Asianet Suvarna News Asianet Suvarna News

ಸಿಎಂ ಸಿದ್ದರಾಮಯ್ಯ ಮುಖವಾಡ ಕಳಚಿದೆ, ರಾಜೀನಾಮೆ ಗ್ಯಾರಂಟಿ: ವಿಜಯೇಂದ್ರ ಭವಿಷ್ಯ

ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಾಜವಾದಿ ಮುಖವಾಡ ಕಳಚಿ ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡಿದೆ. ಪರಿಣಾಮ ತಮ್ಮ ಸ್ಥಾನಕ್ಕೆ ಅವರು ರಾಜೀನಾಮೆ ಕೊಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. 
 

Muda Case CM Siddaramaiah unmasked resignation guaranteed Says BY Vijayendra gvd
Author
First Published Aug 25, 2024, 11:42 PM IST | Last Updated Aug 25, 2024, 11:42 PM IST

ಧಾರವಾಡ (ಆ.25): ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಾಜವಾದಿ ಮುಖವಾಡ ಕಳಚಿ ಭ್ರಷ್ಟಾಚಾರದ ಕಳಂಕ ಮೆತ್ತಿಕೊಂಡಿದೆ. ಪರಿಣಾಮ ತಮ್ಮ ಸ್ಥಾನಕ್ಕೆ ಅವರು ರಾಜೀನಾಮೆ ಕೊಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ‘ಸಿದ್ದರಾಮಯ್ಯ ವಿರುದ್ಧ ಹಗರಣಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಮಟ್ಟದಲ್ಲೇ ಚರ್ಚೆ ನಡೆಯುತ್ತಿದೆ. ಅವರ ಪಕ್ಷದ ಹೈಕಮಾಂಡ್‌ ಸಿಎಂ ಬದಲಾವಣೆ ಬಗ್ಗೆ ಆಲೋಚಿಸುತ್ತಿದೆ. 

ಹೀಗಾಗಿ, ಸಿದ್ದರಾಮಯ್ಯನವರು ಶಾಸಕರ ಸಭೆ ಮಾಡಿ ವಿಶ್ವಾಸಕ್ಕೆ ತೆಗೆದುಕೊಳ್ಳುವ ಯತ್ನ ನಡೆಸಿದ್ದಾರೆ. ಈ ಕಾರಣದಿಂದಲೇ ಅವರು ದೆಹಲಿ ನಾಯಕರ ಭೇಟಿಗೆ ಹೋಗಿದ್ದಾರೆ’ ಎಂದರು. ಈ ಮಧ್ಯೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ತಾವು ಬಂಡೆಗಲ್ಲಿನಂತೆ ಯಾವಾಗಲೂ ಸಿದ್ದು ಹಿಂದೆ ಇರುವುದಾಗಿ ಪದೇ, ಪದೇ ಹೇಳುತ್ತಿದ್ದಾರೆ. ಇವೆಲ್ಲವೂ ಸಿಎಂ ಬದಲಾವಣೆ ವಿಚಾರಕ್ಕೆ ಪುಷ್ಠಿ ನೀಡಿವೆ. ಹೀಗಾಗಿ, ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಖಚಿತ ಎಂದು ಭವಿಷ್ಯ ನುಡಿದರು.

