ಕಾಲ ಕೂಡಿ ಬಂದಾಗ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗ್ತಾರೆ ಎಂದು ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ.

ಮಂಡ್ಯ (ಜು.15): ಕಾಲ ಕೂಡಿ ಬಂದಾಗ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗ್ತಾರೆ ಎಂದು ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, 138 ಶಾಸಕರೂ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಪರ ಇದ್ದಾರೆ. ಕಾಲ ಬಂದಾಗ ಡಿಕೆಶಿ ಕೂಡ ಸಿಎಂ ಆಗ್ತಾರೆ. ಕಾಲ, ಗಳಿಗೆ, ಕೂಡಿ ಬಂದರೆ ಒಳ್ಳೆಯದಾಗಲಿದೆ. ಅವರು ಮುಖ್ಯಮಂತ್ರಿ ಆಗಲೇಬೇಕು, ಆಗ್ತಾರೆ ಎಂದರು. ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತೆ.

Add Asianetnews Kannada as a Preferred SourcegooglePreferred

ಈ ವಿಚಾರವಾಗಿ ಸಿಎಂ ಹಾಗೂ ಡಿಸಿಎಂ ತಮ್ಮ ಸ್ಪಷ್ಟ ನಿಲುವು ತಿಳಿಸಿದ್ದಾರೆ ಎಂದರು. ಆಪರೇಷನ್‌ ಕಮಲ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾವ ಕಾಂಗ್ರೆಸ್ ಶಾಸಕರೂ ಬಿಜೆಪಿ ಸಂಪರ್ಕದಲ್ಲಿಲ್ಲ. ನಾವು ಯಾರ ಸಂಪರ್ಕದಲ್ಲಿಯೂ ಇಲ್ಲ. ನಮ್ಮ ಶಾಸಕರನ್ನು ಖರೀದಿ ಮಾಡಲು ಬಿಜೆಪಿಯವರು ಪ್ರಯತ್ನ ಮಾಡಿ, ವಿಫಲರಾಗಿ ಮನೆಯಲ್ಲಿ ಕುಳಿತಿದ್ದಾರೆ. 100 ಕೋಟಿ ಆಫರ್ ಕೊಟ್ಟರೂ ನಮ್ಮ ಶಾಸಕರು ಬಿಜೆಪಿಗೆ ಹೋಗಲ್ಲ ಎಂದರು.

ಒಕ್ಕಲಿಗರು, ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳು: ದೇಶದಲ್ಲಿ ಓಬಿಸಿಗಳ ಸಂಖ್ಯೆ ವ್ಯಾಪಕವಾಗಿದೆ. ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳೇ ಆಗಿದ್ದು ಸಮಾಜದಲ್ಲಿ ಹಿಂದುಳಿದ ವರ್ಗಗಳ ಜನರನ್ನು ಮುನ್ನೆಲೆಗೆ ತರಬೇಕು ಎಂದು ಓಬಿಸಿ ಸಲಹಾ ಸಮಿತಿ ಸಭೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ರಾಜಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಳುಹಿಸಲು ಅವರಿಗೆ ಪಕ್ಷದ ಓಬಿಸಿ ಸಲಹಾ ಮಂಡಳಿ ಜವಾಬ್ದಾರಿ ನೀಡಿದ್ದಾರೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಉತ್ತರಿಸಿ ಪಕ್ಷದಲ್ಲಿ ಅಲ್ಪಸಂಖ್ಯಾತ, ಪರಿಶಿಷ್ಟ ಸೇರಿದಂತೆ ಇದೇ ರೀತಿ ಅನೇಕ ಘಟಕಗಳಿವೆ.

ಅಲ್ಪಸಂಖ್ಯಾತರಲ್ಲಿ ಜೈನ, ಸಿಖ್ ಧರ್ಮದವರೂ ಸೇರುತ್ತಾರೆ. ಇದನ್ನೆಲ್ಲಾ ಟೀಕೆ ಮಾಡಲಿಲ್ಲ ಎಂದರೆ ಬಿಜೆಪಿಯವರಿಗೆ ಸಮಾಧಾನವಾಗಬೇಕಲ್ಲ‌. ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ ಎಂದರು. ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿರುವ ಕಾರಣಕ್ಕೆ ಪಕ್ಷದ ಓಬಿಸಿ ಸಲಹಾ ಮಂಡಳಿಯ ಸಭೆ ಕೆಪಿಸಿಸಿ ಕಚೇರಿಯಲ್ಲಿಯೇ ನಡೆಯಲಿ ಎಂದು ಸಲಹೆ ನೀಡಿದ್ದೆ, ಅದರಂತೆ ಇಲ್ಲಿ ಸಭೆ ಏರ್ಪಡಿಸಲಾಗಿದೆ. ರಾಷ್ಟ್ರಮಟ್ಟದ‌ ಸುಮಾರು 40ಕ್ಕೂ ಹೆಚ್ಚು ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ " ಎಂದು ತಿಳಿಸಿದರು.