ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ನಾಲ್ಕು ಗುಂಪುಗಳಾಗಿ ಶಾಸಕರು, ಸಂಸದರು ಕಚ್ಚಾಡುತ್ತಿದ್ದಾರೆ. ಸರ್ಕಾರಿ ಕಚೇರಿಗಳು ಸಿದ್ದರಾಮಯ್ಯನವರ ವಸೂಲಿ ಕೇಂದ್ರಗಳಾಗಿವೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಆರೋಪಿಸಿದ್ದಾರೆ. 

ದಾವಣಗೆರೆ (ಜುಲೈ 9) : ಮುಖ್ಯಮಂತ್ರಿ ಆಗುವುದಕ್ಕೆಂದೇ ಕಾಂಗ್ರೆಸ್ ಪಕ್ಷದಲ್ಲಿ 4 ಗುಂಪುಗಳಾಗಿ ಶಾಸಕರು, ಸಂಸದರು ಪರಸ್ಪರ ಕಚ್ಚಾಡುತ್ತಿದ್ದಾರೆ. ಸರ್ಕಾರಿ ಕಚೇರಿಗಳು ಸಿದ್ದರಾಮಯ್ಯನ ವಸೂಲಿ ಕೇಂದ್ರಗಳಾಗಿವೆ ಎಂದು ಚಿತ್ರದುರ್ಗ ಬಿಜೆಪಿ ಸಂಸದ ಗೋವಿಂದ ಕಾರಜೋಳ ಹರಿಹಾಯ್ದರು.

Add Asianetnews Kannada as a Preferred SourcegooglePreferred

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಸೇವೆ, ರಾಜ್ಯದ ಅಭಿವೃದ್ಧಿ ಮಾಡಬೇಕೆಂಬುದೇ ಕಾಂಗ್ರೆಸ್‌ನವರಲ್ಲಿ ಇಲ್ಲ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಜನರಿಗೆ ಮೋಸ ಮಾಡಿ, ಜನರ ಮನಸ್ಸನ್ನು ಕದ್ದು ಅಧಿಕಾರಕ್ಕೆ ಬಂದವರು ಎಂದು ದೂರಿದರು.

ಸರ್ಕಾರಿ ಕಚೇರಿಗಳನ್ನೇ ವಸೂಲಿ ಕೇಂದ್ರಗಳನ್ನಾಗಿ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ಹಣ ವಸೂಲಿಗೆ ರಿಟೇಲ್ ಶಾಪ್ ತರಹ ಅವುಗಳಲ್ಲಿ ಕೆಲಸ ಮಾಡಿಸುತ್ತಿದ್ದಾರೆ. ಭ್ರಷ್ಟಾಚಾರದ ರಿಟೇಲ್ ಶಾಪ್ ಇಟ್ಟಿರುವ ಸಿದ್ದರಾಮಯ್ಯ ಸರ್ಕಾರದಿಂದ ಜನ ಭ್ರಮನಿರಸನರಾಗಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಎಐಸಿಸಿ ಮುಖಂಡ ಸುರ್ಜೀವಾಲಾ ಕರ್ನಾಟಕಕ್ಕೆ ಬಂದು ಕಾಂಗ್ರೆಸ್‌ನ ಸಚಿವರು, ಶಾಸಕರು ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಸಿದ್ದರಾಮಯ್ಯಗೆ ಎಐಸಿಸಿ ಒಬಿಸಿ ಕಮಿಟಿ ಅಧ್ಯಕ್ಷರಾಗಿ ಮಾಡಿರುವುದು ಪ್ರಮೋಷನ್ ಆಗಿ ಅಲ್ಲ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯಗೆ ಕಿತ್ತು ಹಾಕಲು ಅಂತಹ ಹುದ್ದೆ ನೀಡಿದ್ದಾರಷ್ಟೆ ಎಂದು ಗೋವಿಂದ ಕಾರಜೋಳ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.