ತುಂಡಾದ ಕೈಯನ್ನು ಯಶಸ್ವಿಯಾಗಿ ಮರುಜೋಡಿಸಿದ ‘ಸರ್ಜಿ’ ವೈದ್ಯರು: ಎರಡೂ ಕೈಗಳಿಗೆ ಮರುಜೀವ

ಮುಡಾ ಹಗರಣ ಕೇವಲ 14 ನಿವೇಶನಕ್ಕೆ ಸೀಮಿತವಾದದ್ದಲ್ಲ. ₹5000 ಕೋಟಿಗೂ ಮೀರಿದ ಸಾವಿರಾರು ನಿವೇಶನಗಳ ಬಹುದೊಡ್ಡ ಹಗರಣವಾಗಿದೆ. ಸಿಎಂ ತವರು ಜಿಲ್ಲೆಯಲ್ಲಿ ಬಡವರನ್ನು ತಲುಪಬೇಕಿದ್ಧ ₹5000 ಕೋಟಿ ಬೆಲೆ ಬಾಳುವ ಸಾವಿರಾರು ಮುಡಾ ನಿವೇಶನಗಳು ರಿಯಲ್ ಎಸ್ಟೇಟ್ ಮಾಫಿಯಾ ಮತ್ತು ಕಾಂಗ್ರೆಸ್ ನಾಯಕರ ಪಾಲಾಗಿವೆ. ಸಿದ್ದರಾಮಯ್ಯನವರು ಪತ್ನಿ ಹೆಸರಿನಲ್ಲಿ ಕಾನೂನು ಬಾಹಿರವಾಗಿ 14 ನಿವೇಶನ ಪಡೆದಿದ್ದಾರೆ. ಸಿಎಂ ಆದ 18 ತಿಂಗಳಲ್ಲಿ ಇದೊಂದು ಬಹುದೊಡ್ಡ ಹಗರಣವಾಗಿದೆ. ಹಾಗಾಗಿ, ಮುಡಾ ಹಗರಣದ ಬಗ್ಗೆ ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸುತ್ತಲೇ ಬಂದಿದೆ ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದಲ್ಲಿ ಎಸ್‌ಐಟಿ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಮಾಜಿ ಸಚಿವ ನಾಗೇಂದ್ರ ಮತ್ತು ಬಸವರಾಜ ದದ್ದಲ್ ಹೆಸರಿಲ್ಲ. ಹೀಗಾಗಿ, ವಾಲ್ಮೀಕಿ ಮತ್ತು ಮುಡಾ ಹಗರಣ ಎರಡರಲ್ಲೂ ಎಸ್‌ಐಟಿ ತನಿಖೆಯಿಂದ ನ್ಯಾಯ ನಿರೀಕ್ಷೆ ಅಸಾಧ್ಯ. ಎರಡೂ ಪ್ರಕರಣಗಳ ತನಿಖೆ ಸಿಬಿಐನಿಂದಲೇ ಆಗಲಿ ಎಂದು ಒತ್ತಾಯಿಸಿದರು.

ಬೆದರಿಕೆಗೆ ಹೆದರಲ್ಲ: ಸಿಎಂ ಅವರು ತಮ್ಮ ಮೇಲಿನ ಮುಡಾ ಹಗರಣದಿಂದ ನುಣುಚಿಕೊಳ್ಳಲು ಬಿ.ಎಸ್.ಯಡಿಯೂರಪ್ಪ ಹಾಗೂ ನಮ್ಮ ಕುಟುಂಬದ ವಿರುದ್ಧದ 15ಕ್ಕೂ ಹೆಚ್ಚು ಪ್ರಕರಣಗಳ ದಾಖಲೆ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದರೆ, ಎಲ್ಲ ಪ್ರಕರಣಗಳಲ್ಲೂ ನ್ಯಾಯಾಲಯದಿಂದ ನಮಗೆ ನ್ಯಾಯ ಸಿಕ್ಕಿದೆ. ಇಂಥ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ. ಈಗ ಕಾಂಗ್ರೆಸ್‌ನವರು ಬಿಜೆಪಿ ನಾಯಕರು ಹಾಗೂ ನನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದು, ತಾಕತ್ತಿದ್ದರೆ ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.

ಗ್ರಾಮೀಣ ಪ್ರದೇಶಗಳಲ್ಲೂ ಕೈಗಾರಿಕೆ ಸ್ಥಾಪಿಸಿದರೆ ಬಡವರ ಮಕ್ಕಳಿಗೆ ಉಪಯೋಗ: ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಕುಮಾರಸ್ವಾಮಿ ಹಾಗೂ ಜೆಡಿಎಸ್‌ನ್ನು ಬಿಜೆಪಿಯೇ ಮುಗಿಸುತ್ತದೆ ಎಂಬ ಸಚಿವ ದಿನೇಶ ಗುಂಡೂರಾವ್ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾರು, ಯಾರನ್ನು ಮುಗಿಸುತ್ತಾರೆ ಎಂಬುದು ಮುಂಬರುವ ದಿನಗಳಲ್ಲಿ ಗೊತ್ತಾಗಲಿದೆ ಎಂದರು. ಸಿಎಂ ಹಾಗೂ ಡಿಸಿಎಂ ಅಧಿಕಾರಕ್ಕೆ ಬಂದು ಇಷ್ಟು ದಿನಗಳಾದರೂ ಉತ್ತರ ಕರ್ನಾಟಕದತ್ತ ಮುಖ ಮಾಡಿಲ್ಲ. ಇಲ್ಲಿಯ ಜನರ ಸಮಸ್ಯೆಗೆ ಸ್ಪಂದಿಸಿಲ್ಲ. ಸರ್ಕಾರಕ್ಕೆ ಉತ್ತರ ಕರ್ನಾಟಕದ ಬಗ್ಗೆ ಸ್ವಲ್ಪವೂ ಕಾಳಜಿ ಇಲ್ಲ. ಹಿಂದೆ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿಯವರು ಈ ಭಾಗಕ್ಕೆ ಹಲವಾರು ನೀರಾವರಿ ಯೋಜನೆ ತಂದಿದ್ದರು. ಅದಕ್ಕೂ ಇವರು ಕಲ್ಲು ಹಾಕಿದ್ದಾರೆ ಎಂದು ಆರೋಪಿಸಿದರು.

Latest Videos
Follow Us:
Download App:
  • android
  • ios