ್ಷದ ಮುಖಂಡರಾದ ಮುರುಗೇಶ್ ನಿರಾಣಿ ಬಳಿ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಪೆನ್ ಡ್ರೈವ್ ಇಲ್ಲ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.

ಸಾರ್ವಜನಿಕ ಲೆಕ್ಕ ಸಮಿತಿ ನಡಾವಳಿಯಲ್ಲಿ ಇದನ್ನು ಪ್ರಸ್ತಾಪ ಮಾಡಲಾಗಿದ್ದು, ಸಿದ್ದರಾಮಯ್ಯನವರು ಇದನ್ನು ಟ್ವಿಟರ್‌ನಲ್ಲಿ ಹಾಕಿಕೊಂಡಿದ್ದಾರೆ. ಸ್ವತಃ ನಿರಾಣಿಯವರೇ ಇದನ್ನು ನಿರಾಕರಿಸಿರುವಾಗ ಸಿದ್ದರಾಮಯ್ಯನವರಿಗೆ ಪ್ರಶ್ನಿಸುವ ಅಧಿಕಾರವೇ ಇಲ್ಲ ಎಂದರು.

ನನ್ನ ಪೆನ್‍ನಲ್ಲಿ ಇಂಕ್ ಖಾಲಿಯಾಗಿದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯನವರ ಕಾಲೆಳೆದರು. ಇನ್ನು ಕೊರೋನಾ ನಿಯಂತ್ರಣಕ್ಕಾಗಿ ನಾಳೆ (ಶುಕ್ರವಾರ) ಮುಖ್ಯಮಂತ್ರಿಗಳು ಬೆಂಗಳೂರು ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ. ಅಲ್ಲಿ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ತಿಳಿಸಿದರು.